ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರದ ಆಡಳತ ಜನಪ್ರಿಯ: ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನ.ಶ್ರೀನಿವಾಸ್
.jpg)
ಸಾಗರ, ಜೂ.3 : ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರ್ಕಾರ ಕಳೆದ ನಾಲ್ಕು ವರ್ಷದಲ್ಲಿ ನೀಡಿದ ಆಡಳಿತ ಅತ್ಯಂತ ಜನಪ್ರಿಯವಾಗಿದೆ. ಅನ್ನಭಾಗ್ಯ ಯೋಜನೆಯಿಂದ ಹಿಡಿದು, ಶುಕ್ರವಾರ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಘೋಷಣೆ ಮಾಡಿದ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದವರಿಗೆ ಉಚಿತ ಬಸ್ ಪಾಸ್ ವ್ಯವಸ್ಥೆಯವರೆಗೂ ಎಲ್ಲ ವರ್ಗದ ಹಿತಕಾಯುವ ನಿಟ್ಟಿನಲ್ಲಿ ಕಾಂಗ್ರೆಸ್ ಸರ್ಕಾರ ನಿರ್ವಹಿಸಿದ ರೀತಿ ಜನಾನುರಾಗಿಯಾದದ್ದು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ತೀ.ನ.ಶ್ರೀನಿವಾಸ್ ಅಭಿಪ್ರಾಯಿಸಿದ್ದಾರೆ.
ಶನಿವಾರ ಕರೆಯಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಅಂಗನವಾಡಿಯ 3 ವರ್ಷದೊಳಗಿನ ಮಕ್ಕಳಿಗೆ, 16 ವರ್ಷದೊಳಗಿನ ಬಾಲಕಿಯರಿಗೆ ಉಚಿತ ಮೊಟ್ಟೆ ವಿತರಣೆ, ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ಉಚಿತ ಲ್ಯಾಪ್ಟಾಪ್ ಸೇರಿದಂತೆ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಸರ್ವತೋಮುಖ ಅಭಿವೃದ್ದಿಗೆ ಕಾಂಗ್ರೆಸ್ ಸರ್ಕಾರ ತನಗಿರುವ ಕಾಳಜಿಯನ್ನು ಪ್ರದರ್ಶಿಸಿದೆ ಎಂದು ತಿಳಿಸಿದರು.
ಹಿಂದಿನ ಬಿಜೆಪಿ ಸರ್ಕಾರ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ವರ್ಗದ ಏಳಿಗೆಗೆ ನೀಡಿದ ಕೊಡಗೆ ಅತ್ಯಲ್ಪವಾಗಿದೆ. 2008ರಿಂದ 2013ರವರೆಗೆ ಅಧಿಕಾರ ನಡೆಸಿದ ರಾಜ್ಯ ಸರ್ಕಾರ ಪರಿಶಿಷ್ಟ ವರ್ಗದ ಅಭಿವೃದ್ದಿಗೆ ನೀಡಿದ ಅನುದಾನ 26261 ಕೋಟಿ ರೂ. ಆದರೆ 2013ರಿಂದ 2017ರವರೆಗಿನ ಕಾಂಗ್ರೆಸ್ ಸರ್ಕಾರದ ಅವಧಿಯಲ್ಲಿ ಪರಿಶಿಷ್ಟ ವರ್ಗದ ಅಭಿವೃದ್ದಿಗೆ ಮೀಸಲಿಟ್ಟ ಹಣ 60350 ಕೋಟಿ ರೂಪಾಯಿಯಾಗಿದೆ. ಇದರಲ್ಲಿ ಈತನಕ 47186 ಕೋಟಿ ರೂ. ವಿದ್ಯಾಭ್ಯಾಸ, ಸ್ವಯಂ ಉದ್ಯೋಗ, ಹೈನುಗಾರಿಕೆ, ಕೃಷಿ, ವಸತಿ ನಿಲಯ, ಉನ್ನತ ವಿದ್ಯಾಭ್ಯಾಸಕ್ಕೆ ಸಹಾಯಧನ ಇನ್ನಿತರೆಗೆ ನೀಡಲಾಗಿದೆ ಎಂದು ತಿಳಿಸಿದರು.
ಜಾತಿಗಣತಿ ವರದಿಯನ್ನು ಬಿಡುಗಡೆ ಮಾಡಲು ಮುಂದಾಗಿರುವ ರಾಜ್ಯ ಸರ್ಕಾರದ ವಿರುದ್ದ ವರದಿ ಬಿಡುಗಡೆ ಮಾಡಿದರೆ ಪ್ರತಿಭಟನೆ ಮಾಡುತ್ತೇನೆ ಎಂದು ಬೆದರಿಕೆ ಹಾಕುತ್ತಿರುವ ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನಿಜವಾದ ಹಿಂದುಳಿದ ವರ್ಗದ ವಿರೋಧಿಯಾಗಿದ್ದಾರೆ. ಅಧಿಕಾರದ ಬರ ಎದುರಿಸುತ್ತಿರುವ ಯಡಿಯೂರಪ್ಪ ಮತ್ತು ಟೀಂ ಬರ ಪ್ರವಾಸ ಹೆಸರಿನಲ್ಲಿ ಜನರನ್ನು ದಿಕ್ಕು ತಪ್ಪಿಸುವ ಕೆಲಸ ಮಾಡುತ್ತಿದೆ ಎಂದು ದೂರಿದರು.
ಕೇಂದ್ರ ಸರ್ಕಾರ ಮೂರು ವರ್ಷದಲ್ಲಿ ಮಾಡಿರುವ ಸಾಧನೆ ಶೂನ್ಯವಾಗಿದೆ. ನರೇಂದ್ರ ಮೋದಿಯವರು ಪ್ರಧಾನಿಯಾದರೆ ದೇಶವನ್ನು ಸರ್ವಾಂಗೀಣ ಅಭಿವೃದ್ದಿ ಮಾಡುತ್ತೇವೆ ಎಂದು ಬಿಜೆಪಿಯವರು ನೀಡಿದ ಭರವಸೆ ಹುಸಿಯಾಗಿದೆ. ಸ್ವಿಸ್ ಬ್ಯಾಂಕ್ಬಿಂದ ಹಣ ತರುವುದು, ಪ್ರತಿ ಭಾರತೀಯನ ಖಾತೆಗೆ 15 ಲಕ್ಷ ರೂ. ಠೇವಣಿ ಇಡುವುದು, 2 ಕೋಟಿ ಉದ್ಯೋಗ ಸೃಷ್ಟಿ, ರೈತರ ಆದಾಯ ದುಪ್ಪಟ್ಟು ಮಾಡುವ ಯಾವ ಆಶ್ವಾಸನೆಯನ್ನು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಈಡೇರಿಸಿಲ್ಲ. ನೋಟ್ ಬ್ಯಾನ್ನಿಂದ ಇರುವ ಉದ್ಯೋಗವನ್ನು ಕಳೆದುಕೊಳ್ಳುವ ಸ್ಥಿತಿ ನಿರ್ಮಾಣ ಮಾಡಿರುವುದೆ ಮೋದಿ ಸರ್ಕಾರದ ಸಾಧನೆಯಾಗಿದೆ. ರೈತರ ಸ್ಥಿತಿ ಸುಧಾರಿಸಿಲ್ಲ, ಕಾರ್ಮಿಕ ನೀತಿಯನ್ನು ಈತನಕ ಪ್ರಕಟಿಸಿಲ್ಲ. ಕೇಂದ್ರದ ಈ ಎಲ್ಲ ವೈಫಲ್ಯಗಳ ವಿರುದ್ದ ಕಾಂಗ್ರೇಸ್ ಶೀಘ್ರದಲ್ಲಿಯೆ ಪ್ರತಿಭಟನೆ ಹಮ್ಮಿಕೊಳ್ಳಲಿದೆ ಎಂದು ಎಚ್ಚರಿಕೆ ನೀಡಿದರು.
ಗೋಹತ್ಯಾ ನಿಷೇದ ಕಾಯ್ದೆಯನ್ನು ನರೇಂದ್ರ ಮೋದಿಯವರು ಘೋಷಣೆ ಮಾಡಲು ಸುತ್ತೋಲೆ ಹೊರಡಿಸಿರುವುದು ಹಾಸ್ಯಾಸ್ಪದವಾಗಿದೆ. ಯುಪಿಎ ಸರ್ಕಾರದ ಅವಧಿಯಲ್ಲಿ ಗೋಮಾಂಸ ರಫ್ತಿನಿಂದ 14ಸಾವಿರ ಕೋಟಿ ರೂ. ಸಂಗ್ರಹವಾಗಿದ್ದರೆ, ಮೋದಿ ನೇತೃತ್ವದ ಎನ್.ಡಿ.ಎ. ಸರ್ಕಾರದ ಅವಧಿಯಲ್ಲಿ ಈತನಕ ಗೋಮಾಂಸ ರಫ್ತಿನಿಂದ 27ಸಾವಿರ ಕೋಟಿ ರೂ. ಹಣ ಬಂದಿದೆ. ನರೇಂದ್ರ ಮೋದಿ ಮತ್ತು ಅಮಿತ್ ಷಾ ಸುತ್ತಮುತ್ತಲು ಇರುವವರೆ ಗೋಮಾಂಸ ಕಸಾಯಿಖಾನೆ ನಡೆಸುತ್ತಿದ್ದಾರೆ. ಜನರ ಭಾವನೆ ಕೆರಳಿಸುವ ಕೆಲಸವನ್ನು ಬಿಜೆಪಿ ಮಾಡುತ್ತಿರುವುದು ಖಂಡನೀಯ ಎಂದು ದೂರಿದರು.
ಹಿಂದೆ ಬಿಜೆಪಿಯಿಂದ ಹೊರಬಂದು ಕೆಜೆಪಿ ಕಟ್ಟಿ, ಬಿಜೆಪಿಯನ್ನು ಸರ್ವನಾಶ ಮಾಡುತ್ತೇವೆ ಎಂದು ಅಖಾಡಕ್ಕೆ ಇಳಿದಿದ್ದ ಯಡಿಯೂರಪ್ಪ ಅವರು ಪುನಃ ಬಿಜೆಪಿಗೆ ಸೇರಿ ಕಾಂಗ್ರೆಸ್ ಮುಕ್ತ ಕರ್ನಾಟಕ ಮಾಡುವುದಾಗಿ ಹೇಳಿಕೊಂಡು ತಿರುಗುತ್ತಿದ್ದಾರೆ. ಕೇಂದ್ರ ಸರ್ಕಾರದ ವ್ಯಾಪ್ತಿಗೆ ಬರುವ ಆದಾಯ ತೆರಿಗೆ ಇಲಾಖೆ, ಸಿಬಿಐ ತಮ್ಮ ಕೈನಲ್ಲಿ ಇರಿಸಿಕೊಂಡು ಕಾಂಗ್ರೆಸ್ ಮುಖಂಡರ ಮೇಲೆ ದಾಳಿ ನಡೆಸುತ್ತಿರುವುದು ಖಂಡನೀಯ. ಯಡಿಯೂರಪ್ಪ ಮತ್ತು ಈಶ್ವರಪ್ಪ ಅಕ್ರಮವಾಗಿ ನೂರಾರು ಕೋಟಿ ರೂ. ಆಸ್ತಿ ಸಂಗ್ರಹಿಸಿದ್ದು, ಇವರ ಮೇಲೆ ಆದಾಯ ತೆರಿಗೆ ಇಲಾಖೆ ಅಧಿಕಾರಿಗಳು ದಾಳಿ ನಡೆಸಿದರೆ ಸತ್ಯಾಂಶ ಹೊರಗೆ ಬರಲಿದೆ ಎಂದು ತಿಳಿಸಿದರು.
ಗೋಷ್ಟಿಯಲ್ಲಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಲ್.ಟಿ.ತಿಮ್ಮಪ್ಪ, ಪ್ರಧಾನ ಕಾರ್ಯದರ್ಶಿ ಗಣಪತಿ ಹೆನಗೆರೆ, ಜಿಲ್ಲಾ ಉಪಾಧ್ಯಕ್ಷ ಸತ್ಯನಾರಾಯಣ್, ಜಿಲ್ಲಾ ಕಾರ್ಯದರ್ಶಿ ಶ್ರೀಧರ ನವಲೆ, ಮಹಾಬಲ ಕೌತಿ, ಖಂಡಿಕಾ ಪ್ರಭಾಕರ್ ಉಪಸ್ಥಿತರಿದ್ದರು.







