ನಮ್ಮೂರ ಶಾಲೆಗೆ ನಮ್ಮ ಯುವಜನರು: ಅರ್ಜಿ ಅಹ್ವಾನ
ಉಡುಪಿ, ಜೂ.3: ‘ನಮ್ಮೂರ ಶಾಲೆಗೆ ನಮ್ಮ ಯುವಜನರು’ ಯೋಜನೆ ಅಡಿಯಲ್ಲಿ ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಿಕ್ಷಣ ಇಲಾಖೆ ಹಾಗೂ ಮಾನ್ಯತೆ ಪಡೆದಿರುವ ಕ್ರೀಡಾ ಸಂಸ್ಥೆಗಳು ಆಯೋಜಿಸುವ ತಾಲೂಕು, ಜಿಲ್ಲೆ, ರಾಜ್ಯ ಮತ್ತು ರಾಷ್ಟ್ರಮಟ್ಟದ ಕ್ರೀಡಾಕೂಟಗಳಲ್ಲಿ ಉತ್ತಮ ಸಾಧನೆ ತೋರುವ ಕ್ರೀಡಾಪಟುಗಳನ್ನು ಹೊಂದಿರುವ ಸರಕಾರಿ ಶಾಲೆಗಳನ್ನು ಗುರುತಿಸಿ ಆಯ್ಕೆಯಾದ ಶಾಲೆಗೆ ಒಂದು ಲಕ್ಷ ರೂ. ಪ್ರೋತ್ಸಾಹಧನ ನೀಡಲಾಗುವುದು.
ಈ ಅನುದಾನದಲ್ಲಿ 10,000 ರೂ.ವನ್ನು ಆಯ್ಕೆಯಾದ ಶಾಲೆಯ ದೈಹಿಕ ಶಿಕ್ಷಕರಿಗೆ ಹಾಗೂ 90,000 ರೂ.ವನ್ನು ಶಾಲೆಯ ಎಸ್ಡಿಎಂಸಿಗೆ ಅಗತ್ಯ ಕ್ರೀಡಾ ಸಾಮಗ್ರಿ ಖರೀದಿಗಾಗಿ ನೀಡಲಾಗುವುದು. ಇದಕ್ಕಾಗಿ ಹಿಂದಿನ ಸಾಲಿನಲ್ಲಿ ಕ್ರೀಡೆಯಲ್ಲಿ ಅತ್ಯುತ್ತಮ ಸಾಧನೆ ತೋರಿರುವ ಹೆಚ್ಚಿನ ಸಂಖ್ಯೆಯ ಕ್ರೀಡಾಪಟುಗಳನ್ನು ಹೊಂದಿರುವ ಸರಕಾರಿ ಶಾಲೆಗಳು ಪ್ರಸ್ತಾವನೆಯನ್ನು ಕಳುಹಿಸಬಹುದಾಗಿದೆ.
ಪ್ರಸ್ತಾವನೆಯನ್ನು ಜೂ.10ರೊಳಗೆ ಸಹಾಯಕ ನಿರ್ದೇಶಕರು, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಕಚೇರಿಗೆ ಸಲ್ಲಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಪ್ರಕಟಣೆ ತಿಳಿಸಿದೆ.