ಬಾಲಕಿ ಆತ್ಮಹತ್ಯೆ ಯತ್ನ ಪ್ರಕರಣ: ನ್ಯಾಯಾಲಯಕ್ಕೆ ವೈದ್ಯಕೀಯ ವರದಿ ಸಲ್ಲಿಕೆ
ಉಡುಪಿ, ಜೂ.15: ಶೇಡಿಮನೆ ಗ್ರಾಮದ ಅರಸಮ್ಮಕಾನುವಿನ ಅಪ್ರಾಪ್ತ ಬಾಲಕಿಯ ಆತ್ಮಹತ್ಯೆ ಯತ್ನ ಪ್ರಕರಣದ ಆರೋಪಿಗಳ ಜಾಮೀನು ವಿಚಾರಕ್ಕೆ ಸಂಬಂಧಿಸಿದಂತೆ ಪ್ರಕರಣದ ತನಿಖಾಧಿಕಾರಿಗಳು ಮಣಿಪಾಲ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಆರೋಗ್ಯ ಸ್ಥಿತಿಯ ಕುರಿತ ವೈದ್ಯಕೀಯ ವರದಿಯನ್ನು ಇಂದು ಉಡುಪಿ ಜಿಲ್ಲಾ ಪೋಕ್ಸೊ ವಿಶೇಷ ನ್ಯಾಯಾಲಯಕ್ಕೆ ಸಲ್ಲಿಸಿದರು.
ವರದಿಯನ್ನು ಪರಿಶೀಲಿಸಿದ ನ್ಯಾಯಾಧೀಶರು ಪ್ರಕರಣದ ಮುಂದಿನ ವಿಚಾರಣೆಯನ್ನು ಜೂ.17ಕ್ಕೆ ಮುಂದೂಡಿ ಆದೇಶ ನೀಡಿದರು. ಈ ಸಂದರ್ಭ ವಿಶೇಷ ಸರಕಾರಿ ಅಭಿಯೋಜಕ(ಪೊಕ್ಸೊ) ವಿಜಯ ವಾಸು ಪೂಜಾರಿ, ಆರೋಪಿಗಳ ಪರ ವಕೀಲರು ಹಾಜರಿದ್ದರು. ಈಗಾಗಲೇ ಬಂಧಿತನಾಗಿರುವ ಆರೋಪಿ ವಿನಯ ಶೆಟ್ಟಿ ಜಾಮೀನಿಗಾಗಿ ಮತ್ತು ತಲೆಮರೆಸಿಕೊಂಡಿರುವ ಆರೋಪಿ ಪ್ರಶಾಂತ್ ಹೆಗ್ಡೆ ನಿರೀಕ್ಷಣಾ ಜಾಮೀನಿಗಾಗಿ ನ್ಯಾಯಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ.
Next Story





