ದೇವರಾಜ ಅರಸು ಜನ್ಮದಿನ ಅದ್ದೂರಿ ಆಚರಣೆಗೆ ತೀರ್ಮಾನ

ಚಾಮರಾಜನಗರ, ಆ. 4: ಹಿಂದುಳಿದ ವರ್ಗಗಳ ಹರಿಕಾರ ಮಾಜಿ ಮುಖ್ಯಮಂತ್ರಿ ಡಿ. ದೇವರಾಜ ಅರಸು ಅವರ ಜನ್ಮ ದಿನಾಚರಣೆ ಕಾರ್ಯಕ್ರಮವನ್ನು ಜಿಲ್ಲಾಡಳಿತ ಹಾಗೂ ವಿವಿಧ ಸಂಘಟನೆ, ಸಮುದಾಯಗಳ ಸಹಕಾರದೊಂದಿಗೆ ಆಗಸ್ಟ್ 20ರಂದು ನಗರದಲ್ಲಿ ಅದ್ದೂರಿಯಾಗಿ ಹಮ್ಮಿಕೊಳ್ಳಲು ತೀರ್ಮಾನಿಸಲಾಯಿತು.
ನಗರದ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಇಂದು ಜಿಲ್ಲಾಧಿಕಾರಿ ಡಾ. ಕೆ. ಹರೀಶ್ಕುಮಾರ್ ಅವರ ಅಧ್ಯಕ್ಷತೆಯಲ್ಲಿ ಅರಸು ಜನ್ಮ ದಿನಾಚರಣೆ ಸಂಬಂಧ ನಡೆದ ಪೂರ್ವಭಾವಿ ಸಭೆಯಲ್ಲಿ ಕಾರ್ಯಕ್ರಮವನ್ನು ಅರ್ಥಪೂರ್ಣವಾಗಿ ಏರ್ಪಡಿಸಲು ನಿರ್ಧಾರ ಕೈಗೊಳ್ಳಲಾಯಿತು.
ಸಭೆಯ ಪ್ರಾರಂಭದಲ್ಲೇ ಮುಖಂಡರು ಮಾತನಾಡಿ, ಡಿ.ದೇವರಾಜ ಅರಸು ಅವರ ಭಾವಚಿತ್ರ ಮೆರವಣಿಗೆ ಏರ್ಪಡಿಸಬೇಕು. ಎಸ್.ಎಸ್.ಎಲ್.ಸಿ, ಪಿ.ಯು.ಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ಜಿಲ್ಲೆಯ ಹಿಂದುಳಿದ ವರ್ಗಗಳ ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಗುರುತಿಸಿ ಕಾರ್ಯಕ್ರಮದಂದು ಗೌರವಿಸಬೇಕು. ಹಿಂದುಳಿದ ವರ್ಗದ ಫಲಾನುಭವಿಗಳಿಗೆ ಸರ್ಕಾರದ ಸೌಲಭ್ಯಗಳನ್ನು ಅಂದು ವಿತರಿಸಬೇಕು ಎಂಬ ವಿಷಯವು ಸೇರಿದಂತೆ ಇನ್ನಿತರ ಸಲಹೆಗಳನ್ನು ನೀಡಿದರು.
ಜಿಲ್ಲಾಧಿಕಾರಿ ಕೆ ಹರೀಶ್ ಕುಮಾರ್ ಅವರು ಮಾತನಾಡಿ, ಕಾರ್ಯಕ್ರಮವು ಯಶಸ್ವಿಯಾಗಿ ನಡೆಯಲು ಎಲ್ಲರ ಸಹಕಾರ ಅಗತ್ಯವಿದೆ. ಅರಸು ಅವರ ಬಗ್ಗೆ ಹೆಚ್ಚು ಬಲ್ಲವರಿಂದ ಉಪನ್ಯಾಸ ಕಾರ್ಯಕ್ರಮ ಸಹ ಆಯೋಜಿಸಬೇಕಿದೆ. ಉಪನ್ಯಾಸಕರನ್ನು ಆಯ್ಕೆ ಮಾಡುವ ಸಂಬಂಧ ನೀಡುವ ಸಲಹೆಗಳನ್ನು ಪರಿಗಣಿಸಿ ಅಂತಿಮ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದರು.
ಜೆ.ಎಚ್. ಪಟೇಲ್ ಸಭಾಂಗಣದಲ್ಲಿ ಸಭಾ ಕಾರ್ಯಕ್ರಮ ಹಮ್ಮಿಕೊಳ್ಳಲು ಅಧಿಕಾರಿಗಳಿಗೆ ಸೂಚಿಸಲಾಗುವುದು. ಕಾರ್ಯಕ್ರಮ ಪ್ರತಿಯೊಂದು ಹಂತದ ಸಿದ್ದತೆಗೂ ಈ ಹಿಂದೆ ಕಾರ್ಯನಿರ್ವಹಿಸಿರುವಂತೆ ಈ ಬಾರಿಯು ಯಾವುದೇ ಲೋಪಕ್ಕೆ ಅವಕಾಶವಾಗದಂತೆ ಎಲ್ಲಾ ರೂಪುರೇಷೆಗಳನ್ನು ತಯಾರಿಸಿಕೊಂಡು ಕಾರ್ಯಕ್ರಮ ಆಯೋಜಿಸಲಾಗುವುದು ಎಂದರು.
ಜನ್ಮದಿನ ಸಮಾರಂಭವು ಭಾನುವಾರ ನಡೆಯುವುದರಿಂದ ಯಾರು ಸಹ ಗೈರುಹಾಜರಾಗುವಂತಿಲ್ಲ. ಅಧಿಕಾರಿಗಳು, ಸಿಬ್ಬಂದಿ ಕಡ್ಡಾಯವಾಗಿ ಕಾರ್ಯಕ್ರಮದಂದು ಪಾಲ್ಗೊಳ್ಳಲೆಬೇಕು. ಈ ಹಿನ್ನಲೆಯಲ್ಲಿ ಜಿಲ್ಲಾಮಟ್ಟದ ಅಧಿಕಾರಿಗಳು ಆಯಾ ಇಲಾಖೆಯ ಸಿಬ್ಬಂದಿಗೆ ಸೂಚನೆ ನೀಡಬೇಕೆೆಂದು ಜಿಲ್ಲಾಧಿಕಾರಿ ಹರೀಶ್ಕುಮಾರ್ ಕಟ್ಟುನಿಟ್ಟಿನ ನಿರ್ದೇಶನ ನೀಡಿದರು.
ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ಜಿಲ್ಲಾ ಸಮಾಜ ಕಲ್ಯಾಣ ಇಲಾಖೆ ಉಪನಿದೇಶಕರಾದ ಕೆ.ಎಚ್. ಸತೀಶ್, ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿ ರೇಣುಕಾಂಬ, ಮುಖಂಡರಾದ ಸಿ.ಎಂ. ಕೃಷ್ಣಮೂರ್ತಿ, ಚಾ.ಗು. ನಾಗರಾಜು, ನಿಜದ್ವನಿ ಗೋವಿಂದರಾಜು, ಚಾ.ಸಿ. ಗೋವಿಂದರಾಜು, ಬ್ಯಾಡಮೂಡ್ಲು ಬಸವಣ್ಣ, ಆಲೂರು ನಾಗೇಂದ್ರ, ಗೂ. ಪುರುಷೋತ್ತಮ್, ಕೃಷ್ಣಯ್ಯ, ಇತರೆ ಮುಖಂಡರು ಸಭೆಯಲ್ಲಿ ಹಾಜರಿದ್ದರು.







