ದೇಶದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಪ್ರಮುಖ: ವೀಣಾಅಚ್ಚಯ್ಯ
ಮೀಸಲಾತಿಗಾಗಿ ಸಹಿ ಸಂಗ್ರಹ ಅಭಿಯಾನ

ಮಡಿಕೇರಿ, ಆ.4 : ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಬೇಕೆಂದು ಒತ್ತಾಯಿಸಿ ಕೊಡಗು ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ವತಿಯಿಂದ ವಿಧಾನಸೌಧದಿಂದ ಸಂಸತ್ ವರೆಗೆ ಸಹಿ ಸಂಗ್ರಹ ಅಭಿಯಾನಕ್ಕೆ ಚಾಲನೆ ನೀಡಲಾಯಿತು.
ನಗರದ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ನಡೆದ ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ಶಾಂತೆಯಂಡ ವೀಣಾಅಚ್ಚಯ್ಯ ಅವರು ಮೊದಲು ಸಹಿ ಮಾಡುವ ಮೂಲಕ ಅಭಿಯಾನಕ್ಕೆ ಚಾಲನೆ ನೀಡಿದರು.
ನಂತರ ಮಾತನಾಡಿದ ಅವರು, ಮಹಿಳೆಯರಿಗೆ ಶೇ.33 ರಷ್ಟು ಮೀಸಲಾತಿ ನೀಡಬೇಕು ಎನ್ನುವ ಬೇಡಿಕೆ ನ್ಯಾಯಯುತವಾಗಿದ್ದು, ಮಹಿಳೆಯರು ಎಲ್ಲಾ ಕ್ಷೇತ್ರಗಳಲ್ಲೂ ಪುರುಷ ಸಮಾನರಾಗಿ ಸಾಧನೆ ಮಾಡುತ್ತಿದ್ದಾರೆ ಎಂದರು. ದೇಶದ ಅಭಿವೃದ್ಧಿಯಲ್ಲಿ ತಮ್ಮದೇ ಆದ ಕೊಡುಗೆಯನ್ನು ಮಹಿಳೆಯರು ನೀಡುತ್ತಿದ್ದಾರೆ. ಈ ದೇಶದ ಪ್ರಧಾನಿಯಾಗಿ ಸುದೀರ್ಘ ಕಾಲ ಆಳಿದ ಇಂದಿರಾಗಾಂಧಿ ಅವರು ಮಹಿಳೆ ದೇಶವನ್ನು ಕೂಡ ಆಳಬಲ್ಲಳು ಎನ್ನುವುದನ್ನು ತೋರಿಸಿಕೊಟ್ಟಿದ್ದಾರೆ. ಶೈಕ್ಷಣಿಕವಾಗಿ, ಆರ್ಥಿಕವಾಗಿ, ಸಾಮಾಜಿಕವಾಗಿ ಸಬಲಳಾಗಿರುವ ಮಹಿಳೆ ಇಂದು ರಾಜಕೀಯವಾಗಿಯೂ ಮುಂಚೂಣಿಯಲ್ಲಿದ್ದಾಳೆ. ಆದ್ದರಿಂದ ಶೇ.33 ರಷ್ಟು ಮೀಸಲಾತಿಯ ಅಗತ್ಯವಿದೆ ಎಂದು ವೀಣಾಅಚ್ಚಯ್ಯ ಹೇಳಿದರು.
ಮಾಜಿ ಸಚಿವರಾದ ಸುಮಾವಸಂತ್ ಮಾತನಾಡಿ, ಮಹಿಳೆಯರು ಮೀಸಲಾತಿ ಇಲ್ಲದೆಯೇ ತಮ್ಮ ಅಸ್ತಿತ್ವವನ್ನು ಮತ್ತು ಜವಬ್ದಾರಿಯನ್ನು ಈ ಸಮಾಜಕ್ಕೆ ತೋರಿಸಿಕೊಟ್ಟಿದ್ದಾರೆ. ಎಲ್ಲಾ ರೀತಿಯಿಂದಲೂ ಸೈ ಎನಿಸಿಕೊಂಡಿರುವ ಮಹಿಳಾ ವರ್ಗಕ್ಕೆ ಶೇ.33 ರಷ್ಟು ಮೀಸಲಾತಿ ನೀಡಲೇಬೇಕೆಂದು ಒತ್ತಾಯಿಸಿದರು.
ಜಿಲ್ಲಾ ಕಾಂಗ್ರೆಸ್ ಸಮಿತಿಯ ಮಹಿಳಾ ಘಟಕದ ಅಧ್ಯಕ್ಷರಾದ ಜಿ.ಆರ್.ಪುಷ್ಪಲತಾ ಮಾತನಾಡಿ, ಮೀಸಲಾತಿಗಾಗಿ ಒತ್ತಾಯಿಸಿ ಮಹಿಳಾ ಕಾಂಗ್ರೆಸ್ ವತಿಯಿಂದ ಜಿಲ್ಲೆಯಾದ್ಯಂತ ಸಹಿ ಸಂಗ್ರಹ ಅಭಿಯಾನ ನಡೆಸಲಾಗುವುದೆಂದು ತಿಳಿಸಿದರು.
ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಮುಕ್ಕಾಟಿರ ಶಿವುಮಾದಪ್ಪ ಮಾತನಾಡಿ, ಅಭಿಯಾನಕ್ಕೆ ಶುಭ ಕೋರಿದರು.
ನಗರಸಭಾ ಅಧ್ಯಕ್ಷರಾದ ಕಾವೇರಮ್ಮ ಸೋಮಣ್ಣ, ಜಿ.ಪಂ ಸದಸ್ಯರಾದ ಸುನಿತಾ, ಲೀಲಾವತಿ, ಶ್ರೀಜ, ತಾ.ಪಂ ಸದಸ್ಯರಾದ ಆಶಾ ಪೂಣಚ್ಚ, ಆಶಾ ಜೇಮ್ಸ್, ಬ್ಲಾಕ್ ಅಧ್ಯಕ್ಷರುಗಳಾದ ಕುಸುಮಾ ಜೋಯಪ್ಪ, ಮುಕ್ಕಾಟಿರ ಕಾವೇರಮ್ಮ, ಅಮೀನ, ಮಂಜುಳಾ ಮಂಜು, ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ವಿ.ಪಿ.ಸುರೇಶ್, ಮಡಿಕೇರಿ ನಗರ ಕಾಂಗ್ರೆಸ್ ಅಧ್ಯಕ್ಷರಾದ ಕೆ.ಯು.ಅಬ್ದುಲ್ ರಜಾಕ್, ಮಹಿಳಾ ಘಟಕದ ಅಧ್ಯಕ್ಷರಾದ ಪಾರ್ವತಿ, ರಾಜೀವ್ ಗಾಂಧಿ ಪಂಚಾಯತ್ ರಾಜ್ ಸಂಘಟನೆಯ ಜಿಲ್ಲಾ ಸಂಯೋಜಕರಾದ ತೆನ್ನಿರ ಮೈನಾ, ಪ್ರಮುಖರಾದ ಸುರಯ್ಯಿ ಅಬ್ರಾರ್, ಎಸ್.ಎಂ.ಚಂಗಪ್ಪ, ಬಿ.ಜಿ.ಮಂಜುನಾಥ್, ಕಾಂತರಾಜು, ಗಿರೀಶ್, ಸುಹಾದ, ಮುಂಚೂಣಿ ಘಟಕಗಳ ಪದಾಧಿಕಾರಿಗಳು, ಎಲ್ಲಾ ವಲಯಾಧ್ಯಕ್ಷರುಗಳು ಹಾಗೂ ಕಾರ್ಯಕರ್ತರು ಕಾರ್ಯಕ್ರಮದಲ್ಲಿ ಪಾಲ್ಗೊಂಡಿದ್ದರು.







