ಆ.20: ಮಂಗಳೂರಿನಲ್ಲಿ ಕೆಪಿಎಸ್ಸಿ ಗೆಜೆಟೆಡ್ ಪರೀಕ್ಷೆ
ಮಂಗಳೂರು, ಆ.14: ರಾಜ್ಯ ಸರಕಾರದ ವಿವಿಧ ಗಜೆಟೆಡ್ ಪ್ರೊಬೇಷನರ್ಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ಆ.20ರಂದು ಮಂಗಳೂರಿನಲ್ಲಿ ನಡೆಯಲಿದೆ.
ಕರ್ನಾಟಕ ಲೋಕಸೇವಾ ಆಯೋಗವು ಈ ಪರೀಕ್ಷೆಯನ್ನು ನಡೆಸಲಿದ್ದು, ಈವರೆಗೆ ದ.ಕ., ಉಡುಪಿ ಸೇರಿದಂತೆ ಆಸುಪಾಸಿನ ಜಿಲ್ಲೆಗಳ ಕೆಪಿಎಸ್ಸಿ ಗಜೆಟೆಡ್ ಪರೀಕ್ಷೆ ಎದುರಿಸುವ ಅಭ್ಯರ್ಥಿಗಳು ಬೆಂಗಳೂರು, ಮೈಸೂರು, ಬೆಳಗಾವಿ, ಗುಲ್ಬರ್ಗ ಮತ್ತು ಶಿವಮೊಗ್ಗಕ್ಕೆ ತೆರಳಬೇಕಿತ್ತು. ಆ.20ರಂದು ನಗರದಲ್ಲಿ 12 ಪರೀಕ್ಷಾ ಕೇಂದ್ರಗಳನ್ನು ಆಯ್ಕೆ ಮಾಡಲಾಗಿದ್ದು, 6084 ಅಭ್ಯರ್ಥಿಗಳು ಪರೀಕ್ಷೆ ಎದುರಿಸಲಿದ್ದಾರೆ.
ಪೂರ್ವಭಾವಿ ಸಭೆ: ಮಂಗಳೂರಿನಲ್ಲಿ ಗಜೆಟೆಡ್ ಪ್ರೊಬೆಷನರ್ಸ್ ಹುದ್ದೆಗಳ ನೇಮಕಾತಿಗೆ ಪೂರ್ವಭಾವಿ ಪರೀಕ್ಷೆ ನಡೆಯುವ ಹಿನ್ನೆಲೆಯಲ್ಲಿ ಸೋಮವಾರ ಅಪರ ಜಿಲ್ಲಾಧಿಕಾರಿ ಕುಮಾರ್ ನೇತೃತ್ವದಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಪರೀಕ್ಷಾ ಕೇಂದ್ರಗಳ ಮುಖ್ಯಸ್ಥರ ಹಾಗೂ ವಿವಿಧ ಇಲಾಖಾಧಿಕಾರಿಗಳ ಸಭೆ ನಡೆಯಿತು.
ಪರೀಕ್ಷೆ ಬರೆಯುವ ಅಭ್ಯರ್ಥಿಗಳು ಪರೀಕ್ಷಾ ಕೇಂದ್ರಕ್ಕೆ ಬರುವಾಗ ಹಾಲ್ಟಿಕೆಟ್ನೊಂದಿಗೆ ಕಡ್ಡಾಯವಾಗಿ ತಮ್ಮ ಆಧಾರ್ ಕಾರ್ಡ್ ಅಥವಾ ಭಾವಚಿತ್ರ ಇರುವ ಅಧಿಕೃತ ಗುರುತಿನ ಚೀಟಿ ಹಾಗೂ ಅದರ ಜೆರಾಕ್ಸ್ ಪ್ರತಿ ತರಬೇಕು. ಮೊಬೈಲ್ ಅಥವಾ ಡಿಜಿಟಲ್ ವಾಚ್ ಕೊಂಡೊಯ್ಯಲು ಅವಕಾಶವಿಲ್ಲ. ಅಭ್ಯರ್ಥಿಗಳು ಬೆಳಿಗ್ಗೆ 9:30 ಹಾಗೂ ಮಧ್ಯಾಹ್ನ 1:30ಕ್ಕೆ ಪರೀಕ್ಷಾ ಕೇಂದ್ರದಲ್ಲಿ ಹಾಜರಿರಬೇಕು.
ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ಪೊಲೀಸ್ ಬಂದೋಬಸ್ತ್ ಏರ್ಪಡಿಸಲು ಪೊಲೀಸ್ ಇಲಾಖೆಗೆ ಸೂಚಿಸಲಾಗಿದೆ. ಅದೇ ರೀತಿ ಖಜಾನೆಯಿಂದ ಪರೀಕ್ಷಾ ಕೇಂದ್ರಗಳಿಗೆ ಪ್ರಶ್ನೆಪತ್ರಿಕೆಯನ್ನು ಪೊಲೀಸ್ ಭದ್ರತೆಯಲ್ಲಿ ರವಾನಿಸಲಾಗುವುದು. ಗ್ರೂಪ್ ‘ಎ’ ಅಧಿಕಾರಿಗಳನ್ನು ವೀಕ್ಷಕರನ್ನಾಗಿ ಹಾಗೂ ಗ್ರೂಪ್ ‘ಬಿ’ ದರ್ಜೆ ಅಧಿಕಾರಿಗಳನ್ನು ರೂಟ್ ಅಧಿಕಾರಿಗಳಾಗಿ ನೇಮಿಸಲಾಗಿದೆ ಎಂದು ಅಪರ ಜಿಲ್ಲಾಧಿಕಾರಿ ಕುಮಾರ್ ತಿಳಿಸಿದರು.
ಸಭೆಯಲ್ಲಿ ಡಿಡಿಪಿಐ ಶಿವರಾಮಯ್ಯ, ಜಿಲ್ಲಾ ಲೀಡ್ ಕಾಲೇಜು ಪ್ರಾಂಶುಪಾಲ ರಾಜಶೇಖರ ಹೆಬ್ಬಾರ್ ಮತ್ತಿತರರು ಉಪಸ್ಥಿತರಿದ್ದರು.







