ಹೊಸೂರು ಶಾಸಕನ ಮನೆಗೆ ಶಶಿಕಲಾ ಭೇಟಿ?

ಬೆಂಗಳೂರು, ಆ.23: ಕೇಂದ್ರ ಕಾರಾಗೃಹ ಪರಪ್ಪನ ಅಗ್ರಹಾರದಲ್ಲಿರುವ ಎಐಎಡಿಎಂಕೆ ಪಕ್ಷದ ಮಾಜಿ ಪ್ರಧಾನ ಕಾರ್ಯದರ್ಶಿ ವಿ.ಕೆ.ಶಶಿಕಲಾ ಹೊಸೂರು ವಿಧಾನಸಭಾ ಕ್ಷೇತ್ರದ ಶಾಸರೊಬ್ಬರ ಮನೆಗೆ ಭೇಟಿ ನೀಡಿರುವುದಾಗಿ ಬಂದಿಖಾನೆ ಇಲಾಖೆಯ ಮಾಜಿ ಡಿಐಜಿ ಡಿ.ರೂಪಾ ಎಸಿಬಿಗೆ ಸಲ್ಲಿಸಿರುವ ವರದಿಯಲ್ಲಿ ಉಲ್ಲೇಖಿಸಲಾಗಿದೆ ಎಂದು ಹೇಳಲಾಗಿದೆ.
ಆನೇಕಲ್ ಸಮೀಪದ ಪರಪ್ಪನ ಅಗ್ರಹಾರದಲ್ಲಿದ್ದ ಶಶಿಕಲಾ ಹೊಸೂರಿಗೆ ತೆರಳಿ ತಮ್ಮದೇ ಪಕ್ಷದ ಶಾಸಕರೊಬ್ಬರನ್ನು ಅವರ ನಿವಾಸದಲ್ಲಿ ಭೇಟಿಯಾಗಿ ತಮಿಳುನಾಡು ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚಿ ನಡೆಸಿದ್ದಾರೆ ಎನ್ನಲಾಗಿದ್ದು, ಅವರು ಹೊರ ಹೋಗಿರುವ ದೃಶ್ಯಾವಳಿ ಕಾರಾಗೃಹದ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದೆ ಎಂದು ತಿಳಿದುಬಂದಿದೆ.
ಖಚಿತ ಮಾಹಿತಿ ಹಾಗೂ ಪರಪ್ಪನ ಅಗ್ರಹಾರ ಜೈಲಿಗೆ ತೆರಳಿದ ಸಂದರ್ಭದಲ್ಲಿ ಅಲ್ಲಿನ ಸಿಸಿ ಟಿವಿ ಕ್ಯಾಮೆರಾ ದೃಶ್ಯಾವಳಿಗಳನ್ನು ಪರಿಶೀಲಿಸಿದ ವೇಳೆ ಶಶಿಕಲಾ ಹಾಗೂ ಅವರ ಆಪ್ತರಿಗೆ ರಾಜ್ಯಾತಿಥ್ಯ ನೀಡಲಾಗುತ್ತಿತ್ತು.
ಇಲ್ಲಿನ ಅಧಿಕಾರಿಗಳು ಕೆಲವು ಗಣ್ಯ ಕೈದಿಗಳ ಜತೆ ಶಾಮೀಲಾಗಿ ಅವರಿಗೆ ಎಲ್ಲ ರೀತಿಯ ಸೌಲಭ್ಯಗಳನ್ನು ನೀಡುತ್ತಾರೆ. ಅಷ್ಟೇ ಅಲ್ಲದೆ, ಪರಪ್ಪನ ಅಗ್ರಹಾರದಲ್ಲಿರುವ ಅಧಿಕಾರಿಗಳು ಗೃಹ ಸಚಿವರು ಹಾಗೂ ಗೃಹ ಇಲಾಖೆ ಕಾರ್ಯದರ್ಶಿಗೆ ಸುಳ್ಳು ಮಾಹಿತಿ ನೀಡಿದ್ದಾರೆ ಎಂದು ರೂಪಾ ವರದಿಯಲ್ಲಿ ಹೇಳಲಾಗಿದೆ ಎಂದು ಮೂಲಗಳು ತಿಳಿಸಿವೆ.







