ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಸೋಮನಾಥ್ ನಾಯಕ್ಗೆ 6 ತಿಂಗಳು ಜೈಲು
ಡಾ.ವೀರೇಂದ್ರ ಹೆಗ್ಗಡೆ ಮತ್ತು ಸಂಸ್ಥೆಯ ವಿರುದ್ಧ ಆರೋಪ
ಬೆಳ್ತಂಗಡಿ, ಆ.28: ಬೆಳ್ತಂಗಡಿ ನ್ಯಾಯಾಲಯದ ಪ್ರತಿಬಂಧಕಾಜ್ಞೆಯನ್ನು ಉಲ್ಲಂಘಿಸಿ ಶ್ರೀ ಕ್ಷೇತ್ರ ಧರ್ಮಸ್ಥಳದ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಹಾಗೂ ಅವರ ಸಂಸ್ಥೆಗಳ ವಿರುದ್ಧ ಆರೋಪಗಳನ್ನು ಮಾಡಿದ ಪ್ರಕರಣಕ್ಕೆ ಸಂಬಂಧಿಸಿ ಗುರುವಾಯನಕೆರೆ ನಾಗರಿಕ ಸೇವಾ ಟ್ರಸ್ಟ್ ಅಧ್ಯಕ್ಷ ಕೆ.ಸೋಮನಾಥ ನಾಯಕ್ರಿಗೆ ಒಟ್ಟು ಆರು ತಿಂಗಳು ಜೈಲು ಶಿಕ್ಷೆ ವಿಧಿಸಿ ನ್ಯಾಯಾಲಯ ಆದೇಶಿಸಿದೆ.
ಕಳೆದ 2 ವರ್ಷಗಳಿಂದ ಡಾ. ಹೆಗ್ಗಡೆ ಹಾಗೂ ಅವರ ಸಂಸ್ಥೆಗಳ ವಿರುದ್ಧ ಸತತ ಆರೋಪಗಳನ್ನು ಮಾಡುತ್ತಿದ್ದ ಬಗ್ಗೆ ಕೆ.ಸೋಮನಾಥ ನಾಯಕ್ ವಿರುದ್ಧ ಪ್ರಕರಣಗಳು ದಾಖಲಾಗಿತ್ತು. ಇದರ ವಿಚಾರಣೆ ಕೈಗೆತ್ತಿಕೊಂಡ ಬೆಳ್ತಂಗಡಿ ನ್ಯಾಯಾಲಯವು ಇತ್ತಂಡಗಳ ವಾದ, ವಿವಾದಗಳನ್ನು ಆಲಿಸಿದ ಬಳಿಕ ಸೋಮವಾರ ಎರಡು ಪ್ರಕರಣಗಳಿಗೆ ಸಂಬಂಧಿಸಿ ತಲಾ 3 ತಿಂಗಳು ಜೈಲು ಶಿಕ್ಷೆ ವಿಧಿಸಿ ತೀರ್ಪು ನೀಡಿದೆ. ಜೊತೆಗೆ ಧರ್ಮಸ್ಥಳ ಕ್ಷೇತ್ರಕ್ಕೆ ಪರಿಹಾರವಾಗಿ 4.93 ಲಕ್ಷ ರೂ. ಪರಿಹಾರ ನೀಡಬೇಕು. ಪರಿಹಾರ ನೀಡಲು ವಿಫಲವಾದಲ್ಲಿ ಸೋಮನಾಥ್ ನಾಯಕ್ರ ಆಸ್ತಿಯನ್ನು ಏಲಂ ಮಾಡಿ ಪರಿಹಾರದ ಮೊತ್ತವನ್ನು ನೀಡಬೇಕೆಂದು ನ್ಯಾಯಾಲಯವು ಆದೇಶದಲ್ಲಿ ಉಲ್ಲೇಖಿಸಿದೆ.