2019ರ ವೇಳೆಗೆ 275 ಸ್ಥಳೀಯ ಸಂಸ್ಥೆಗಳು ಬಯಲು ಬಹಿರ್ದೆಸೆ ಮುಕ್ತ: ಸಚಿವ ಈಶ್ವರ ಖಂಡ್ರೆ

ಬೆಂಗಳೂರು, ಆ. 29: ರಾಜ್ಯದ ನಗರ ಮತ್ತು ಪಟ್ಟಣ ಪ್ರದೇಶಗಳು ಸೇರಿದಂತೆ 275 ನಗರ ಸ್ಥಳೀಯ ಸಂಸ್ಥೆಗಳನ್ನು 2019ರ ಒಳಗೆ ಬಯಲು ಬಹಿರ್ದೆಸೆ ಮುಕ್ತಗೊಳಿಸಲಾಗುವುದು ಎಂದು ಪೌರಾಡಳಿತ ಸಚಿವ ಈಶ್ವರ ಬಿ.ಖಂಡ್ರೆ ತಿಳಿಸಿದ್ದಾರೆ.
ಮಂಗಳವಾರ ವಿಕಾಸಸೌಧದಲ್ಲಿ ಪೌರಸೇವಾ ಸಂಸ್ಥೆಗಳ ಚುನಾಯಿತ ಪ್ರತಿನಿಧಿಗಳಿಗೆ ಏರ್ಪಡಿಸಿದ್ದ ಸ್ವಚ್ಛ ಭಾರತ್ ಮಿಷನ್ ಮತ್ತು ಮಲ ತ್ಯಾಜ್ಯ ನಿರ್ವಹಣೆ ಕಾರ್ಯಾಗಾರ ಉದ್ಘಾಟಿಸಿ ಮಾತನಾಡಿದ ಅವರು, ಅಕ್ಟೋಬರ್ 2ರ ಗಾಂಧಿ ಜಯಂತಿ ವೇಳೆಗೆ ಕನಿಷ್ಠ ನೂರು ಸ್ಥಳೀಯ ಸಂಸ್ಥೆಗಳನ್ನಾದರೂ ಬಯಲು ಬಹಿರ್ದೆಸೆ ಮುಕ್ತಗೊಳಿಸುವ ಗುರಿ ಹೊಂದಲಾಗಿದೆ ಎಂದರು.
ಸ್ಥಳೀಯ ಸಂಸ್ಥೆಗಳಲ್ಲಿ ಘನ ಮತ್ತು ಮಲ ತ್ಯಾಜ್ಯ ನಿರ್ವಹಣೆ ಅಸಮರ್ಪಕ ಆಗಿರುವುದರಿಂದ ಡೆಂಗ್, ಚಿಕನ್ಗುನ್ಯ, ಎಚ್-1 ಎನ್-1 ನಂತಹ ಮಾರಕ ರೋಗಗಳು ಹೆಚ್ಚಾಗುತ್ತಿವೆ. ಹೀಗಾಗಿ ಸ್ಥಳೀಯ ಸಂಸ್ಥೆಗಳಲ್ಲಿ ನೈರ್ಮಲ್ಯ ಕಾಪಾಡಲು ಆದ್ಯತೆ ನೀಡಬೇಕೆಂದು ಅವರು ಸಲಹೆ ನೀಡಿದರು.
ಪುರಸಭೆ, ಪಟ್ಟಣ ಪಂಚಾಯತ್, ನಗರಸಭೆ ಸೇರಿದಂತೆ ಸ್ಥಳೀಯ ಸಂಸ್ಥೆಗಳಲ್ಲಿ ವೈಯಕ್ತಿಕ ಶೌಚಾಲಯ ನಿರ್ಮಾಣಕ್ಕೆ 15 ಸಾವಿರ ರೂ.ಹಣ ನೀಡುತ್ತಿದ್ದು, ಅದನ್ನು ಎಲ್ಲರೂ ಸದ್ಬಳಕೆ ಮಾಡಿಕೊಳ್ಳಬೇಕು. ಆ ಮೂಲಕ ನಗರ ಪ್ರದೇಶದಲ್ಲಿ ನೈರ್ಮಲ್ಯ ಕಾಪಾಡಲು ಆಸ್ಥೆ ವಹಿಸಬೇಕು ಎಂದ ಅವರು, ಇತ್ತೀಚಿನ ದಿನಗಳಲ್ಲಿ ನಗರೀಕರಣ ಪ್ರಮಾಣ ಗಣನೀಯವಾಗಿ ಹೆಚ್ಚಾಗುತ್ತಿದೆ. ಶೇ.40ರಿಂದ 50ರಷ್ಟು ಜನ ನಗರಗಳಲ್ಲೇ ವಾಸಿಸುತ್ತಿದ್ದಾರೆ. ಗ್ರಾಮೀಣ ಪ್ರದೇಶದಿಂದ ನಗರ ಪ್ರದೇಶಕ್ಕೆ ವಲಸೆ ಬರುವುದನ್ನು ತಡೆಯಲು ಎಲ್ಲ ಸ್ಥಳೀಯ ಸಂಸ್ಥೆಗಳನ್ನು ಬಲ ಪಡಿಸಬೇಕಿದೆ. ಆ ನಿಟ್ಟಿನಲ್ಲಿ ಶೀಘ್ರದಲ್ಲೇ 3 ಸಾವಿರ ಸಿಬ್ಬಂದಿ ನೇಮಕಕ್ಕೆ ಕ್ರಮ ಕೈಗೊಳ್ಳಲಾಗಿದೆ. ಈಗಾಗಲೇ ಕೆಪಿಎಸ್ಸಿಗೆ ಬರೆದಿದ್ದು ಪ್ರಕ್ರಿಯೆ ಆರಂಭಿಸಲಾಗಿದೆ ಎಂದು ಹೇಳಿದರು.
ರಾಜ್ಯದ ಎಲ್ಲ ಭಾಗಗಳಲ್ಲಿ ಒಳಚರಂಡಿಗಳನ್ನು ನಿರ್ಮಿಸಲು 45 ಸಾವಿರ ಕೋಟಿ ರೂ.ಗಳಿಂದ 50ಸಾವಿರ ಕೋಟಿ ರೂ.ಗಳಷ್ಟು ಹಣಬೇಕಾಗುತ್ತದೆ. ಅಷ್ಟೊಂದು ಬೃಹತ್ ಮೊತ್ತದ ಹಣವನ್ನು ರಾಜ್ಯ ಸರಕಾರ ಭರಿಸಲು ಕಷ್ಟ ಸಾಧ್ಯ. ಹೀಗಾಗಿ ಆಯಾ ಸ್ಥಳೀಯ ಸಂಸ್ಥೆಗಳ ಮೂಲಕ ಯೋಜನಾ ವೆಚ್ಚ ಭರಿಸಲು ತೀರ್ಮಾನಿಸಲಾಗಿದೆ. ಪ್ರಾಯೋಗಿಕವಾಗಿ ಮಲ ತ್ಯಾಜ್ಯ ನಿರ್ವಹಣಾ ಘಟಕವನ್ನು ದೇವನಹಳ್ಳಿಯಲ್ಲಿ ನಡೆಸುತ್ತಿದ್ದು, ಸದ್ಯ 6 ಸಾವಿರ ಲೀಟರ್ ಸಂಸ್ಕರಣೆಯಾಗುತ್ತಿದೆ. ಮುಂದಿನ ದಿನಗಳಲ್ಲಿ ರಾಜ್ಯಾದ್ಯಂತ ಇದನ್ನು ವಿಸ್ತರಿಸಲಾಗುವುದು ಎಂದು ಭರವಸೆ ನೀಡಿದರು.
ಮುಖ್ಯಮಂತ್ರಿ ನಗರಾಭಿವೃದ್ಧಿ ಯೋಜನೆಯಡಿ 2900 ಕೋಟಿ ರೂ.ನೀಡಲಾಗಿದೆ. ಅದನ್ನು ನಗರ ಸ್ಥಳೀಯ ಸಂಸ್ಥೆಗಳು ಸಮರ್ಪಕ ರೀತಿಯಲ್ಲಿ ಬಳಸಿಕೊಳ್ಳಬೇಕು ಎಂದ ಅವರು, ಸ್ಥಳೀಯ ಸಂಸ್ಥೆಗಳ ಮೂಲಭೂತ ಸೌಕರ್ಯ ಕಲ್ಪಿಸಲು ಎಲ್ಲರೂ ಆಸ್ಥೆ ವಹಿಸಬೇಕು ಎಂದರು.
ಕಾರ್ಯಾಗಾರದಲ್ಲಿ ಪೌರಾಡಳಿತ ಇಲಾಖೆ ಪ್ರಧಾನ ಕಾರ್ಯದರ್ಶಿ ಅಂಜುಂ ಪರ್ವೇಝ್, ನಿರ್ದೇಶಕ ಆರ್.ವಿಶಾಲ್ ಸೇರಿ ನಗರ ಸ್ಥಳೀಯ ಸಂಸ್ಥೆ ಪ್ರತಿನಿಧಿಗಳು ಪಾಲ್ಗೊಂಡಿದ್ದರು.







