ಗೌರಿ ಲಂಕೇಶ್ ಹತ್ಯೆ ಖಂಡಿಸಿ ಇಂದು ಮಂಗಳೂರಿನಲ್ಲಿ ಪಿ.ಎಫ್.ಐ. ಪ್ರತಿಭಟನೆ
ಮಂಗಳೂರು, ಸೆ.6: ಖ್ಯಾತ ಸಾಹಿತಿ, ಹೋರಾಟಗಾರ್ತಿ, ಹಿರಿಯ ಪತ್ರಕರ್ತೆ ಗೌರಿ ಲಂಕೇಶ್ ಅವರನ್ನು ಗುಂಡಿಟ್ಟು ಹತ್ಯೆಗೈದಿರುವ ಘಟನೆಯನ್ನು ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾದ ದ.ಕ. ಜಿಲ್ಲಾ ಅಧ್ಯಕ್ಷ ನವಾಝ್ ಉಳ್ಳಾಲ್ ತೀವ್ರವಾಗಿ ಖಂಡಿಸಿದ್ದಾರೆ.
ಡಾ.ಎಂ.ಎಂ.ಕಲ್ಬುರ್ಗಿಯವರ ಹತ್ಯೆ ನಡೆದು ಎರಡು ವರುಷಗಳು ಕಳೆದರೂ ಹತ್ಯೆಯ ಹಿಂದಿನ ಸೂತ್ರಧಾರಿಗಳನ್ನು ಬಂಧಿಸುವ ಕಾರ್ಯ ನಡೆದಿಲ್ಲ. ಅಭಿವ್ಯಕ್ತಿ ಸ್ಞಾತಂತ್ರ್ಯವನ್ನು ನಿರ್ಭಯವಾಗಿ ವ್ಯಕ್ತಪಡಿಸುತ್ತಿದ್ದ ಮತ್ತು ಮತಾಂಧ ಶಕ್ತಿಗಳ ವಿರುದ್ಧ ನಿರಂತರ ವೈಚಾರಿಕ ಸಂಘರ್ಷಕ್ಕಿಳಿದಿದ್ದ ಗೌರಿ ಲಂಕೇಶ್ ಅವರ ಹತ್ಯೆ ಸಮಾಜದಲ್ಲಿ ತುಂಬಲಾರದ ನಷ್ಟವಾಗಿದ್ದು, ದುಷ್ಕರ್ಮಿಗಳನ್ನು ಮತ್ತು ಷಡ್ಯಂತ್ರದ ರೂವಾರಿಗಳನ್ನು ಕಾನೂನಿನ ಕುಣಿಕೆಗೆ ತರಲು ಸರಕಾರವು ತುರ್ತು ಕ್ರಮ ಕೈಗೊಳ್ಳಬೇಕು ಮತ್ತು ಈ ಹತ್ಯಾ ಪ್ರಕರಣದ ತನಿಖೆಯನ್ನು ಎನ್.ಐ.ಎ.ಗೆ ವಹಿಸಲು ಒತ್ತಾಯಿಸಿ ಪಾಪ್ಯುಲರ್ ಫ್ರಂಟ್ ದ.ಕ. ಜಿಲ್ಲಾ ಸಮಿತಿಯ ವತಿಯಿಂದ ಮಂಗಳೂರಿನ ಪುರಭವನದ ಎದುರಿರುವ ಮಹಾತ್ಮಾ ಗಾಂಧಿ ಪ್ರತಿಮೆಯ ಮುಂಭಾಗದಲ್ಲಿ ಇಂದು (ಸೆ.6ರಂದು) ಸಂಜೆ 4 ಗಂಟೆಗೆ ಬೃಹತ್ ಪ್ರತಿಭಟನೆ ನಡೆಸಲಾಗುವುದು ಎಂದು ನವಾಝ್ ಉಳ್ಳಾಲ್ ಪ್ರಕಟನೆಯಲ್ಲಿ ತಿಳಿಸಿದ್ದಾರೆ.