ಬ್ಯಾಂಕ್ ಸಾಲ ಸೌಲಭ್ಯಗಳಿಗೆ ವಿಳಂಬ ಮಾಡದಿರಲು ಜಿಲ್ಲಾ ಉಸ್ತುವಾರಿ ಸಚಿವ ತಾಕೀತು

ಚಾಮರಾಜನಗರ, ಸೆ.7: ಸರ್ಕಾರದ ವಿವಿಧ ಇಲಾಖೆಗಳ ಯೋಜನೆಯಡಿ ಮಂಜೂರು ಮಾಡಬೇಕಿರುವ ಸಾಲಸೌಲಭ್ಯಗಳನ್ನು ಫಲಾನುಭವಿಗಳಿಗೆ ನೀಡಲು ಬ್ಯಾಂಕ್ ಅಧಿಕಾರಿಗಳು ವಿಳಂಬ ಮಾಡಬಾರದೆಂದು ಆಹಾರ, ನಾಗರಿಕ ಸರಬರಾಜು ಹಾಗು ಗ್ರಾಹಕ ವ್ಯವಹಾರಗಳ ಸಚಿವರಾದ ಯು.ಟಿ. ಖಾದರ್ ಅವರು ತಾಕೀತು ಮಾಡಿದ್ದಾರೆ.
ನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಇಂದು ಕರ್ನಾಟಕ ಅಭಿವೃದ್ಧಿ ಕಾರ್ಯಕ್ರಮಗಳ (ಕೆಡಿಪಿ) ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಇಲಾಖೆಗಳ ಪ್ರಗತಿ ಪರಿಶೀಲಿಸುವ ವೇಳೆ ಅಧಿಕಾರಿಗಳು ಮಾತನಾಡಿ, ಸರ್ಕಾರದ ಸಹಾಯಧನವನ್ನು ಸಕಾಲಕ್ಕೆ ಬಿಡುಗಡೆ ಮಾಡಲಾಗುತ್ತಿದೆ. ಆದರೆ ಬ್ಯಾಂಕುಗಳಲ್ಲಿ ಫಲಾನುಭವಿಗಳಿಗೆ ಸಾಲ ಮಂಜೂರಾಗಲು ವಿಳಂಬವಾಗುತ್ತಿದೆ. ಹೀಗಾಗಿ ನಿಗದಿತ ಅವಧಿಯೊಳಗೆ ಯೋಜನೆ ಸೌಲಭ್ಯ ತಲುಪಿಸಲು ಸಾಧ್ಯವಾಗುತ್ತಿಲ್ಲವೆಂದು ಗಮನ ಸೆಳೆದರು. ಇದಕ್ಕೆ ಪ್ರತಿಕ್ರಿಯಿಸಿದ ಉಸ್ತುವಾರಿ ಸಚಿವರು ಜನಸಾಮಾನ್ಯರಿಗೆ ಸರ್ಕಾರದ ಯೋಜನೆಗಳು ಮುಟ್ಟಬೇಕು. ಬ್ಯಾಂಕುಗಳು ಯೋಜನೆಯಡಿ ನೀಡುವ ಸಾಲ ನೆರವು ನೀಡಲು ಹಿಂದೇಟು ಹಾಕಿದರೆ ಸಹಿಸಲಾಗುವುದಿಲ್ಲ. ವಿಳಂಬ ಧೋರಣೆ ಮುಂದುದರಿದರೆ ಬ್ಯಾಂಕಿನ ಹಿರಿಯ ಅಧಿಕಾರಿಗಳನ್ನೇ ಸಭೆಗೆ ಕರೆದು ನಿರ್ದೇಶನ ನೀಡಬೇಕಾಗುತ್ತದೆ ಎಂದು ತಿಳಿಸಿದರು.
ಯಾವುದೇ ಇಲಾಖೆಯು ಆಯಾ ಕಾರ್ಯಕ್ರಮದಡಿ ಆಯ್ಕೆಯಾದ ಫಲಾನುಭವಿಗಳಿಗೆ ಸರಿಯಾದ ಸಮಯದಲ್ಲಿ ಸಾಲಸೌಲಭ್ಯ ಸಿಕ್ಕಿದೆಯೇ ಎಂದು ಗಮನಿಸಬೇಕು. ತಲುಪದಿದ್ದಲ್ಲಿ ಹಿರಿಯ ಅಧಿಕಾರಿಗಳ ಗಮನಕ್ಕೆ ತರಬೇಕು. ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಪಂಚಾಯತ್ ಕಾರ್ಯನಿರ್ವಾಹಕ ಅಧಿಕಾರಿಗಳು ಶೀಘ್ರವೇ ಬ್ಯಾಂಕ್ ಅಧಿಕಾರಿಗಳು ವಿವಿಧ ಇಲಾಖೆ ಅನುಷ್ಠಾನ ಅಧಿಕಾರಿಗಳು, ಫಲಾನುಭವಿಗಳ ಸಭೆಯನ್ನು ಕರೆಯಬೇಕು. ಅದಾಲತ್ ಮಾದರಿಯಲ್ಲಿ ಅಹವಾಲುಗಳನ್ನು ಆಲಿಸಿ ಇತ್ಯರ್ಥ ಮಾಡುವ ಕಾರ್ಯ ಕೈಗೊಳ್ಳುವಂತೆ ಜಿಲ್ಲಾ ಉಸ್ತುವಾರಿ ಸಚಿವರು ಸೂಚನೆ ನೀಡಿದರು.
ಪರಿಶಿಷ್ಟ ಜಾತಿ ಪರಿಶಿಷ್ಟ ವರ್ಗಗಳ ಕಲ್ಯಾಣ ಕಾರ್ಯಕ್ರಮದಡಿ ನಿಗದಿಯಾಗಿರುವ ಅನುದಾನದಲ್ಲಿ ಆಗಿರುವ ಪ್ರಗತಿ ಪರಿಶೀಲನಾ ವೇಳೆ ಗ್ರಾಮೀಣ ಮೂಲಸೌಕರ್ಯ ಅಭಿವೃದ್ಧಿ ನಿಗಮದ ಅಧಿಕಾರಿಗಳು ಕಾಮಗಾರಿ ಅನುಷ್ಠಾನದಲ್ಲಿ ವಿಳಂಬ ಮಾಡುತ್ತಿದ್ದಾರೆ ಎಂದು ಶಾಸಕರಾದ ಆರ್. ನರೇಂದ್ರ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ತಮ್ಮ ವಿಧಾನಸಭಾ ಕ್ಷೇತ್ರದಲ್ಲಿ ಪರಿಶಿಷ್ಟ ವರ್ಗಗಳಿಗೆ 11 ಕೋಟಿ ರೂ.ಗೂ ಹೆಚ್ಚು ಕಾಮಗಾರಿ ನಡೆಯಬೇಕಿತ್ತು. ಆದರೆ ಅಧಿಕಾರಿಗಳ ನಿಧಾನ ಪ್ರವೃತ್ತಿಯಿಂದ ಕೆಲಸ ಸಾಗುತ್ತಿಲ್ಲವೆಂದು ಹೇಳಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಚಿವರು ಗಂಭೀರತೆಯಿಂದ ಕಾಲಮಿತಿಯೊಳಗೆ ಕೆಲಸ ಮಾಡಬೇಕು. ಇಲ್ಲವಾದಲ್ಲಿ ಶಿಸ್ತು ಕ್ರಮ ಜರುಗಿಸಬೇಕಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಪರಿಶಿಷ್ಟ ವರ್ಗಗಳ ಕಲ್ಯಾಣ, ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಸಮಾಜ ಕಲ್ಯಾಣ ಇಲಾಖೆಯಲ್ಲಿ ಹೊರಗುತ್ತಿಗೆ ವ್ಯವಸ್ಥೆಯಡಿ ಕಾರ್ಯನಿರ್ವಹಿಸುತ್ತಿರುವ ಶಿಕ್ಷಕರು ಇತರೆ ಸಿಬ್ಬಂದಿಗೆ ಹಲವು ತಿಂಗಳಿಂದ ವೇತನ ಪಾವತಿಯಾಗುತ್ತಿಲ್ಲ. ಈ ಬಗ್ಗೆ ಹಲವರಿಂದ ದೂರುಗಳು ಬಂದಿವೆ. ಈ ಹಿಂದೆಯೂ ಈ ಸಂಬಂಧ ಸೂಚನೆ ನೀಡಲಾಗಿದ್ದರೂ ಯಾವುದೇ ಸಮಸ್ಯೆ ಪರಿಹಾರವಾಗಿಲ್ಲವೆಂದು ಜಿಲ್ಲಾ ಪಂಚಾಯತ್ ಅಧ್ಯಕ್ಷ ರಾಮಚಂದ್ರ ಪ್ರಸ್ತಾಪಿಸಿದರು.
ಸ್ತುವಾರಿ ಸಚಿವರಾದ ಖಾದರ್ ಅವರು ಈ ಸಂದರ್ಭದಲ್ಲಿ ಮಾತನಾಡಿ, ವೇತನ ಪಾವತಿವಾಗದ ಗುತ್ತಿಗೆ ಸಂಸ್ಥೆ ವಿರುದ್ಧ ಕಾನೂನು ಕ್ರಮ ಜರುಗಿಸಿ ಕಪ್ಪುಪಟ್ಟಿಗೆ ಸೇರಿಸಿ ಎಂದರು. ಇದೇ ವೇಳೆ ಮಾತನಾಡಿದ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಡಾ. ಕೆ. ಹರೀಶ್ ಕುಮಾರ್ ಅವರು ಪ್ರಸ್ತುತ ಗುತ್ತಿಗೆದಾರರ ಅವಧಿ ಇನ್ನೆರಡು ತಿಂಗಳು ಮಾತ್ರ ಇದೆ. ವೇತನ ಪಾವತಿಗೆ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳು ಸೂಚನೆ ನೀಡಿದ್ದಾರೆ. ಮುಂದಿನ ಗುತ್ತಿಗೆ ನೀಡುವ ವೇಳೆ ಮತ್ತಷ್ಟು ಷರತ್ತುಗಳನ್ನು ವಿಧಿಸಿ ಅನಾನುಕೂಲ ಆಗದಂತೆ ಎಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲಾಗುತ್ತದೆ ಎಂದರು.
ಲೋಕಸಭಾ ಸದಸ್ಯ ಆರ್. ಧ್ರುವನಾರಾಯಣ ಮಾತನಾಡಿ, ಯಳಂದೂರು ಪಟ್ಟಣದಲ್ಲಿ ಯಾವುದೇ ಅಡೆತಡೆಯಿಲ್ಲದೆ ಹೆದ್ದಾರಿ ಕೆಲಸ ನಡೆದಿದೆ. ಚಾಮರಾಜನಗರವು ಜಿಲ್ಲಾ ಕೇಂದ್ರವಾಗಿದೆ. ಇಲ್ಲಿನ ರಸ್ತೆ ಅಭಿವೃದ್ಧಿಯಾಗದೇ ಇದ್ದರೆ ಹೇಗೆ ಎಂದು ಪ್ರಶ್ನಿಸಿದರು. ಈಗಾಗಲೇ ಪೂರ್ಣವಾಗಿರುವ ರಸ್ತೆಯಲ್ಲಿ ವಿದ್ಯುತ್ ಕಂಬಗಳನ್ನು ತೆರವುಗೊಳಿಸಿಲ್ಲ. ಈ ಕೆಲಸ ಕೂಡ ಶೀಘ್ರ ಆಗಬೇಕೆಂದು ಧ್ರುವನಾರಾಯಣ ಸೂಚಿಸಿದರು.
ಅರಣ್ಯ ಇಲಾಖೆ ಅಧಿಕಾರಿಗಳು ಬೇಡಗುಳಿಯಲ್ಲಿ ರಸ್ತೆ ಕಾಮಗಾರಿಗೆ ಅವಕಾಶ ನೀಡುತ್ತಿಲ್ಲವೆಂದು ಶಾಸಕರಾದ ಸಿ. ಪುಟ್ಟರಂಗಶೆಟ್ಟಿ ಅವರು ಪ್ರಸ್ತಾಪಿಸಿದರು. ಮೂಲ ಸೌಕರ್ಯಕ್ಕೆ ಯಾವುದೇ ತೊಂದರೆಯಾಗದಂತೆ ಅಧಿಕಾರಿಗಳು ನೋಡಿಕೊಳ್ಳಬೇಕೆಂದು ಶಾಸಕರು ತಿಳಿಸಿದರು.
ಪ್ರಸ್ತುತ ಸಂದರ್ಭದಲ್ಲಿ ಮಳೆ ಚೆನ್ನಾಗಿ ಸುರಿಯುತ್ತಿರುವ ಹಿನ್ನೆಲೆಯಲ್ಲಿ ರೈತರಿಗೆ ಅವಶ್ಯವಿರುವ ಬಿತ್ತನೆ ಬೀಜ, ಇನ್ನಿತರ ಪರಿಕರಗಳನ್ನು ಒದಗಿಸಲು ಯಾವುದೇ ಕೊರತೆಯಾಗದಂತೆ ನೋಡಿಕೊಳ್ಳಬೇಕೆಂದು ಕೃಷಿ ಇಲಾಖೆ ಅಧಿಕಾರಿಗಳಿಗೆ ಉಸ್ತುವಾರಿ ಸಚಿವರು ಸೂಚನೆ ಕೊಟ್ಟರು. ಇದೇ ವೇಳೆ ಹನೂರು ಭಾಗದಲ್ಲಿ ಬಿತ್ತನೆ ರಾಗಿಗೆ ಹೆಚ್ಚು ಬೇಡಿಕೆ ಇದೆ. ಕೂಡಲೇ ಅಗತ್ಯವಿರುವಷ್ಟು ಪೂರೈಸಿದರೆ ಅನುಕೂಲವಾಗುತ್ತದೆ ಎಂದರು.
ಶಾಸಕರಾದ ಎಸ್. ಜಯಣ್ಣ ಕೆರೆಗಳಲ್ಲಿ ನೀರು ತುಂಬಿಸಿದರೆ ಅಚ್ಚುಕಟ್ಟು ಭಾಗದಲ್ಲಿ ಭತ್ತ ಬೆಳೆಯಲು ಅನುಕೂಲವಾಗುತ್ತದೆ. ನೀರಾವರಿ ಇಲಾಖೆ ಅಧಿಕಾರಿಗಳು ಈ ಬಗ್ಗೆ ಗಮನ ನೀಡಬೇಕೆಂದು ತಿಳಿಸಿದರು.
ತೋಟಗಾರಿಕೆ, ಪಶುಪಾಲನೆ, ಸಮಾಜ ಕಲ್ಯಾಣ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ, ಕಾರ್ಮಿಕ ಇಲಾಖೆ, ಉದ್ಯೋಗ ಖಾತರಿ, ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಪರಿಶಿಷ್ಟ ವರ್ಗಗಳ ಕಲ್ಯಾಣ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ, ಡಾ. ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮ, ಲೋಕೋಪಯೋಗಿ, ರೇಷ್ಮೆ, ಶಿಕ್ಷಣ ಸೇರಿದಂತೆ ವಿವಿಧ ಇಲಾಖೆಗಳ ಯೋಜನೆ ಕಾರ್ಯಕ್ರಮ ಪ್ರಗತಿಯನ್ನು ಪರಿಶೀಲಿಸಲಾಯಿತು.
ಸಭೆಯಲ್ಲಿ ಜಿಲ್ಲಾಧಿಕಾರಿ ಬಿ.ರಾಮು, ಜಿಲ್ಲಾ ಪಂಚಾಯತ್ ಉಪಾಧ್ಯಕ್ಷ ಬಸವರಾಜು, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಧರ್ಮೇಂದ್ರಕುಮಾರ್ ಮೀನಾ, ತಾಲೂಕು ಪಂಚಾಯತ್ ಅಧ್ಯಕ್ಷ ಎಚ್.ವಿ. ಚಂದ್ರು, ಜಿಲ್ಲಾ ಪಂಚಾಯತ್ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಬಿ.ಕೆ. ಬೊಮ್ಮಯ್ಯ, ಹೆಚ್ಚುವರಿ ಜಿಲ್ಲಾಧಿಕಾರಿ ಕೆ.ಎಂ. ಗಾಯತ್ರಿ, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಜರಿದ್ದರು.







