ಅಲ್-ರಿಹಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಪ್ರಶಸ್ತಿ
ಕಾಪು, ಸೆ.16: ಕಾಪುವಿನ ಅಲ್-ರಿಹಾ ವಿವಿಧೋದ್ದೇಶ ಸಹಕಾರಿ ಸಂಘಕ್ಕೆ ಉಡುಪಿ ಜಿಲ್ಲೆಯ ಅತ್ಯುತ್ತಮ ವಿವಿಧೋದ್ದೇಶ ಸಹಕಾರಿ ಸಂಘ ಎಂಬ ಪ್ರಶಸ್ತಿ ದೊರಕಿದೆ. 2016-17ನೆ ಸಾಲಿನ ವ್ಯವಹಾರದಲ್ಲಿ ಸರ್ವತೋಮುಖ ಪ್ರಗತಿಯನ್ನು ಸಾಧಿಸಿದ್ದಕ್ಕಾಗಿ ಹಾಗೂ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನೊಂದಿಗೆ ಉತ್ತಮ ಬಾಂಧವ್ಯ ಹೊಂದಿದಕ್ಕಾಗಿ ಇತ್ತೀಚೆಗೆ ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ವಾರ್ಷಿಕ ಮಹಾಸಭೆಯಲ್ಲಿ ಪ್ರಶಸ್ತಿ ನೀಡಿ ಗೌರವಿಸಲಾಗಿದೆ.
ಪ್ರಶಸ್ತಿಯನ್ನು ದ.ಕ. ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕಿನ ಅಧ್ಯಕ್ಷ ಡಾ.ಎಂ.ಎನ್ ರಾಜೇಂದ್ರ ಕುಮಾರ್ ಅವರು ಅಲ್-ರಿಹಾ ವಿವಿಧೋದ್ದೇಶ ಸಹಕಾರಿ ಸಂಘದ ಅಧ್ಯಕ್ಷ ಹಾಜಿ ಎ.ಕೆ ಸುಲೈಮಾನ್ ಮತ್ತು ಪ್ರಧಾನ ವ್ಯವಸ್ಥಾಪಕಿ ಗೀತಾ ಎ.ಪಿ. ಅವರಿಗೆ ಪ್ರದಾನ ಮಾಡಿ ಸನ್ಮಾನಿಸಿದರು.
ಸಮಾರಂಭದಲ್ಲಿ ಉಡುಪಿ ಜಿಲ್ಲಾ ಸಹಕಾರಿ ಸಂಘಗಳ ಉಪನಿಬಂಧಕ ಪ್ರವೀಣ್ ಕುಮಾರ್, ದ.ಕ ಜಿಲ್ಲಾ ಕೇಂದ್ರ ಬ್ಯಾಂಕಿನ ನಿರ್ದೇಶಕ ಡಾ.ಐಕಳ ಬಾವ ದೇವಿ ಪ್ರಸಾದ್ ಶೆಟ್ಟಿ, ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಾಹಣಾಧಿಕಾರಿ ಸತೀಶ್ ಎಸ್., ಬ್ಯಾಂಕಿನ ನಿರ್ದೇಶಕ, ಸಹಕಾರಿ ಸಂಘಗಳ ಉಡುಪಿ ಜಿಲ್ಲಾ ಮೇಲ್ವಿಚಾರಕ ಬಾಲಕೃಷ್ಣ ಭಟ್, ಅಲ್-ರಿಹಾ ವಿವಿಧೋದ್ದೇಶ ಸಹಕಾರಿ ಸಂಘದ ನಿರ್ದೇಶಕ ಎಚ್.ಅಬ್ದುಲ್ಲಾ ಎಂ.ಪಿ.ಮೊಯ್ದಿನಬ್ಬ, ಸಬೀಹಾ ಖಾತೂನ್ ಹಾಗೂ ಅಲ್-ರಿಹಾ ವಿವಿಧೋದ್ದೇಶ ಸಹಕಾರಿ ಸಂಘದ ಸಿಬ್ಬಂದಿ ಉಪಸ್ಥಿತರಿದ್ದರು.