ಕುಡಿಯುವ ನೀರಿನ ಯೋಜನೆಗೆ ಹೆಚ್ಚುವರಿ 10 ಕೋಟಿ ರೂ.ಅನುದಾನ: ಸಚಿವ ಸೀತಾರಾಂ ಭರವಸೆ

ಮಡಿಕೇರಿ, ಸೆ.16: ಕೊಡಗು ಜಿಲ್ಲೆಯಲ್ಲಿ ಬಾಕಿ ಉಳಿದಿರುವ ಕುಡಿಯುವ ನೀರಿನ ಯೋಜನೆಗಳನ್ನು ಪೂರ್ಣಗೊಳಿಸಲು ಹೆಚ್ಚುವರಿಯಾಗಿ 10 ಕೋಟಿ ರೂ. ಸರ್ಕಾರದ ಮೂಲಕ ಬಿಡುಗಡೆಗೊಸಿವುದಾಗಿ ಜಿಲ್ಲಾ ಉಸ್ತುವಾರಿ ಸಚಿವ ಎಂ.ಆರ್.ಸೀತಾರಾಂ ಭರವಸೆ ನೀಡಿದ್ದಾರೆ.
ನಗರದ ಕೋಟೆ ಹಳೆ ವಿಧಾನ ಸಭಾಂಗಣದಲ್ಲಿ ನಡೆದ ತ್ರೈಮಾಸಿಕ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಕುಡಿಯುವ ನೀರಿನ ಸಮಸ್ಯೆಗಳನ್ನು ಬಗೆಹರಿಸಲು ಅಗತ್ಯ ಕ್ರಮ ಕೈಗೊಳ್ಳುವುದಾಗಿ ತಿಳಿಸಿದರು.
ಜಿಲ್ಲಾ ಪಂಚಾಯತ್ ಅಧ್ಯಕ್ಷರು ಕುಡಿಯುವ ನೀರಿಗಾಗಿ 10 ಕೋಟಿ ರೂ. ಹೆಚ್ಚುವರಿಯಾಗಿ ಬಿಡುಗಡೆ ಮಾಡುವಂತೆ ಮನವಿ ಮಾಡಿದ್ದು, ಈ ಬಗ್ಗೆ ಸರ್ಕಾರದೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳುವುದಾಗಿ ಹೇಳಿದರು.
ಕುಡಿಯುವ ನೀರಿನ ಸಮಸ್ಯೆ ತಲೆದೋರಬಾರದೆಂದು ಸರ್ಕಾರ ಸಾಕಷ್ಟು ಅನುದಾನ ಬಿಡುಗಡೆ ಮಾಡುತ್ತಿದ್ದು, ಇದನ್ನು ಸದುಪಯೋಗ ಪಡಿಸಿಕೊಳ್ಳುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದರು.
ಅಭಿವೃದ್ಧಿ ಕಾರ್ಯಗಳನ್ನು ಅನುಷ್ಠಾನಗೊಳಿಸುವಲ್ಲಿ ವಿವಿಧ ಇಲಾಖೆಗಳು ಇನ್ನಷ್ಟು ಚುರುಕಾಗಬೇಕೆಂದರು. ಪರಿಶಿಷ್ಟ ಜಾತಿ ಮತ್ತು ಪಂಗಡದ ಫಲಾನುಭವಿಗಳಿಗೆ ಮಳೆಗಾಲದಲ್ಲಿ ಅಗತ್ಯವಿರುವ ಟಾರ್ಪಲ್ ಮತ್ತು ಆಹಾರದ ವ್ಯವಸ್ಥೆ ಕಲ್ಪಿಸುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಆದೇಶಿಸಿದರು.
ಅಧಿಕಾರಿಗಳು ಬರಲ್ಲ: ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಸೇರಿದಂತೆ ವಿವಿಧ ಇಲಾಖೆಗಳಲ್ಲಿ ಖಾಲಿ ಇರುವ ಹುದ್ದೆಗಳ ಭರ್ತಿಗೆ ಸಾಕಷ್ಟು ಪ್ರಯತ್ನಿಸುತ್ತಿದ್ದರು ಜಿಲ್ಲೆಗೆ ಬರಲು ಯಾರೂ ಒಪ್ಪುತ್ತಿಲ್ಲವೆಂದು ಸಚಿವ ಸೀತಾರಾಂ ಅಸಹಾಯಕತೆ ವ್ಯಕ್ತಪಡಿಸಿದರು.
ಗ್ರಾಮ ಪಂಚಾಯತ್ ಅಧಿಕಾರಿಗಳ ವಿಳಂಬ ಕಾರ್ಯದ ಬಗ್ಗೆ ಕನ್ನಡ ಜಾಗೃತಿ ಸಮಿತಿ ಸದಸ್ಯ ಲೋಕೇಶ್ ಸಾಗರ್ ಸಭೆಯ ಗಮನ ಸೆಳೆದಾಗ, ಜಿಲ್ಲೆಯಲ್ಲಿ ಸಾಕಷ್ಟು ಅಧಿಕಾರಿಗಳ ಕೊರತೆ ಇದೆಯೆಂದು ಸಚಿವರು ತಿಳಿಸಿದರು. ಇಂದಿನ ಪರಿಸ್ಥಿತಿ ಹೇಗಾಗಿದೆ ಎಂದರೆ, ಇರುವವರನ್ನೆ ಉಳಿಸಿಕೊಂಡು ಕೆಲಸ ಕಾರ್ಯಗಳನ್ನು ನಿರ್ವಹಿಸಬೇಕಾದ ಅನಿವಾರ್ಯತೆ ಇದೆ. ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳು ವರ್ಗಾವಣೆಯಾಗಿ 3 ತಿಂಗಳು ಕಳೆದಿದೆ. ಈ ಹುದ್ದೆಯನ್ನು ತುಂಬಲು ರಾಜ್ಯ ಮಟ್ಟದಲ್ಲಿ ಸಾಕಷ್ಟು ಪ್ರಯತ್ನ ಮಾಡಿದರು ಯಾರೊಬ್ಬರು ಇಲ್ಲಿಗೆ ಬರಲು ಒಪ್ಪುತ್ತಿಲ್ಲ. ಪೊಲೀಸ್ ಇಲಾಖೆ ಸೇರಿದಂತೆ ಅನೇಕ ಇಲಾಖೆಗಳಲ್ಲಿ ಹುದ್ದೆ ಖಾಲಿ ಇದ್ದು, ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳ ಹೆಸರನ್ನು ನೀವೇ ಸೂಚಿಸಿದರೆ ಅವರನ್ನು ಜಿಲ್ಲೆಗೆ ಕರೆ ತರುವ ಪ್ರಯತ್ನ ಮಾಡುವುದಾಗಿ ಲೋಕೇಶ್ ಸಾಗರ್ಗೆ ಹೇಳಿದರು.
ತಾವು ಜಿಲ್ಲಾ ಉಸ್ತುವಾರಿ ಸಚಿವರಾದ ನಂತರ ಕಳೆದ ಒಂದು ವರ್ಷ 3 ತಿಂಗಳಿನಿಂದ ಜಿಲ್ಲೆಯ ಜನರ ಮತ್ತು ಜನಪ್ರತಿನಿಧಿಗಳ ಸಲಹೆ ಸೂಚನೆಗಳನ್ನು ಪಡೆದು ಕೆಲಸ ಮಾಡುತ್ತಿದ್ದೇನೆ. ಆದರೆ, ಖಾಲಿ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಮಾತ್ರ ಅಸಹಾಯಕನಾಗಿದ್ದೇನೆ ಎಂದು ಸಚಿವ ಸೀತಾರಾಂ ಬೇಸರ ವ್ಯಕ್ತಪಡಿಸಿದರು.
ಕುಡಿಯುವ ನೀರಿನ ಸಮಸ್ಯೆಗೆ ಸಂಬಂಧಿಸಿಸಂತೆ ಮಾತನಾಡಿದ ಜಿ.ಪಂ ಅಧ್ಯಕ್ಷ ಬಿ.ಎ.ಹರೀಶ್, ಕಳೆದ ವರ್ಷ ಕೊಡಗು ಜಿಲ್ಲೆಯನ್ನು ಬರಪೀಡಿತ ಪ್ರದೇಶವೆಂದು ಘೋಷಿಸಲಾಗಿತ್ತು. ಪ್ರಸ್ತುತ ವರ್ಷ ಕುಡಿಯುವ ನೀರಿನ ಯೋಜನೆಗಳಿಗಾಗಿ 5.94 ಕೋಟಿ ಅನುದಾನ ಬಂದಿದೆ. ಆದರೆ, ಹಳೆಯ ಕಾಮಗಾರಿಗಳ 6.39 ಕೋಟಿ ರೂ. ಬಿಲ್ ಪಾವತಿಗೆ ಬಾಕಿ ಇದೆ. ಹೀಗಾದರೆ ಕುಡಿಯುವ ನೀರಿನ ಯೋಜನೆಗಳನ್ನು ಅನುಷ್ಟಾನಗೊಳಿಸುವುದು ಹೇಗೆ ಎಂದು ಪ್ರಶ್ನಿಸಿದ ಹರೀಶ್, 10 ಕೋಟಿ ರೂ.ಗಳನ್ನು ಹೆಚ್ಚುವರಿಯಾಗಿ ಬಿಡುಗಡೆ ಮಾಡಿಸುವಂತೆ ಸಚಿವರಲ್ಲಿ ಮನವಿ ಮಾಡಿದರು.
ಕೆಡಿಪಿ ನಾಮ ನಿರ್ದೇಶಿತ ಸದಸ್ಯ ಹಾಗೂ ಜಿಲ್ಲಾ ಪಂಚಾಯತ್ ಮಾಜಿ ಅಧ್ಯಕ್ಷ ಪಾಪು ಸಣ್ಣಯ್ಯ ಮಾತನಾಡಿ, ಗ್ರಾಮೀಣ ಕುಡಿಯುವ ನೀರಿನ ಯೋಜನೆಗಳು ವಿಳಂಬ ಗತಿಯಲ್ಲಿ ಸಾಗುತ್ತಿದೆಯೆಂದು ಅಸಮಾಧಾನ ವ್ಯಕ್ತಪಡಿಸಿದರು.
ಹಣ ಇದ್ದರು ಸಮರ್ಪಕವಾಗಿ ಕಾರ್ಯಯೋಜನೆ ನಡೆಯುತ್ತಿಲ್ಲ. ಸಾಮರ್ಥ್ಯವಿಲ್ಲದ ಮೋಟಾರುಗಳನ್ನು ಬಳಸಲಾಗುತ್ತಿದ್ದು, ಗ್ರಾಮಗಳಿಗೆ ಸಮರ್ಪಕವಾಗಿ ನೀರನ್ನು ಒದಗಿಸಲಾಗುತ್ತಿಲ್ಲವೆಂದು ಸಚಿವರ ಗಮನ ಸೆಳೆದರು.
ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ: ಸೋಮವಾರಪೇಟೆ ತಾಲೂಕಿನ ಹೇರೂರು ಗಿರಿಜನ ಹಾಡಿ ವ್ಯಾಪ್ತಿಯಲ್ಲಿ ವಾಸವಿರುವ ಅರ್ಹ ಗಿರಿಜನ ಫಲಾನುಭವಿಗಳಿಗೆ ಮುಂದಿನ ಒಂದು ವಾರದಲ್ಲಿ ಹಕ್ಕುಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಉಪ ವಿಭಾಗಾಧಿಕಾರಿ, ಸಮಾಜ ಕಲ್ಯಾಣಾಧಿಕಾರಿ ಹಾಗೂ ಗಿರಿಜನ ಅಭಿವೃದ್ಧಿ ಅಧಿಕಾರಿ ವಿರುದ್ಧ ಕ್ರಮ ಕೈಗೊಳ್ಳುವುದಾಗಿ ಸಚಿವರು ಎಚ್ಚರಿಕೆ ನೀಡಿದರು.
ಹೇರೂರು ಹಾಡಿಯ ಬಗ್ಗೆ ವಿಷಯ ಪ್ರಸ್ತಾಪಿಸಿದ ಕೆಡಿಪಿ ಸಮಿತಿ ಸದಸ್ಯರಾದ ಜೆರ್ಮಿ ಡಿಸೋಜ, ಹೇರೂರು ವ್ಯಾಪ್ತಿಯ 180 ಏಕರೆ ಜಾಗ ಸಮಾಜ ಕಲ್ಯಾಣ ಇಲಾಖೆಯ ಹೆಸರಿನಲ್ಲಿ ಇದೆಯಾದರು, ಕಳೆದ ಅನೇಕ ವರ್ಷಗಳಿಂದ ಇಲ್ಲಿ ಕೃಷಿ ಮಾಡಿಕೊಂಡು ವಾಸವಾಗಿರುವ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಿಲ್ಲವೆಂದು ಅಸಮಾಧಾನ ವ್ಯಕ್ತಪಡಿಸಿದರು.
ಉಪವಿಭಾಗಾಧಿಕಾರಿ ನಂಜುಂಡೇಗೌಡ ಮಾತನಾಡಿ, ಸರ್ವೇ ಕಾರ್ಯ ಮುಗಿಸಿ ಈಗಾಗಲೇ ವರದಿ ನೀಡಲಾಗಿದೆ ಎಂದರು.
ಗಿರಿಜನ ಅಭಿವೃದ್ಧಿ ಅಧಿಕಾರಿ ಮಾತನಾಡಿ, ಹಕ್ಕುಪತ್ರ ನೀಡಲು ಸಮಾಜ ಕಲ್ಯಾಣ ಇಲಾಖೆ ಹಕ್ಕುಪತ್ರ ವಿತರಣೆಗೆ ಸಹ ಅನುಮತಿ ನೀಡಬೇಕಾಗಿದೆಯೆಂದು ಸಮಜಾಯಿಷಿಕೆ ನೀಡಿದರು. ಮೂರು ಇಲಾಖೆಯ ಅಧಿಕಾರಿಗಳು ಸ್ಪಷ್ಟ ಉತ್ತರವನ್ನು ನೀಡದೆ ಸಭೆಯಲ್ಲಿ ಗೊಂದಲ ಸೃಷ್ಟಿಸಿದ್ದರಿಂದ ಅಸಮಾಧಾನಗೊಂಡ ಸಚಿವ ಸೀತಾರಾಂ, ಮೂವರನ್ನು ತರಾಟೆಗೆ ತೆಗೆದುಕೊಂಡರು.
ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ ಅವರು ಅಧಿಕಾರಿಗಳ ವಿರುದ್ಧ ತೀವ್ರ ಅಸಮಾಧಾನ ವ್ಯಕ್ತಪಡಿಸಿ ಗಿರಿಜನರಿಗೆ ಸಂಬಂಧಿಸಿದ ಸಭೆಗಳಲ್ಲಿ ಈ ವಿಚಾರವನ್ನು ಪ್ರಸ್ತಾಪಿಸಿ ಗೊಂದಲವನ್ನು ಯಾಕೆ ನಿವಾರಿಸಿಕೊಂಡಿಲ್ಲವೆಂದು ಪ್ರಶ್ನಿಸಿದರು.
ಸಚಿವ ಸೀತಾರಾಂ ಮಾತನಾಡಿ, ಇಲಾಖೆ ಇಲಾಖೆಗಳ ನಡುವೆಯೆ ಹೊಂದಾಣಿಕೆಯ ಕೊರತೆ ಇದೆಯೆಂದು ಟೀಕಿಸಿದರು. ಮುಂದಿನ ಒಂದು ವಾರದ ಒಳಗೆ ಹೇರೂರಿನ ಅರ್ಹ ಫಲಾನುಭವಿಗಳಿಗೆ ಹಕ್ಕುಪತ್ರ ನೀಡಲು ಅಗತ್ಯ ಕ್ರಮ ಕೈಗೊಳ್ಳದಿದ್ದಲ್ಲಿ ಮೂವರು ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಬೇಕಾಗುತ್ತದೆ ಎಂದರು.
ಜಿಪಂ ಸಾಮಾಜಿಕ ನ್ಯಾಯ ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ಗೋಣಿಮರೂರು ಹಾಡಿ ವ್ಯಾಪ್ತಿಯಲ್ಲಿ ಆಶ್ರಯ ಮತ್ತು ಮೂಲಭೂತ ಸೌಲಭ್ಯವಿಲ್ಲದೆ ಬದುಕುತ್ತಿರುವ ಗಿರಿಜನರ ಬದುಕಿನ ಬಗ್ಗೆ ಸಚಿವರ ಗಮನ ಸೆಳೆದರು. ಸ್ಥಳ ಪರಿಶೀಲನೆ ನಡೆಸುವಂತೆ ಗಿರಿಜನ ಅಭಿವೃದ್ಧಿ ಅಧಿಕಾರಿಗಳಿಗೆ ಸೂಚನೆ ನೀಡಿದ ಸಚಿವ ಸೀತಾರಾಂ, ಅವಕಾಶವಿದ್ದಲ್ಲಿ ಅರ್ಹರಿಗೆ ಪುನರ್ವಸತಿ ಕಲ್ಪಸಿಕೊಡಿ ಎಂದು ಸೂಚನೆ ನೀಡಿದರು.
ಕಟ್ಟಡ ತೆರವು: ಮಡಿಕೇರಿ ನಗರದಲ್ಲಿ ನಿಯಮ ಬಾಹಿರವಾಗಿ ತಲೆ ಎತ್ತಿರುವ ಮೂರು ಅಂತಸ್ತಿನ ಕಟ್ಟಡದ ಒಂದು ಅಂತಸ್ತನ್ನು ಮಳೆ ನಿಂತ ಒಂದು ವಾರದ ಒಳಗೆ ತೆರವುಗೊಳಿಸುವಂತೆ ಸಚಿವರು ಸೂಚನೆ ನೀಡಿದರು. ಈ ಬಗ್ಗೆ ಮಾಹಿತಿ ನೀಡಿದ ಪೌರಾಯುಕ್ತರಾದ ಬಿ.ಶುಭ, ಮಳಿಗೆಯ ಮಾಲಕರ ಅರ್ಜಿಯನ್ನು ನ್ಯಾಯಾಲಯ ವಜಾಗೊಳಿಸಿದ್ದು, ತೆರವು ಕಾರ್ಯಾಚರಣೆಗೆ ಅವಕಾಶ ಸಿಕ್ಕಿದೆ ಎಂದರು.
ಸ್ಥಾಯಿ ಸಮಿತಿ ಅಧ್ಯಕ್ಷ ಶ್ರೀನಿವಾಸ್ ಮಾತನಾಡಿ, ಜಿಲ್ಲೆಯ ಕ್ರೀಡಾಪಟುಗಳಿಗೆ ಕ್ರಿಡಾ ಇಲಾಖೆ ಸೂಕ್ತ ಸೌಲಭ್ಯಗಳನ್ನು ಮತ್ತು ಕ್ರೀಡಾಕೂಟದ ಖರ್ಚು ವೆಚ್ಚಗಳನ್ನು ನೀಡುತ್ತಿಲ್ಲವೆಂದು ಆರೋಪಿಸಿ, ಕ್ರೀಡಾ ಸಮವಸ್ತ್ರವನ್ನು ಕೂಡ ನೀಡದೆ ನಿರ್ಲಕ್ಷಿಸಲಾಗುತ್ತಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು.
ರಾಜ್ಯ ಸರಕಾರದ 50 ಸಾವಿರದ ಒಳಗಿನ ಸಾಲ ಮನ್ನಾ ಸೌಲಭ್ಯದ ಕುರಿತು ಸಚಿವರ ಪ್ರಶ್ನೆಗೆ ಸಹಕಾರ ಇಲಾಖೆಯ ಅಧಿಕಾರಿ ಉತ್ತರಿಸಿದರು. ಜಿಲ್ಲಾ ವ್ಯಾಪ್ತಿಯ 33,915 ರೈತರಿಗೆ ಸಹಕಾರಿ ಬ್ಯಾಂಕ್ಗಳ ಮೂಲಕ 151.74 ಕೋಟಿ ಸಾಲ ಮನ್ನಾ ಸೌಲಭ್ಯ ದೊರಕಲಿದೆ ಎಂದು ತಿಳಿಸಿದರು.
ಕೃಷಿ ಇಲಾಖಾ ಅಧಿಕಾರಿ ಮಾತನಾಡಿ, ಕಳೆದ ಸಾಲಿನಲ್ಲಿ ಮುಂಗಾರಿನ ಕೊರತೆಯಿಂದ ಉಂಟಾದ ಬೆಳೆ ಹಾನಿಗೆ ಸಂಬಂಧಿಸಿದಂತೆ 6260 ರೈತರಿಗೆ 2.30 ಕೋಟಿ ರೂ. ನೆರವನ್ನು ವಿತರಿಸಲಾಗಿದೆಯೆಂದು ಮಾಹಿತಿ ನೀಡಿದರು.
ಸಭೆಯಲ್ಲಿ ವಿಧಾನ ಪರಿಷತ್ ಸದಸ್ಯೆ ವೀಣಾ ಅಚ್ಚಯ್ಯ, ಎಸ್ಪಿ ರಾಜೇಂದ್ರ ಪ್ರಸಾದ್, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷೆ ಪದ್ಮಿನಿ ಪೊನ್ನಪ್ಪ ಮತ್ತಿತರು ಉಪಸ್ಥಿತರಿದ್ದರು.







