‘ಆರ್ಥಿಕವಾಗಿ ದುರ್ಬಲ ವರ್ಗದವರಿಗೆ ಒಂದು ಲಕ್ಷ ಮನೆ’
ರಾಜ್ಯ ಸಚಿವ ಸಂಪುಟ ನಿರ್ಧಾರ

ಬೆಂಗಳೂರು, ಸೆ.27: ಆರ್ಥಿಕವಾಗಿ ದುರ್ಬಲವಾಗಿರುವ ವರ್ಗದವರಿಗಾಗಿ 6 ಸಾವಿರ ಕೋಟಿ ರೂ.ವೆಚ್ಚದಲ್ಲಿ ಬೆಂಗಳೂರು ನಗರದಲ್ಲಿ ಒಂದು ಲಕ್ಷ ಬಹು ಮಹಡಿ ಮನೆಗಳನ್ನು ಸರಕಾರಿ ಜಮೀನಿನಲ್ಲಿ ನಿರ್ಮಿಸಲು ನಿರ್ಧರಿಸಲಾಗಿದೆ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳ ಸಚಿವ ಟಿ.ಬಿ.ಜಯಚಂದ್ರ ತಿಳಿಸಿದ್ದಾರೆ.
ಬುಧವಾರ ವಿಧಾನಸೌಧದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಒತ್ತುವರಿಯಿಂದ ತೆರವಾಗಿರುವ 4500 ಎಕರೆ ಭೂಮಿ ಕಂದಾಯ ಇಲಾಖೆಯ ಬಳಿ ಲಭ್ಯವಿದೆ. ಈ ಪೈಕಿ 468 ಎಕರೆ ಭೂಮಿಯನ್ನು ಮನೆಗಳ ನಿರ್ಮಾಣಕ್ಕಾಗಿ ಗುರುತಿಸಲಾಗಿದೆ ಎಂದರು.
ರಾಜ್ಯ ಗೃಹ ಮಂಡಳಿ, ಕೊಳಚೆ ಪ್ರದೇಶ ನಿರ್ಮೂಲನಾ ಮಂಡಳಿ ಹಾಗೂ ರಾಜೀವ್ ಗಾಂಧಿ ವಸತಿ ನಿಗಮದ ಮೂಲಕ ಒಂದು ಲಕ್ಷ ಮನೆಗಳನ್ನು ನಿರ್ಮಿಸಲಾಗುವುದು. ಇದಕ್ಕಾಗಿ 6 ಸಾವಿರ ಕೋಟಿ ರೂ. ಅಗತ್ಯವಿದೆ. ಹುಡ್ಕೋ ಹಾಗೂ ಬ್ಯಾಂಕ್ಗಳ ಮೂಲಕ 500 ಕೋಟಿ ರೂ.ಸಾಲ, ಕೇಂದ್ರ ಸರಕಾರದಿಂದ 1300 ಕೋಟಿ ರೂ.ಪಡೆಯಲಾಗುವುದು. ಇದರಲ್ಲಿ ರಾಜ್ಯ ಸರಕಾರವು ತನ್ನ ಪಾಲು ನೀಡಲಿದೆ. ಫಲಾನುಭವಿಗಳಿಂದ ತಲಾ 1 ಲಕ್ಷ ರೂ.ವಂತಿಗೆ ಪಡೆಯಲಾಗುವುದು ಎಂದು ಹೇಳಿದರು.
ರಾಜ್ಯದಲ್ಲಿ ಹಾಲಿ ಇರುವ 1512 ಪ್ರಾಥಮಿಕ ಪಶು ಚಿಕಿತ್ಸಾ ಕೇಂದ್ರಗಳ ಪೈಕಿ 302 ಚಿಕಿತ್ಸಾ ಕೇಂದ್ರಗಳನ್ನು 2017-18ನೆ ಸಾಲಿನಲ್ಲಿ 36.72 ಕೋಟಿ ರೂ.ವೆಚ್ಚದಲ್ಲಿ ಪಶು ಚಿಕಿತ್ಸಾಲಯಗಳನ್ನಾಗಿ ಮೇಲ್ದರ್ಜೆಗೇರಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದ ಅವರು, ರಾಜ್ಯದ ಕರಾವಳಿ ಜಿಲ್ಲೆಗಳ ಮಳೆಯಾಶ್ರಿತ ಪ್ರದೇಶಗಳು ಸೇರಿದಂತೆ ರಾಜ್ಯದ ಎಲ್ಲ ಜಿಲ್ಲೆಗಳ ಸಣ್ಣ ಮತ್ತು ಅತಿ ಸಣ್ಣ ರೈತರಿಗೆ ಕೃಷಿ ಭಾಗ್ಯ ಯೋಜನೆಯಡಿಯಲ್ಲಿ ಪ್ರತೀ ಘಟಕಕ್ಕೆ 2 ಸಾವಿರ ರೂ.ಗಳಂತೆ 30 ಕೋಟಿ ರೂ.ವೆಚ್ಚದಲ್ಲಿ ‘ತರಕಾರಿ ಬೀಜಗಳ ಕಿಟ್’ ವಿತರಿಸಲಾಗುವುದು. ಅಂತೆಯೇ, ಪ್ರೋತ್ಸಾಹ ಧನವನ್ನು 1.47 ಲಕ್ಷ ಎಕರೆ ಪ್ರದೇಶದಲ್ಲಿ ಬೆಳೆಯುವ ತೋಟಗಾರಿಕೆ ಬೆಳೆಯ ರೈತರಿಗೆ ವಿತರಣೆ ಮಾಡಲು ನೂತನ ಘಟಕ ಸ್ಥಾಪಿಸಲು ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ಹೇಳಿದರು.
ಜೈವಿಕ ತಂತ್ರಜ್ಞಾನ ಕ್ಷೇತ್ರದಲ್ಲಿ ಹೆಚ್ಚಿನ ಸಂಶೋಧನೆಗೆ ಪ್ರೋತ್ಸಾಹ ನೀಡಲು ‘ಕರ್ನಾಟಕ ಜೈವಿಕ ತಂತ್ರಜ್ಞಾನ ನೀತಿ 2017-2022’ಕ್ಕೆ ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ. ಅಲ್ಲದೆ, ಬೆಂಗಳೂರಿನಲ್ಲಿ ಡಾಟಾ ಸೈನ್ಸ್ ಮತ್ತು ಆರ್ಟಿಫಿಷಿಯಲ್ ಇಂಟೆಲೆಜೆನ್ಸ್ ಕುರಿತು ಸೆಂಟರ್ ಫಾರ್ ಎಕ್ಸಲೆನ್ಸಿಯನ್ನು 40 ಕೋಟಿ ರೂ.ವೆಚ್ಚದಲ್ಲಿ ಸ್ಥಾಪಿಸಲು ತೀರ್ಮಾನಿಸಲಾಗಿದೆ ಎಂದರು.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆಯ ವಾಹನ ಬಲಕ್ಕೆ 3 ಸಾವಿರ ಹೊಸ ಬಸ್ ಗಳನ್ನು ಸೇರ್ಪಡೆಗೊಳಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದ್ದು, ಈ ಪೈಕಿ 1500 ಬಸ್ ಗಳನ್ನು ರಾಜ್ಯ ಸರಕಾರ ಖರೀದಿಸಲಿದೆ. ಇನ್ನುಳಿದ 1500 ಬಸ್ ಗಳನ್ನು ಖಾಸಗಿ ಗುತ್ತಿಗೆದಾರರಿಂದ ಬಾಡಿಗೆ ಆಧಾರದಲ್ಲಿ ಪಡೆಯಲು ಉದ್ದೇಶಿಸಲಾಗಿದೆ ಎಂದು ಹೇಳಿದರು.
ಬೆಂಗಳೂರಿನ ಎಂ.ಜಿ.ರಸ್ತೆ, ವಿಧಾನಸೌಧ, ಇಂದಿರಾ ನಗರ, ಬಾಣಸವಾಡಿ, ಎಚ್ಎಸ್ಆರ್ ಬಡಾವಣೆ, ಎಚ್ಬಿಆರ್ ಬಡಾವಣೆ, ಕೋರಮಂಗಲ, ಕಾಚರಕನಹಳ್ಳಿ ಸೇರಿದಂತೆ ಇನ್ನಿತರ ಪ್ರದೇಶಗಳಲ್ಲಿ ಆರು ಸಾವಿರ ಬೈಸಿಕಲ್ ಬಳಕೆ ವ್ಯವಸ್ಥೆಯನ್ನು 80.18 ಕೋಟಿ ರೂ.ವೆಚ್ಚದಲ್ಲಿ ಅನುಷ್ಠಾನಗೊಳಿಸಲು ನಿರ್ಧರಿಸಲಾಗಿದೆ ಎಂದು ತಿಳಿಸಿದರು.
ಬಿಬಿಎಂಪಿಗೆ ಹೊಸದಾಗಿ ಸೇರ್ಪಡೆಯಾಗಿರುವ 110 ಗ್ರಾಮಗಳಿಗೆ ಒಳಚರಂಡಿ ವ್ಯವಸ್ಥೆ ಹಾಗೂ 775 ದಶ ಲಕ್ಷ ಲೀಟರ್ ಕುಡಿಯುವ ನೀರು ಸರಬರಾಜು ಮಾಡಲು ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿಯ ಕಾವೇರಿ ನೀರು ಸರಬರಾಜು ಹಂತದ ಯೋಜನಾ ವೆಚ್ಚವನ್ನು 5052 ಕೋಟಿ ರೂ.ಗಳಿಂದ 5550 ಕೋಟಿ ರೂ.ಗಳಿಗೆ ಹೆಚ್ಚಿಸಲು ಸಚಿವ ಸಂಪುಟ ಸಭೆ ಅನುಮೋದನೆ ನೀಡಿದೆ ಎಂದರು.
ಜೈಕಾದಿಂದ 4662 ಕೋಟಿ ರೂ., ರಾಜ್ಯ ಸರಕಾರ ಹಾಗೂ ಬೆಂಗಳೂರು ನೀರು ಸರಬರಾಜು ಮತ್ತು ಒಳಚರಂಡಿ ಮಂಡಳಿ ತಲಾ 444 ಕೋಟಿ ರೂ.ಗಳಂತೆ ಒಟ್ಟು 5550 ಕೋಟಿ ರೂ.ಗಳನ್ನು ಈ ಯೋಜನೆಗೆ ಖರ್ಚು ಮಾಡಲಾಗುವುದು. ಬೆಳಗಾವಿ, ದಾವಣಗೆರೆ, ಹುಬ್ಬಳ್ಳಿ-ಧಾರವಾಡ, ಮಂಗಳೂರು, ಶಿವಮೊಗ್ಗ, ತುಮಕೂರು ಮಾದರಿಯಲ್ಲಿ ಬೆಂಗಳೂರು ನಗರದಲ್ಲಿಯೂ ಸ್ಮಾರ್ಟ್ ಸಿಟಿ ಯೋಜನೆಯ ಅನುಷ್ಠಾನಕ್ಕೆ ವಿಶೇಷ ಉದ್ದೇಶಿತ ವಾಹಕ ಸಾಂಸ್ಥಿಕ ರಚನೆಗೆ ಅನುಮೋದನೆ ನೀಡಲಾಗಿದೆ ಎಂದು ವಿವರಿಸಿದರು.
ರಾಜ್ಯ ಸರಕಾರದ ವತಿಯಿಂದ ಗ್ರಾಮೀಣ ಪ್ರದೇಶದ ಯುವಕರಿಗಾಗಿ ‘ಯುವ ಚೈತನ್ಯ ಯೋಜನೆ’ಯನ್ನು 20 ಕೋಟಿ ರೂ.ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಸಚಿವ ಸಂಪುಟ ಸಭೆಯಲ್ಲಿ ಒಪ್ಪಿಗೆ ನೀಡಲಾಗಿದೆ ಎಂದ ಅವರು, ಮಂಗಳೂರು ತಾಲೂಕಿನ ಸುರತ್ಕಲ್-ಕಬಕ ರಾಜ್ಯ ಹೆದ್ದಾರಿ ಸಂಖ್ಯೆ.101ರ ಕಿ.ಮೀ 0.50 ಇಂದ 4.80ರವರೆಗಿನ ರಸ್ತೆಯನ್ನು 6 ಪಥಗಳ ರಸ್ತೆಯನ್ನಾಗಿ 58 ಕೋಟಿ ರೂ.ಅಂದಾಜು ಮೊತ್ತದಲ್ಲಿ ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ ಎಂದು ಮಾಹಿತಿ ನೀಡಿದರು.
ರಾಜ್ಯ ವಿಧಾನಮಂಡಲದ ಚಳಿಗಾಲದ ಅಧಿವೇಶನವನ್ನು ನವೆಂಬರ್ ತಿಂಗಳಲ್ಲಿ ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಸಲು ನಿರ್ಧರಿಸಲಾಗಿದೆ. ಕಲಾಪದ ದಿನಾಂಕವನ್ನು ನಿಗದಿ ಮಾಡುವ ಪರಮಾಧಿಕಾರವನ್ನು ಸಚಿವ ಸಂಪುಟ ಸಭೆಯು ಮುಖ್ಯಮಂತ್ರಿಯ ವಿವೇಚನೆಗೆ ಬಿಟ್ಟಿದೆ.
-ಟಿ.ಬಿ.ಜಯಚಂದ್ರ, ಕಾನೂನು ಸಚಿವ







