ಹಬ್ಬಗಳು ಭಾರತೀಯ ಸಂಸ್ಕೃತಿ, ಪರಂಪರೆಯ ಪ್ರತಿಬಿಂಬ: ಯು.ಟಿ.ಖಾದರ್

ಮಡಿಕೇರಿ, ಅ.1: ಪ್ರತಿಯೊಂದು ಹಬ್ಬಕ್ಕೂ ವಿಶೇಷ ಅರ್ಥವಿದ್ದು, ಭಾರತೀಯ ಸಂಸ್ಕೃತಿ ಮತ್ತು ಪರಂಪರೆಯನ್ನು ಪರಸ್ಪರ ಅರ್ಥಮಾಡಿಕೊಂಡು ಎಲ್ಲಾ ಜಾತಿ, ಧರ್ಮದವರು ಸಹೋದರತೆ, ಸಹಭಾಗಿತ್ವ ಮತ್ತು ಸಹಭಾಳ್ವೆಯಿಂದ ಹಬ್ಬಗಳಲ್ಲಿ ಪಾಲ್ಗೊಳ್ಳುವಂತಾಗಬೇಕು ಎಂದು ಆಹಾರ ಮತ್ತು ನಾಗರಿಕ ಸರಬರಾಜು ಸಚಿವ ಯು.ಟಿ.ಖಾದರ್ ಕರೆ ನೀಡಿದ್ದಾರೆ.
ನಗರ ಗಾಂಧಿ ಮೈದಾನದಲ್ಲಿ ನಡೆದ ಮಡಿಕೇರಿ ದಸರಾ ವಿಜಯದಶಮಿ ಸಭಾ ಕಾರ್ಯಕ್ರಮದಲ್ಲಿ ಪಾಲ್ಗೊಂಡು ಸಚಿವರು ಮಾತನಾಡಿದರು.
ರಾಷ್ಟ್ರದಲ್ಲಿ ಪ್ರತಿತಿಂಗಳೂ ಒಂದಲ್ಲ ಒಂದು ಹಬ್ಬವನ್ನು ಆಚರಣೆ ಮಾಡುತ್ತೇವೆ. ಹಬ್ಬಗಳ ಆಚರಣೆಯಿಂದ ರಾಷ್ಟ್ರದ ಹಾಗೂ ನಾಡಿನ ಸಂಸ್ಕೃತಿಯನ್ನು ಪ್ರತಿಬಿಂಭಿಸುವುದರ ಜೊತೆಗೆ ಎಲ್ಲಾ ಜಾತಿ, ಧರ್ಮದವರು ಒಟ್ಟುಗೂಡಲು ಸಹಕಾರಿಯಾಗಿದೆ ಎಂದು ಆಹಾರ ಮತ್ತು ನಾಗರಿಕ ಪೂರೈಕೆ ಸಚಿವರು ಅಭಿಪ್ರಾಯ ವ್ಯಕ್ತಪಡಿಸಿದರು.
ಮಡಿಕೇರಿ ದಸರಾಕ್ಕೆ ಹೆಚ್ಚಿನ ಅನುದಾನ ಬಿಡುಗಡೆ ಸಂಬಂಧ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆ ಚರ್ಚಿಸಲಾಗುವುದು ಎಂದು ಇದೇ ಸಂದರ್ಭದಲ್ಲಿ ಸಚಿವರು ತಿಳಿಸಿದರು.
ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಎಂ.ಪಿ.ಅಪ್ಪಚ್ಚುರಂಜನ್ ಮಾತನಾಡಿ, ಮಡಿಕೇರಿ ದಸರಾವು ವಿಶೇಷ ಮತ್ತು ವಿಶಿಷ್ಟ ಸಂಸ್ಕೃತಿ ಹೊಂದಿದೆ ಎಂದರು.
ರಾಜ್ಯಸಭಾ ಸದಸ್ಯ ಕೆ.ಸಿ.ರಾಮಮೂರ್ತಿ ಮಾತನಾಡಿ, ನಾಡಿನ ಜೀವನದಿ ಕಾವೇರಿ ಹುಟ್ಟುವ ಪುಣ್ಯಭೂಮಿಯಲ್ಲಿ ಜರುಗುತ್ತಿರುವ ದಸರಾವು ವಿಶಿಷ್ಟ ಹಾಗೂ ವಿಭಿನ್ನವಾಗಿದೆ ಎಂದು ವಿವರಿಸಿದರು.
ಈ ವೇಳೆ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ನಿರ್ದೇಶಕ ಎನ್.ಆರ್.ವಿಶುಕುಮಾರ್, ಸುಪ್ರೀಂ ಕೋರ್ಟ್ ವಕೀಲ ಪಾಲಚಂಡ ಬ್ರಿಜೇಶ್ ಕಾಳಪ್ಪ, ಅರಣ್ಯ ಅಭಿವೃದ್ಧಿ ನಿಗಮದ ಉಪಾಧ್ಯಕ್ಷ ಪದ್ಮಿನಿ ಪೊನ್ನಪ್ಪ ಮಾತನಾಡಿದರು.
ಕಾರ್ಯಕ್ರಮದಲ್ಲಿ ವಿಧಾನ ಪರಿಷತ್ ಸದಸ್ಯರಾದ ವೀಣಾ ಅಚ್ಚಯ್ಯ, ಜಿಪಂ ಅಧ್ಯಕ್ಷ ಬಿ.ಎ.ಹರೀಶ್, ರೇಷ್ಮೆ ಮಾರಾಟ ಮಂಡಳಿ ಅಧ್ಯಕ್ಷ ಟಿ.ಪಿ.ರಮೇಶ್, ಜಿಲ್ಲಾಧಿಕಾರಿ ಡಾ.ರಿಚರ್ಡ್ ವಿನ್ಸೆಂಟ್ ಡಿಸೋಜ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರ ಪ್ರಸಾದ್, ಪೌರಾಯುಕ್ತರಾದ ಬಿ.ಶುಭಾ, ಸಂಗೀತಾ ಪ್ರಸನ್ನ ಇತರರು ಇದ್ದರು.







