ಗಾಂಧೀಜಿ ಕನಸು ಸಾಕಾರಗೊಳ್ಳಲಿ: ಪ್ರಮೋದ್
ಉಡುಪಿ, ಅ.2: ರಾಜಕೀಯ ಸ್ವಾತಂತ್ರ್ಯದ ಜೊತೆಗೆ ಆರ್ಥಿಕ ಸ್ವಾತಂತ್ರ್ಯಕ್ಕೂ ಪ್ರಾಧಾನ್ಯತೆ ನೀಡಿದ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ, ದೇಶದ ಸರ್ವ ತೋಮುಖ ಅಭಿವೃದ್ಧಿಗೆ, ಪ್ರತಿಯೊಬ್ಬ ಪ್ರಜೆ ಸ್ವಾವಲಂಬಿಯಾಗಿ ಬದುಕಬೇಕೆಂಬ ಚಿಂತನೆ ಹೊಂದಿದ್ದರು. ದೇಶ ಈ ನಿಟ್ಟಿನಲ್ಲಿ ಬಹಳಷ್ಟು ದೂರ ಸಾಗಬೇಕಿದೆ. ಇದನ್ನು ಸಾಕಾರಗೊಳಿಸುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಮತ್ತು ಕ್ರೀಡಾ ಸಚಿವ ಪ್ರಮೋದ್ ಮಧ್ವರಾಜ್ ಹೇಳಿದ್ದಾರೆ.
ಗಾಂಧೀಜಿ 1934ರ ಫೆ.25ರಂದು ಉಡುಪಿಗೆ ಭೇಟಿ ನೀಡಿ ಅಜ್ಜರಕಾಡಿನಲ್ಲಿ ಸಾರ್ವಜನಿಕರನ್ನುದ್ದೇಶಿಸಿ ಬಹಿರಂಗ ಸಭೆಯಲ್ಲಿ ಮಾತನಾಡಿದ ಸ್ಥಳದಲ್ಲೇ ಇಂದು ನಗರಸಭೆ ವತಿಯಿಂದ ಆಯೋಜಿಸಲಾಗಿದ್ದ ಗಾಂಧೀ ಜಯಂತಿ ಕಾರ್ಯಕ್ರಮದಲ್ಲಿ ಗಾಂಧೀಜಿ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಅವರು ಮಾತನಾಡುತ್ತಿದ್ದರು.
148ನೇ ಗಾಂಧಿ ಜಯಂತಿಯ ಸಂದರ್ಭದಲ್ಲಿ ಅ.2ರಂದೇ ಜನಿಸಿದ ದೇಶಕಂಡ ಪ್ರಾಮಾಣಿಕ ಪ್ರಧಾನಿ ಲಾಲ್ಬಹಾದ್ದೂರ್ ಶಾಸ್ತ್ರೀಜಿ ಅವರನ್ನೂ ಸ್ಮರಿಸಿದ ಪ್ರಮೋದ್, ಗಾಂಧೀಜಿಯ ಸ್ವಾಭಿಮಾನದ ಸ್ವಾವಲಂಬಿ ದೇಶ ನಿರ್ಮಾಣಕ್ಕೆ ನಾವು ಕಠಿಣ ಪ್ರಯತ್ನಗಳನ್ನು ಮಾಡಬೇಕೆಂದರು.
ಇದೇ ವೇಳೆ ಸಚಿವರು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊರತಂದ ಮಹಾತ್ಮ ಗಾಂಧೀ ಕುರಿತ ವಿಶೇಷ ಜನಪದ ಸಂಚಿಕೆಯನ್ನು ಬಿಡುಗಡೆಗೊಳಿಸಿದರು.
ಸ್ವಚ್ಚ ಭಾರತ ಅಭಿಯಾನದ ಅಂಗವಾಗಿ ಕೈಗೊಳ್ಳಲಾದ ಸ್ವಚ್ಚತಾ ಸಪ್ತಾಹ ಕಾರ್ಯಕ್ರಮವನ್ನು ಸಹ ಅವರು ಉದ್ಘಾಟಿಸಿ ಪೌರ ಕಾರ್ಮಿಕರಿಗೆ ಬ್ಯಾಡ್ಜ್ ಗಳನ್ನು ವಿತರಿಸಿದರು.
ಉಡುಪಿ ನಗರಸಭೆಯ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ, ನಗರಸಭಾ ಸದಸ್ಯ ಜನಾರ್ದನ ಂಡಾರ್ಕರ್, ಅಪರ ಜಿಲ್ಲಾಧಿಕಾರಿ ಜಿ.ಅನುರಾಧ, ಜಿಲ್ಲಾ ವಾರ್ತಾಧಿಕಾರಿ ರೋಹಿಣಿ ಕೆ, ನಗರಸಭೆಯ ಪರಿಸರ ಇಂಜಿನಿಯರ್ ರಾಘವೇಂದ್ರ ಮತ್ತಿತರರು ಉಪಸ್ಥಿತರಿದ್ದರು. ಪೌರಾಯುಕ್ತ ಮಂಜುನಾಥಯ್ಯ ಸ್ವಾಗತಿಸಿ, ವಂದಿಸಿದರು. ಇದಕ್ಕೆ ಮೊದಲು ಗಾಂಧೀ ಭಜನ್ ಕಾರ್ಯಕ್ರಮವೂ ನಡೆಯಿತು.