ಜಂಟಿ ಪರಿಶೀಲನಾ ಸಮಿತಿಯಿಂದ ಸ್ಪೀಕರ್ಗೆ ವರದಿ ಸಲ್ಲಿಕೆ
ಖಾಸಗಿ ಆಸ್ಪತ್ರೆಗಳಿಗೆ ಕಡಿವಾಣ
ಬೆಂಗಳೂರು, ಅ.3: ಬಡವರು ಹಾಗೂ ಮಧ್ಯಮ ವರ್ಗದವರಿಗೆ ಖಾಸಗಿ ಆಸ್ಪತ್ರೆಗಳಲ್ಲಿ ಆಗುವ ಕಿರುಕುಳವನ್ನು ತಪ್ಪಿಸಲು ರಾಜ್ಯ ಸರಕಾರ ಜಾರಿಗೆ ತರಲು ಮುಂದಾಗಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ(ತಿದ್ದುಪಡಿ) ವಿಧೇಯಕದ ಕುರಿತು ಜಂಟಿ ಪರಿಶೀಲನಾ ಸಮಿತಿಯು ಸ್ಪೀಕರ್ಗೆ ತನ್ನ ವರದಿಯನ್ನು ಸಲ್ಲಿಸಿದೆ.
ಮಂಗಳವಾರ ನಗರದಲ್ಲಿ ಸ್ಪೀಕರ್ ಕೆ.ಬಿ.ಕೋಳಿವಾಡರನ್ನು ಅವರ ನಿವಾಸದಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಕೆ.ಆರ್.ರಮೇಶ್ಕುಮಾರ್ ನೇತೃತ್ವದಲ್ಲಿ ಭೇಟಿ ಮಾಡಿದ ಜಂಟಿ ಪರಿಶೀಲನಾ ಸಮಿತಿಯ ಸದಸ್ಯರು ವರದಿಯನ್ನು ಹಸ್ತಾಂತರಿಸಿದರು.
ಕಳೆದ ವಿಧಾನಮಂಡಲದ ಅಧಿವೇಶನದಲ್ಲಿ ಈ ವಿಧೇಯಕವನ್ನು ಸದನದಲ್ಲಿ ಮಂಡಿಸಲಾಗಿತ್ತು. ಚರ್ಚೆಯಲ್ಲಿ ಪಾಲ್ಗೊಂಡಿದ್ದ ಬಹುತೇಕ ಸದಸ್ಯರು ತರಾತುರಿಯಲ್ಲಿ ಈ ವಿಧೇಯಕವನ್ನು ಅಂಗೀಕರಿಸುವ ಬದಲು ಮತ್ತಷ್ಟು ವಿವರವಾಗಿ ಚರ್ಚಿಸುವ ಅಗತ್ಯವಿದೆ. ಆದುದರಿಂದ, ಜಂಟಿ ಪರಿಶೀಲನಾ ಸಮಿತಿಗೆ ಈ ವಿಧೇಯಕವನ್ನು ಒಪ್ಪಿಸಬೇಕು ಎಂದು ಸ್ಪೀಕರ್ಗೆ ಮನವಿ ಸಲ್ಲಿಸಿದ್ದರು. ಅದರಂತೆ, ಕಾಂಗ್ರೆಸ್ ಪಕ್ಷದ ಹಿರಿಯ ಶಾಸಕ ಕೆ.ಎನ್.ರಾಜಣ್ಣ ನೇತೃತ್ವದಲ್ಲಿ ವಿಧಾನಸಭೆ ಹಾಗೂ ವಿಧಾನಪರಿಷತ್ತಿನ ಸದಸ್ಯರು ಇರುವ ಜಂಟಿ ಪರಿಶೀಲನಾ ಸಮಿತಿಯನ್ನು ರಚಿಸಿದ ಸ್ಪೀಕರ್, ವಿಧೇಯಕವನ್ನು ಪರಿಶೀಲನೆಗೊಳಪಡಿಸಿ ವರದಿ ನೀಡುವಂತೆ ಸೂಚನೆ ನೀಡಿದ್ದರು.
ಜಂಟಿ ಪರಿಶೀಲನಾ ಸಮಿತಿಯು ಹಲವು ಸಭೆಗಳನ್ನು ನಡೆಸಿ ವಿಧೇಯಕದ ಕುರಿತು ತನ್ನ ವರದಿಯನ್ನು ಸಿದ್ಧಪಡಿಸಿ ಇಂದು ಸ್ಪೀಕರ್ಗೆ ಹಸ್ತಾಂತರಿಸಿದೆ. ಮುಂಬರುವ ವಿಧಾನಮಂಡಲದ ಅಧಿವೇಶನದಲ್ಲಿ ಈ ವರದಿಯು ಸದನದ ಮುಂದೆ ಬರಲಿದೆ. ಆನಂತರ, ವಿಧೇಯಕಕ್ಕೆ ಅಂಗೀಕಾರ ಸಿಗುವ ಸಾಧ್ಯತೆಗಳಿವೆ.
ಬಡವರನ್ನು ಸುಲಿಗೆ ಮಾಡುವ ಆಸ್ಪತ್ರೆಗಳನ್ನು ನಿಯಂತ್ರಿಸುವ ಮಹತ್ವದ ಹೊಣೆಗಾರಿಕೆ ಈ ವಿಧೇಯಕದಲ್ಲಿ ಅಡಗಿದೆ. ಸರಕಾರದ ಆದೇಶದಂತೆ ಖಾಸಗಿ ಆಸ್ಪತ್ರೆಗಳು ಆರೋಗ್ಯ ಸೇವೆಗಳನ್ನು ಒದಗಿಸಬೇಕು. ಇಲ್ಲದಿದ್ದರೆ, ಕಾನೂನು ರೀತಿ ಕಠಿಣ ಕ್ರಮ ಎದುರಿಸಲು ಸಜ್ಜಾಗಬೇಕಿದೆ.
ಈ ಸಂದರ್ಭದಲ್ಲಿ ಜಂಟಿ ಸದನ ಸಮಿತಿಯ ಸದಸ್ಯರಾದ ಮಾಜಿ ಸಚಿವರಾದ ಡಾ.ಎ.ಬಿ.ಮಾಲಕರೆಡ್ಡಿ, ಪಿ.ಎಂ.ನರೇಂದ್ರಸ್ವಾಮಿ, ವಿಧಾನಪರಿಷತ್ ಸದಸ್ಯ ಪಿ.ಆರ್.ರಮೇಶ್ ಉಪಸ್ಥಿತರಿದ್ದರು.







