ಜಿಲ್ಲಾ ಮಟ್ಟದ ಯುವಜನೋತ್ಸವ ಉದ್ಘಾಟಿಸಿದ ಸಚಿವ ಪ್ರಮೋದ್
ಉಡುಪಿಯಲ್ಲಿ ಮುಂದಿನ ತಿಂಗಳು ರಾಜ್ಯಮಟ್ಟದ ಯುವಜನೋತ್ಸವ
ಉಡುಪಿ, ಅ.8: ಈ ಬಾರಿಯ ರಾಜ್ಯಮಟ್ಟದ ಯುವಜನೋತ್ಸವವನ್ನು ಉಡುಪಿಯಲ್ಲಿ ನವೆಂಬರ್ ತಿಂಗಳಲ್ಲಿ ನಡೆಸಲು ಉದ್ದೇಶಿಸಲಾಗಿದ್ದು, ಇದ ಕ್ಕಾಗಿ ಇಲಾಖೆಯಿಂದ 20ಲಕ್ಷ ರೂ. ಅನುದಾನ ಒದಗಿಸಲಾಗುವುದು ಎಂದು ರಾಜ್ಯ ಮೀನುಗಾರಿಕೆ, ಯುವಜನ ಸಬಲೀಕರಣ ಹಾಗೂ ಕ್ರೀಡೆ ಮತ್ತು ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮಧ್ವರಾಜ್ ತಿಳಿಸಿದ್ದಾರೆ.
ಉಡುಪಿ ಜಿಲ್ಲಾಡಳಿತ, ಜಿಪಂ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಂಯುಕ್ತ ಆಶ್ರಯದಲ್ಲಿ ರವಿವಾರ ಅಜ್ಜರಕಾಡು ಪುರಭವನದಲ್ಲಿ ಆಯೋಜಿಸಲಾದ ಉಡುಪಿ ಜಿಲ್ಲಾ ಮಟ್ಟದ ಯುವಜನೋತ್ಸವವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಯುವಜನೋತ್ಸವವು ಸರಕಾರದ ಅಧಿಕೃತ ಕಾರ್ಯಕ್ರಮ ಆಗಿರುವುದರಿಂದ ಯುವಕರಲ್ಲಿರುವ ಪ್ರತಿಭೆಯನ್ನು ಅಧಿಕೃತವಾಗಿ ತೋರಿಸಬಹುದಾಗಿದೆ. ಅಲ್ಲದೆ ರಾಷ್ಟ್ರೀಯ ಮಟ್ಟದಲ್ಲಿಯೂ ಇದಕ್ಕೆ ಸರಕಾರದ ಮಾನ್ಯತೆ ಇದೆ. ಆದರೆ ಯುವ ಸಮುದಾಯ ಇದರಲ್ಲಿ ಹೆಚ್ಚಾಗಿ ಭಾಗವಹಿಸುತ್ತಿಲ್ಲ. ಕೇವಲ ಸಾಮಾಜಿಕ ಜಾಲ ತಾಣಗಳಲ್ಲೇ ತೊಡಗಿಕೊಂಡಿರುವುದು ಆತಂಕಕಾರಿಯಾಗಿದೆ. ಇಂತಹ ಉತ್ಸವದಲ್ಲಿ ಯುವಕರಲ್ಲಿ ಆಸಕ್ತಿ ಉತ್ಸಾಹದಿಂದ ಭಾಗವಹಿಸಬೇಕು. ಅದು ಬಿಟ್ಟು ಕೇವಲ ಕಾಟಾಚಾರದ ಕಾರ್ಯಕ್ರಮ ಆಗಬಾರದು ಎಂದರು.
ಉಡುಪಿ ಜಿಪಂ ಅಧ್ಯಕ್ಷ ದಿನಕರ ಬಾಬು ಮಾತನಾಡಿ, ಕಳೆದ 10ವರ್ಷ ಗಳಿಂದ ಯುವಜನೋತ್ಸವಗಳಲ್ಲಿ ಹೊಸ ಕಲಾವಿದರುಗಳು ಭಾಗವಹಿಸುತ್ತಿಲ್ಲ. ಸರಕಾರದ ಕಲೆಗಳಿಗೆ ಇನ್ನಷ್ಟು ಪ್ರೋತ್ಸಾಹ ನೀಡುವ ಕಾರ್ಯ ಮಾಡಬೇಕು. ಇಂತಹ ಉತ್ಸವಗಳನ್ನು ಗ್ರಾಮೀಣ ಮಟ್ಟದಲ್ಲಿ ನಡೆಸುವುದರಿಂದ ಇನ್ನಷ್ಟು ಹೊಸ ಪ್ರತಿಭೆಗಳನ್ನು ಬೆಳೆಸಲು ಸಾಧ್ಯವಾಗುತ್ತದೆ. ಜಿಲ್ಲೆಯ ಪ್ರತಿಯೊಂದು ಯುವಕ ಮಂಡಲದ ತಂಡಗಳು ಇದರಲ್ಲಿ ಭಾಗವಹಿಸುವಂತೆ ಮಾಡಬೇಕು ಎಂದು ಹೇಳಿದರು.
ಅಧ್ಯಕ್ಷತೆಯನ್ನು ಉಡುಪಿ ನಗರಸಭೆ ಅಧ್ಯಕ್ಷೆ ಮೀನಾಕ್ಷಿ ಮಾಧವ ಬನ್ನಂಜೆ ವಹಿಸಿದ್ದರು. ತಾಪಂ ಸದಸ್ಯ ದಿನಕರ ಹೇರೂರು, ಕಾರ್ಕಳ ತಾಲೂಕು ಕ್ರೀಡಾಧಿಕಾರಿ ಫ್ರೆಡಿಕ್ ಲೂಯಿಸ್ ಉಪಸ್ಥಿತರಿದ್ದರು. ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ಡಾ.ರೋಶನ್ ಕುಮಾರ್ ಶೆಟ್ಟಿ ಸ್ವಾಗತಿಸಿದರು. ಉಪನ್ಯಾಸಕ ಪ್ರಕಾಶ್ ಕ್ರಮಧಾರಿ ಕಾರ್ಯಕ್ರಮ ನಿರೂಪಿಸಿ ವಂದಿಸಿದರು.