ಮೈಸೂರಿನಲ್ಲಿ ನ.15ರಿಂದ ‘ಕನ್ನಡದಲ್ಲಿ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನ’
ಬೆಂಗಳೂರು, ಅ.11: ರಾಜ್ಯ ಸರಕಾರದ ವಿಜ್ಞಾನ ಮತ್ತು ತಂತ್ರಜಾನ ಇಲಾಖೆಯ ಅಂಗಸಂಸ್ಥೆಯಾದ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿಯು ಪ್ರಪ್ರಥಮವಾಗಿ ಕನ್ನಡ ವಿಜ್ಞಾನ ಮತ್ತು ತಂತ್ರಜ್ಞಾನ ಸಮ್ಮೇಳನವನ್ನು ಮೈಸೂರಿನ ಬಿ.ಎನ್.ರಸ್ತೆಯಲ್ಲಿರುವ ಜೆಎಸ್ಎಸ್ ಕಲಾ, ವಾಣಿಜ್ಯ ಮತ್ತು ವಿಜ್ಞಾನ (ಸ್ವಾಯತ್ತ) ಕಾಲೇಜಿನ ಸಹಯೋಗದೊಂದಿಗೆ ಮೈಸೂರಿನಲ್ಲಿ ನ.15 ಮತ್ತು 16 ರಂದು ವಿಜ್ಞಾನ, ತಂತ್ರಜ್ಞಾನ ಮತ್ತು ಸಮಾಜ ಎಂಬ ಕೇಂದ್ರ ವಿಷಯದ ಮೇಲೆ ಆಯೋಜಿಸುತ್ತಿದೆ.
ಸಮ್ಮೇಳನಕ್ಕೆ ಪ್ರತಿನಿಧಿಗಳಾಗಿ, ರಾಜ್ಯದ ವಿವಿಧ ವಿಶ್ವವಿದ್ಯಾನಿಲಯ ಮತ್ತು ಕಾಲೇಜುಗಳ ವಿಜ್ಞಾನ ವಿದ್ಯಾರ್ಥಿಗಳು, ಉಪನ್ಯಾಸಕರು, ಪ್ರಾಧ್ಯಾಪಕರು, ಸಂಶೋಧಕರು, ವಿಜ್ಞಾನಿಗಳು, ಸರಕಾರದ ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸರಕಾರೇತರ ಸಂಘ ಸಂಸ್ಥೆಗಳ ಪ್ರತಿನಿಧಿಗಳನ್ನೊಳಗೊಂಡಂತೆ 600 ಪ್ರತಿನಿಧಿಗಳನ್ನು ಆಹ್ವಾನಿಸಲಾಗುತ್ತಿದೆ.
ಈ ಸಮ್ಮೇಳನದ ತಾಂತ್ರಿಕ ಅಧಿವೇಶನದಲ್ಲಿ ಕೇಂದ್ರ ವಿಷಯಕ್ಕೆ ಸಂಬಂಧಿಸಿದ ವಿಷಯಗಳ ಮೇಲೆ ವಿದ್ವತ್ ಪೂರ್ಣ ಉಪನ್ಯಾಸಗಳನ್ನು ಕನ್ನಡದಲ್ಲಿ ಹೆಸರಾಂತ ವೈಜ್ಞಾನಿಕ ಸಂಸ್ಥೆಗಳ ವಿಶೇಷ ಪರಿಣಿತ ಸಂಪನ್ಮೂಲ ತಜ್ಞರಿಂದ ಆಯೋಜಿಸಲಾಗುತ್ತಿದೆ.
ಮೂಲ ಮತ್ತು ಅನಯ್ವಿಕ ವಿಜ್ಞಾನ ಮತ್ತು ತಂತ್ರಜ್ಞಾನಕ್ಕೆ ಸಂಬಂಧಿಸಿದ ಸಂಶೋಧನಾ ಪ್ರಾತ್ಯಕ್ಷಿಕೆಗಳನ್ನು ಕನ್ನಡದಲ್ಲಿ ಮಂಡಿಸಲು ಸಮ್ಮೇಳನದಲ್ಲಿ ಅವಕಾಶವನ್ನು ಕಲ್ಪಿಸಲಾಗಿದೆ. ತಜ್ಞ ಸಮಿತಿಯು ಆಯ್ಕೆ ಮಾಡಿದ ಅತ್ಯುತ್ತಮವಾದ 3 ಪ್ರಾತ್ಯಕ್ಷಿಕೆಗಳಿಗೆ ಬಹುಮಾನವನ್ನು ನೀಡಲಾಗುವುದು.
ಸಮ್ಮೇಳನದಲ್ಲಿ ಪ್ರತಿನಿಧಿಯಾಗಿ ಭಾಗವಹಿಸಲು ಹಾಗೂ ಸಂಶೋಧನಾ ಪ್ರಾತ್ಯಕ್ಷಿಕೆಗಳ ಸಾರಾಂಶವನ್ನು ಕಳುಹಿಸಲು ನ.4ರಂದು ಕೊನೆಯ ದಿನವಾಗಿದ್ದು, ಇಮೇಲ್ ಮೂಲಕ (kstakannadacon@gmail.com) ನಿಗದಿತ ನಮೂನೆಯಲ್ಲಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಅಕಾಡಮಿಯ ಹಿರಿಯ ವೈಜ್ಞಾನಿಕ ಅಧಿಕಾರಿ ಡಾ.ಎ.ಎಂ.ರಮೇಶ್(ಮೊಬೈಲ್ ಸಂಖ್ಯೆ: 9845258894)ರನ್ನು ಸಂಪರ್ಕಿಸಬಹುದಾಗಿದೆ ಎಂದು ಪ್ರಕಟನೆ ತಿಳಿಸಿದೆ.







