ಮಾತೃಪೂರ್ಣ ಯೋಜನೆ ಅನುಷ್ಠಾನ: ಚಿಕ್ಕಮಗಳೂರಿಗೆ 5ನೆ ಸ್ಥಾನ

ಚಿಕ್ಕಮಗಳೂರು, ಅ.25: ಮಾತೃಪೂರ್ಣ ಯೋಜನೆ ಅನುಷ್ಠಾನದಲ್ಲಿ ರಾಜ್ಯದಲ್ಲಿ ಜಿಲ್ಲೆ 5ನೆ ಸ್ಥಾನದಲ್ಲಿದೆ ಎಂದು ಜಿಲ್ಲಾಧಿಕಾರಿ ಎಂ.ಕೆ. ಶ್ರೀರಂಗಯ್ಯ ತಿಳಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಎಸ್ಸಿ, ಎಸ್ಪಿ ಮತ್ತು ಟಿಎಸ್ಪಿ ಯೋಜನೆಯ ಅನುಷ್ಠಾನದ ಕುರಿತು ನಡೆದ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಮಾತೃಪೂರ್ಣ ಯೋಜನೆ ಅನುಷ್ಠಾನದಲ್ಲಿ ಜಿಲ್ಲೆ 5ನೆ ಸ್ಥಾನದಲ್ಲಿರುವುದು ಸಂತೋಷದ ವಿಷಯವೇ ಆದರೆ, ಪ್ರಥಮ ಸ್ಥಾನಕ್ಕೆ ಬರಲು ಅಧಿಕಾರಿಗಳು ಶ್ರಮ ವಹಿಸಬೇಕೆಂದು ಸಲಹೆ ನೀಡಿದರು.
ಜಿಲ್ಲೆಯಲ್ಲಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ 6,570 ಗರ್ಭಿಣಿ ಯರು, 6,362 ಬಾಣಂತಿಯರು ನೋಂದಾಯಿಸಿಕೊಂಡಿದ್ದು ಇವರಲ್ಲಿ ಗರ್ಭಿಣಿಯರು 3,470, ಬಾಣಂತಿಯರು 3,329 ಅಂಗನವಾಡಿ ಕೇಂದ್ರಗಳಿಗೆ ಹಾಜರಾಗಿ ಪೌಷ್ಟಿಕ ಆಹಾರ ಸೇವಿಸುತ್ತಿದ್ದಾರೆ ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಅಧಿಕಾರಿಗಳು ಸಭೆಗೆ ಮಾಹಿತಿ ನೀಡಿದರು.
ಗಂಗಾ ಕಲ್ಯಾಣ ಯೋಜನೆಯಡಿ ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡದ ಜನಾಂಗದ ಫಲಾನುಭವಿಗಳ ಜಮೀನುಗಳಲ್ಲಿ ಕೊರೆದಿರುವ ಕೊಳವೆ ಬಾವಿಗಳಿಗೆ ಹಾಗೂ ಕುಡಿಯುವ ನೀರಿಗೆ ಕೊರೆದಿರುವ ಕೊಳವೆ ಬಾವಿಗಳಿಗೆ ವಿದ್ಯುತ್ ಸಂಪರ್ಕ ಕಲ್ಪಿಸಲು ಮೆಸ್ಕಾಂಗೆ ಅರ್ಜಿ ಸಲ್ಲಿಸಿದ 7ದಿನಗಳೊಳಗಾಗಿ ವಿದ್ಯುತ್ ಸಂಪರ್ಕ ಕಲ್ಪಿಸಬೇಕೆಂಬ ನಿಯಮವಿದೆ. ವಿದ್ಯುತ್ ಸಂಪರ್ಕಕ್ಕಾಗಿ ಬಂದಿರುವ ಅರ್ಜಿಗಳನ್ನು ಪರಿಶೀಲಿಸಿ ಕೂಡಲೇ ವಿದ್ಯುತ್ ಸಂಪರ್ಕ ಕಲ್ಪಿಸುವಂತೆ ಮೆಸ್ಕಾಂ ಅಧಿಕಾರಿಗಳಿಗೆ ತಿಳಿಸಿದರು.
ಜಿಲ್ಲೆಯಲ್ಲಿ ಗಿರಿಜನರು ಹೆಚ್ಚು ವಾಸಿಸುವ ಗ್ರಾಮಗಳಲ್ಲಿ ಸಮುದಾಯ ಭವನ ನಿರ್ಮಿಸುವ ಕುರಿತು ಪರಿಶೀಲಿಸಿದ ಜಿಲ್ಲಾಧಿಕಾರಿ ಭವನಗಳ ನಿರ್ಮಾಣಕ್ಕೆ ನಿವೇಶಗಳ ಲಭ್ಯತೆ ಇರುವಲ್ಲಿ ಪ್ರಥಮ ಆದ್ಯತೆ ನೀಡುವಂತೆ ಸೂಚಿಸಿದರು.
12 ಸಮುದಾಯ ಭವನಗಳ ನಿರ್ಮಾಣ ಮಾಡಲು ನಿರ್ಮಿತಿ ಕೇಂದ್ರಕ್ಕೆ ವಹಿಸಲಾಗಿದೆ. ಉಳಿದ ಕಡೆ ನಿವೇಶನ ಲಭ್ಯವಿರುವುದಿಲ್ಲ. ನಿವೇಶನ ಗುರುತಿಸಿ ಸಮುದಾಯ ಭವನಗಳ ನಿರ್ಮಾಣಕ್ಕೆ ಕ್ರಮ ಕೈಗೊಳ್ಳಲಾಗುವುದು ಎಂದು ಗಿರಿಜನ ಅಭಿವೃದ್ಧಿ ಇಲಾಖೆ ಅಧಿಕಾರಿ ಮಾಹಿತಿ ನೀಡಿದರು.
ವಿವಿಧ ಇಲಾಖೆಗಳಲ್ಲಿ ಇನ್ನು ಫಲಾನುಭವಿಗಳ ಆಯ್ಕೆ ಕಾರ್ಯ ನಡೆದಿರುವುದಿಲ್ಲ ಸೆಪ್ಟೆಂಬರ್ ಮಾಹೆಯ ಅಂತ್ಯದ ವೇಳೆಗೆ ಶೇ.90ರಷ್ಟು ಪ್ರಗತಿಯಾಗಬೇಕಾಗಿತ್ತು. ಕೆಲವು ಇಲಾಖೆಗಳಲ್ಲಿ ಫಲಾನುಭವಿಗಳ ಆಯ್ಕೆ ಆಯಾ ಸ್ಥಳೀಯ ಶಾಸಕರ ಅಧ್ಯಕ್ಷತೆಯಲ್ಲಿ ನಡೆಯುವುದರಿಂದ ಶಾಸಕರ ಗಮನಕ್ಕೆ ತಂದು ಅಕ್ಟೋಬರ್ ಮಾಹೆಯ ಅಂತ್ಯದೊಳಗೆ ಪ್ರಗತಿ ಸಾಧಿಸುವಂತೆ ತಿಳಿಸಿದ ಅವರು, ಅಕ್ಟೋಬರ್ ಮಾಹೆಯೊಳಗೆ ಪ್ರಗತಿ ಆಗದಿದ್ದರೆ ಜಿಲ್ಲಾಧಿಕಾರಿ ಗಮನಕ್ಕೆ ತರಬೇಕು ಎಂದು ಸೂಚನೆ ನೀಡಿದರು.
2013ರ ಎಸ್ಸಿ, ಎಸ್ಪಿ ಮತ್ತು ಟಿಎಸ್ಪಿ ಕಾಯ್ದೆ ಅನ್ವಯ ಗುರಿ ಸಾಧಿಸದ ಅಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವ ಸಾಧ್ಯತೆ ಇದೆ ಎಂದರಲ್ಲದೆ ಕೆಳ ಹಂತದ ಅಧಿಕಾರಿಗಳ ನಿರ್ಲಕ್ಷ್ಯದಿಂದಾಗಿ ಕಾರ್ಯಕ್ರಮಗಳು ಕುಂಟಿತವಾಗುತ್ತವೆ ಎಂದು ಹೇಳಿದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಎಂ.ಎಲ್. ವೈಶಾಲಿ, ಜಿಪಂ ಕಾರ್ಯದರ್ಶಿ ರಾಜಗೋಪಾಲ್, ಸಮಾಜ ಕಲ್ಯಾಣ ಇಲಾಖೆ ಪ್ರಬಾರ ಅಧಿಕಾರಿ ಮಂಜುನಾಥ್, ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಉಪನಿರ್ದೇಶಕ ಮುನಿಸ್ವಾಮಯ್ಯ ಸೇರಿದಂತೆ ಹಲವು ಇಲಾಖೆ ಅಧಿಕಾರಿಗಳು ಉಪಸ್ಥಿತರಿದ್ದರು.







