ಖಾಸಗಿ ವೈದ್ಯರ ಮುಷ್ಕರ: ರೋಗಿಗಳ ಪರದಾಟ
ಗರ್ಭಿಣಿ ಮಹಿಳೆಗೆ ಚಿಕಿತ್ಸೆ ನೀಡದ ಖಾಸಗಿ ಆಸ್ಪತ್ರೆ!

ಬೆಂಗಳೂರು, ನ.3: ಕರ್ನಾಟಕ ಖಾಸಗಿ ವೈದ್ಯಕೀಯ ಮಸೂದೆ ತಿದ್ದುಪಡಿ ವಿರೋಧಿಸಿ ರಾಜ್ಯಾದ್ಯಂತ ಖಾಸಗಿ ಆಸ್ಪತ್ರೆಯ ವೈದ್ಯರು ಮುಷ್ಕರ ನಡೆಸಿದ ಪರಿಣಾಮ ಶುಕ್ರವಾರ ರೋಗಿಗಳಿಗೆ ಸೂಕ್ತವಾದ ಚಿಕಿತ್ಸೆ ಸಿಗದೇ ಪರದಾಡುವಂತಾಯಿತು.
ಜಿಲ್ಲಾ ಕುಂದು-ಕೊರತೆ ಸಮಿತಿ ರಚನೆ ಹಾಗೂ ಚಿಕಿತ್ಸಾ ವೈಫಲ್ಯ ಅಥವಾ ರೋಗಿ ಆಸ್ಪತ್ರೆ ವೆಚ್ಚ ಏರು ಪೇರು ಆದರೆ ಜೈಲು ಶಿಕ್ಷೆ ವಿಧಿಸುವ ಅಂಶ ಸೇರಿದಂತೆ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ನಗರದ ಖಾಸಗಿ ವೈದ್ಯಕೀಯ ಕಾಲೇಜುಗಳು ಸೇರಿ ರಾಜ್ಯದಲ್ಲಿರುವ 40 ರಿಂದ 45 ಸಾವಿರ ಖಾಸಗಿ ಆಸ್ಪತ್ರೆಗಳು, ಕಾರ್ಪೊರೇಟ್, ಸಣ್ಣ ಹಾಗೂ ಮಧ್ಯಮ ಆಸ್ಪತ್ರೆಗಳ ಎಲ್ಲ ವೈದ್ಯರು ಮುಷ್ಕರದಲ್ಲಿ ಪಾಲ್ಗೊಂಡಿದ್ದರಿಂದ ಖಾಸಗಿ ಆಸ್ಪತ್ರೆ, ನರ್ಸಿಂಗ್ ಹೋಂ, ಸಣ್ಣಪುಟ್ಟ ಚಿಕಿತ್ಸಾ ಘಟಕಗಳು ಎಲ್ಲವೂ ಬಾಗಿಲು ಹಾಕಿದ್ದವು. ಹೀಗಾಗಿ, ಖಾಸಗಿ ಆಸ್ಪತ್ರೆಗಳಿಗೆ ಬರುತ್ತಿದ್ದ ರೋಗಿಗಳು ಪರದಾಡುವಂತಾಯಿತು. ಆದರೆ, ಸರಕಾರದ ಆದೇಶದ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಗಳು ಎಂದಿನಂತೆ ಕಾರ್ಯ ನಿರ್ವಹಿಸಿದವು.
ಬೆಂಗಳೂರು ನಗರ ಮತ್ತು ಗ್ರಾಮಾಂತರ, ಮೈಸೂರು, ಬೆಳಗಾವಿ, ಹುಬ್ಬಳ್ಳಿ-ಧಾರವಾಡ, ಚಿಕ್ಕಮಗಳೂರು, ಬೀದರ್, ಬಳ್ಳಾರಿ, ಗುಲ್ಬರ್ಗ, ಬಿಜಾಪುರ, ಕೋಲಾರ, ಚಿಕ್ಕಬಳ್ಳಾಪುರ ಸೇರಿದಂತೆ ರಾಜ್ಯದ ಎಲ್ಲ ಕಡೆ ಖಾಸಗಿ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ಬಂದಿದ್ದ ರೋಗಿಗಳು ವೈದ್ಯರಿಲ್ಲದೆ ಆತಂಕಕ್ಕೆ ಒಳಗಾಗಿ, ಸರಕಾರಿ ಆಸ್ಪತ್ರೆಗಳ ಕಡೆ ಮುಖ ಮಾಡಿದರು.
ಭಾರತೀಯ ಶಸ್ತ್ರಚಿಕಿತ್ಸಕರ ಸಂಘವೂ ಮುಷ್ಕರಕ್ಕೆ ಬೆಂಬಲ ನೀಡಿದ್ದರಿಂದ ಶಸ್ತ್ರ ಚಿಕಿತ್ಸೆಗೂ ತೊಂದರೆ ಉಂಟಾಗಿದ್ದು, ತುರ್ತು ಸಂದರ್ಭದಲ್ಲಿ ಶಸ್ತ್ರಚಿಕಿತ್ಸಕರು ಸೇವೆಗೆ ಹಾಜರಾಗುತ್ತಿರುವುದರಿಂದ ಹೆಚ್ಚಿನ ಸಮಸ್ಯೆ ಸಂಭವಿಸಿಲ್ಲ ಎಂದು ತಿಳಿದು ಬಂದಿದೆ.
ಹೊರರೋಗಿಗಳಿಗೆ ಚಿಕಿತ್ಸೆ ಸೇರಿದಂತೆ ತುರ್ತು ಚಿಕಿತ್ಸೆಗಳನ್ನು ಹೊರತುಪಡಿಸಿ ಸಂಪೂರ್ಣ ಖಾಸಗಿ ವೈದ್ಯಕೀಯ ಸೇವೆ ಸ್ಥಗಿತಗೊಂಡಿದ್ದು, ಬೇಡಿಕೆಗಳು ಈಡೇರುವವರೆಗೆ ಮುಷ್ಕರವನ್ನು ತೀವ್ರಗೊಳಿಸಲಾಗುತ್ತದೆ ಎಂದು ಭಾರತೀಯ ವೈದ್ಯಕೀಯ ಸಂಘದ ಅಧ್ಯಕ್ಷ ಡಾ.ಎಚ್.ಎನ್. ರವೀಂದ್ರ ತಿಳಿಸಿದ್ದಾರೆ.
ಅಲ್ಲದೆ, ಕೆಪಿಎಂಇ ಕಾಯ್ದೆ ತಿದ್ದುಪಡಿ ವಿಚಾರದಲ್ಲಿ ನ್ಯಾ. ವಿಕ್ರಂಜಿತ್ ಸೇನ್ ವರದಿಯನ್ನು ಯಥಾವತ್ತಾಗಿ ಜಾರಿ ಮಾಡಬೇಕು. ಇದಕ್ಕಾಗಿ ನ.9 ರವರೆಗೆ ಗಡುವು ನೀಡಲಾಗುತ್ತದೆ. ಅನಂತರ ನಮ್ಮ ಬೇಡಿಕೆಗಳು ಈಡೇರಿಸದಿದ್ದರೆ ಅನಿರ್ದಿಷ್ಟಾವಧಿ ಮುಷ್ಕರ ನಡೆಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದರು.
ಖಾಸಗಿ ವೈದ್ಯರ ಮುಷ್ಕರದಿಂದ ಉಂಟಾಗಿರುವ ತೊಂದರೆಯನ್ನು ಎದುರಿಸುವ ಸಲುವಾಗಿ ಆರೋಗ್ಯ ಇಲಾಖೆ ಕ್ರಮ ಕೈಗೊಂಡಿದ್ದು, ಸರಕಾರಿ ಆಸ್ಪತ್ರೆಗಳಲ್ಲಿ ವೈದ್ಯರ ರಜೆಯನ್ನು ರದ್ದು ಮಾಡಿದೆ. ಹೀಗಾಗಿ, ರಾಜ್ಯಾದ್ಯಂತ ಎಲ್ಲ ಸರಕಾರಿ ಆಸ್ಪತ್ರೆಗಳಲ್ಲಿ ಹೆಚ್ಚಿನ ಸಂಖ್ಯೆಯಲ್ಲಿ ರೋಗಿಗಳು ಚಿಕಿತ್ಸೆ ಪಡೆಯಲು ಮುಂದಾಗಿದ್ದರು. ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳು ಹಾಗೂ ಜಿಲ್ಲಾ ಶಸ್ತ್ರಚಿಕಿತ್ಸಕರು ಜಿಲ್ಲೆಯಲ್ಲಿರುವ ಸರಕಾರಿ ಆರೋಗ್ಯ ಸಂಸ್ಥೆಗಳು ಪೂರ್ಣ ಪ್ರಮಾಣದಲ್ಲಿ ಕಾರ್ಯನಿರ್ವಹಿಸುವಂತೆ ಆರೋಗ್ಯ ಇಲಾಖೆ ಆಯುಕ್ತ ಮನೋಜ್ ಕುಮಾರ್ ಮೀನಾ ಸೂಚನೆ ನೀಡಿದ್ದರಿಂದ ಸರಕಾರಿ ಆಸ್ಪತ್ರೆಗಳಲ್ಲಿ ಯಾವುದೇ ತೊಂದರೆಯಾಗದಂತೆ ಚಿಕಿತ್ಸೆ ಸಿಗುತ್ತಿದ್ದು, ರೋಗಿಗಳು ಸ್ವಲ್ಪ ಮಟ್ಟಿಗೆ ನಿಟ್ಟಿಸಿರು ಬಿಟ್ಟಂತಾಗಿದೆ.
ಮುಷ್ಕರಕ್ಕೆ ವಿರೋಧ: ರಾಜ್ಯ ಸರಕಾರ ಮುಂದಿನ ಅಧಿವೇಶನದಲ್ಲಿ ಮಂಡಿಸಲು ಉದ್ದೇಶಿಸಿರುವ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ತಿದ್ದುಪಡಿ ಕಾಯ್ದೆಯನ್ನು ವಿರೋಧಿಸಿ ಖಾಸಗಿ ವೈದ್ಯರು ನಡೆಸಿದ ಮುಷ್ಕರವನ್ನು ಕರ್ನಾಟಕ ಜನಾರೋಗ್ಯ ಚಳವಳಿ, ಸ್ಲಂ ಜನಾಂದೋಲನ ಕರ್ನಾಟಕ, ಕರ್ನಾಟಕ ಜನಶಕ್ತಿ, ಸಮಾನ ಶಿಕ್ಷಣಕ್ಕಾಗಿ ಜನಾಂದೋಲನ, ಪರ್ಯಾಯ ಕಾನೂನು ವೇದಿಕೆ ಸೇರಿದಂತೆ ಹಲವು ಸಂಘ-ಸಂಸ್ಥೆಗಳು ಖಂಡಿಸಿವೆ.
ಈ ಕುರಿತು ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಮಾನ ಶಿಕ್ಷಣಕ್ಕಾಗಿ ಜನಾಂದೋಲನದ ಮುಖಂಡ ಶ್ರೀಪಾದ್ ಭಟ್, ಖಾಸಗಿ ಆಸ್ಪತ್ರೆಗಳಲ್ಲಿ ಚಿಕಿತ್ಸೆಗಳ ಬೆಲೆ ನಿಯಂತ್ರಣ, ರೋಗಿ ಹಕ್ಕುಗಳ ಸಂರಕ್ಷಣೆಯನ್ನು ಖಾತ್ರಿ ಪಡಿಸುವ ರೋಗಿ ಹಕ್ಕುಗಳ ಮತ್ತು ಖಾಸಗಿ ಆಸ್ಪತ್ರೆಗಳ ಜವಾಬ್ದಾರಿಗಳ ಸನ್ನದು, ರೋಗಿಗಳ ದೂರು ನಿವಾರಣೆಗೆ ಜಿಲ್ಲಾ ಮಟ್ಟದಲ್ಲಿ ಸಿವಿಲ್ ನ್ಯಾಯಾಲಯದ ಅಧಿಕಾರ ಹೊಂದಿರುವ ಕುಂದು ಕೊರತೆ ನಿವಾರಣಾ ಸಮಿತಿಗಳು ಈ ಕಾಯ್ದೆಯ ಮುಖ್ಯ ಅಂಶಗಳಾಗಿವೆ. ಇವು ಜನಪರವಾದ ಅಂಶಗಳಾಗಿದ್ದು, ಖಾಸಗಿ ವೈದ್ಯರು ಇದಕ್ಕೆ ವಿರೋಧ ಮಾಡುತ್ತಿರುವುದು ಸರಿಯಲ್ಲ ಎಂದರು.
ತಮ್ಮ ದುರ್ನಡತೆ, ಸುಲಿಗೆಗಳನ್ನು ಎಗ್ಗಿಲ್ಲದೆ ಮುಂದುವರಿಸಲು ಬಯಸುವ ಹಲವು ಕಾರ್ಪೊರೇಟ್ ಹಾಗೂ ಖಾಸಗಿ ಆಸ್ಪತ್ರೆಗಳು ಈ ವಿಧೇಯಕವನ್ನು ತೀವ್ರವಾಗಿ ವಿರೋಧಿಸುತ್ತಿವೆ. ಅಲ್ಲದೆ, ವಿಧೇಯಕದಲ್ಲಿರುವ ಅಂಶಗಳನ್ನು ತಿರುಚಿ, ಅದನ್ನು ತಪ್ಪಾಗಿ ಅರ್ಥ ಮಾಡಿಸುವ ಪ್ರಯತ್ನ ಮಾಡಲಾಗುತ್ತಿದೆ. ಅದೇ ರೀತಿಯಲ್ಲಿ ಸರಕಾರ ಸರಕಾರಿ ಆಸ್ಪತ್ರೆಗಳನ್ನು ಈ ಕಾಯ್ದೆಯಡಿ ಸೇರ್ಪಡೆ ಮಾಡಿದೆ. ಅದನ್ನು ತೆಗೆದು ಹಾಕಿ ಕಾಯ್ದೆಗೆ ಅನುಮೋದನೆ ನೀಡಬೇಕು ಎಂದು ಒತ್ತಾಯಿಸಿದರು.
ಸುದ್ದಿಗೋಷ್ಠಿಯಲ್ಲಿ ವಿನಯ್ ಕುಮಾರ್, ನರಸಿಂಹಮೂರ್ತಿ, ಗೌರಿ ಸೇರಿದಂತೆ ಹಲವರು ಉಪಸ್ಥಿತರಿದ್ದರು.
ವೈದ್ಯರ ಮುಷ್ಕರದ ಹಿನ್ನೆಲೆಯಲ್ಲಿ ಹೆರಿಗೆಗೆ ಎಂದು ಬಂದ ಬಾಗಲಕೋಟೆ ಜಿಲ್ಲೆಯ ಹುನಗುಂದ ತಾಲೂಕಿನ ಚಿಕ್ಕಕೊಡಗಲಿ ತಾಂಡದ ಚೈತ್ರಾ(25) ಎಂಬವರಿಗೆ ತಾಲೂಕಿನ ಇಳಕಲ್ ಪಟ್ಟಣದಲ್ಲಿ ಯಾವುದೇ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನೀಡದೇ ಅಮಾನವೀಯವಾಗಿ ವರ್ತಿಸಿವೆ. 108 ಆ್ಯಂಬುಲೆನ್ಸ್ ವಾಹನದಲ್ಲಿ ಹೆರಿಗೆಗಾಗಿ ಆಸ್ಪತ್ರೆಯಿಂದ ಆಸ್ಪತ್ರೆಗೆ ಅಲೆದಾಡಿದರು. ತುರ್ತು ಸಂದರ್ಭದಲ್ಲೂ ಚಿಕಿತ್ಸೆ ನೀಡಲು ನಿರಾಕರಿಸಿದ್ದಾರೆ. ಆದರೆ, ಇದೇ ವೇಳೆ ಇಲ್ಲಿನ ಕುಮಾರೇಶ್ವರ ಆಸ್ಪತ್ರೆಯ ವೈದ್ಯ ಮನೋಹರ ಎಂಬವರಿಗೆ ಸಾರ್ವಜನಿಕರು ವಿಷಯ ಮುಟ್ಟಿಸಿದ ತಕ್ಷಣ, ಇವರು ಹೆರಿಗೆ ಮಾಡಿಸಿ ಮಾನವೀಯತೆ ಮೆರೆದಿದ್ದಾರೆ. ಗಂಡು ಮಗುವಿಗೆ ಜನ್ಮ ನೀಡಿರುವ ಚೈತ್ರಾ ಅವರು ಆ ಮಗುವಿಗೆ ಈ ವೈದ್ಯರ ಹೆಸರಿಡಲು ಮುಂದಾಗಿದ್ದಾರೆ.
ಖಾಸಗಿ ಆಸ್ಪತ್ರೆ ವೈದ್ಯರು ನಡೆಸುತ್ತಿರುವ ಮುಷ್ಕರಕ್ಕೂ, ವಿಧೇಯಕ್ಕೂ ಯಾವುದೇ ಸಂಬಂಧವಿಲ್ಲ. ಅವರು ಯಾಕೆ ಮುಷ್ಕರ ಮಾಡುತ್ತಿದ್ದಾರೆಂಬುದು ಗೊತ್ತಿಲ್ಲ. ಪ್ರತಿಭಟನೆ ಮಾಡಲು ಪ್ರತಿಯೊಬ್ಬರಿಗೂ ಸ್ವಾತಂತ್ರವಿದೆ. ಪ್ರತಿಭಟನೆ ಮಾಡುವುದಕ್ಕಿಂತ ಮೊದಲು ಸರಕಾರದ ಜತೆ ಅವರು ಯಾವುದೇ ಮಾತುಕತೆ ನಡೆಸಿಲ್ಲ. ಖಾಸಗಿ ಆಸ್ಪತ್ರೆಗಳ ನಿಯಂತ್ರಣ ವಿಧೇಯಕಕ್ಕೆ ಮುನ್ನ ಅವರ ಅಭಿಪ್ರಾಯವನ್ನು ನಾವು ಪಡೆದಿದ್ದೇವೆ. ಆದರೂ, ಮತ್ತೆ ಅವರು ಮುಷ್ಕರಕ್ಕೆ ಮುಂದಾಗಿದ್ದಾರೆ.-ಕೆ.ಆರ್.ರಮೇಶ್ ಕುಮಾರ್, ಆರೋಗ್ಯ ಸಚಿವ
ಕರ್ನಾಟಕ ಖಾಸಗಿ ವೈದ್ಯಕೀಯ ಮಸೂದೆ ತಿದ್ದುಪಡಿ ಇನ್ನೂ ಅಂಗೀಕಾರಗೊಂಡಿಲ್ಲ. ಅದು ಚರ್ಚೆಯಲ್ಲಿದೆ. ಈ ಸಂದರ್ಭದಲ್ಲಿ ಖಾಸಗಿ ವೈದ್ಯರು ಪ್ರತಿಭಟನೆ ನಡೆಸುವುದು ಸರಿಯಲ್ಲ. ಅನೇಕ ಬಾರಿ ಖಾಸಗಿ ವೈದ್ಯರೊಂದಿಗೆ ಮಾತುಕತೆ ನಡೆಸಿದ್ದೇವೆ. ಇದೀಗ ಅವರು ಏಕಾಏಕಿ 24 ಗಂಟೆಗಳ ಮುಷ್ಕರಕ್ಕೆ ಕರೆ ನೀಡಿದ್ದಾರೆ. ರೋಗಿಗಳಿಗೆ ತೊಂದರೆಯಾಗದಂತೆ ಸರಕಾರ ಕ್ರಮ ಕೈಗೊಂಡಿದೆ. ವೈದ್ಯರು ಹಾಗೂ ಔಷಧಿ ಕೊರತೆಯಾಗದಂತೆ ನೋಡಿಕೊಳ್ಳಲು ಸೂಚನೆ ನೀಡಲಾಗಿದೆ.
-ಸಿದ್ದರಾಮಯ್ಯ, ಮುಖ್ಯಮಂತ್ರಿ







