ಸಾಲ ಬಾಧೆ: ರೈತ ಆತ್ಮಹತ್ಯೆ
ಮಂಡ್ಯ, ನ.4: ಜಿಲ್ಲೆಯಲ್ಲಿ ರೈತರ ಆತ್ಮಹತ್ಯೆ ಸರಣಿ ಮುಂದುವರಿದಿದ್ದು, ಶುಕ್ರವಾರ ತಡರಾತ್ರಿಯೂ ಸಾಲಬಾಧೆಯಿಂದ ವಿಷ ಸೇವಿಸಿ ರೈತ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಾಲೂಕಿನ ತಗ್ಗಹಳ್ಳಿ ಗ್ರಾಮದಲ್ಲಿ ನಡೆದಿದೆ.
ಶುಕ್ರವಾರ ರಾತ್ರಿ ಕ್ರಿಮಿನಾಶಕ ಸೇವಿಸಿ ತೀವ್ರವಾಗಿ ಅಸ್ವಸ್ಥಗೊಂಡ ಸಿದ್ದೇಗೌಡ(60) ಅವರನ್ನು ತಕ್ಷಣ ಜಿಲ್ಲಾಸ್ಪತ್ರೆಗೆ ಸೇರಿಸಲಾಯಿತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟರೆಂದು ಪೊಲೀಸರಿಗೆ ಕುಟುಂಬಸ್ಥರು ದೂರು ನೀಡಿದ್ದಾರೆ.
ಸಿದ್ದೇಗೌಡ ತನ್ನ ತಾಯಿಯ ಹೆಸರಿನಲ್ಲಿರುವ ಎರಡು ಮುಕ್ಕಾಲು ಎಕರೆ ಭೂಮಿಯಲ್ಲಿ ವ್ಯವಸಾಯ ಮಾಡುತ್ತಿದ್ದು, ಬೆಳೆನಷ್ಟಕ್ಕೊಳಗಾಗಿದ್ದರು. ಸುಮಾರು 5 ಲಕ್ಷ ರೂ. ಸಾಲಮಾಡಿಕೊಂಡಿದ್ದರು ಎನ್ನಲಾಗಿದೆ.
ಸಾಲ ಬಾಧೆಯಿಂದ ತನ್ನ ಪತಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆಂದು ಪತ್ನಿ ಮಹದೇವಮ್ಮ ದೂರು ನೀಡಿದ್ದು, ಗ್ರಾಮಾಂತರ ಠಾಣೆ ಪೊಲೀಸರು ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story





