ಖಾಸಗಿ ವೈದ್ಯರಿಂದ ನ.13ಕ್ಕೆ 'ಬೆಳಗಾವಿ ಚಲೋ'
ಖಾಸಗಿ ಆಸ್ಪತ್ರೆಗಳ ನಿಯಂತ್ರಣ ಮಸೂದೆ
ಬೆಂಗಳೂರು, ನ. 6: ಖಾಸಗಿ ಆಸ್ಪತ್ರೆಗಳ ನಿಯಂತ್ರಣ ತಿದ್ದುಪಡಿ ಮಸೂದೆ ವಿರೋಧಿಸಿ ನ.13ರಿಂದ ಆರಂಭವಾಗಲಿರುವ ವಿಧಾನ ಮಂಡಲ ಅಧಿವೇಶನ ಸಂದರ್ಭದಲ್ಲಿ ‘ಬೆಳಗಾವಿ ಚಲೋ’ ನಡೆಸಲು ಭಾರತೀಯ ವೈದ್ಯಕೀಯ ಸಂಘ ತೀರ್ಮಾನಿಸಿದೆ.
ರಾಜ್ಯ ಸರಕಾರ ಜಾರಿಗೆ ತರಲು ಉದ್ದೇಶಿಸಿರುವ ಮಸೂದೆಗೆ ಖಾಸಗಿ ಆಸ್ಪತ್ರೆಗಳ ವೈದ್ಯರ ವಿರೋಧವಿದೆ ಎಂಬುದನ್ನು ಜನಪ್ರತಿನಿಧಿಗಳಿಗೆ ಮನವರಿಕೆ ಮಾಡಿಕೊಡಲು ಹೋರಾಟ ಹಮ್ಮಿಕೊಳ್ಳಲಾಗುವುದು ಎಂದು ಸಂಘದ ತುರ್ತು ಸಭೆಯಲ್ಲಿ ಮೇಲ್ಕಂಡ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಸಂಘದ ಕಾರ್ಯದರ್ಶಿ ಬಿ.ವೀರಣ್ಣ ತಿಳಿಸಿದ್ದಾರೆ.
ತಿದ್ದುಪಡಿ ಮಸೂದೆಯನ್ನು ವಿಧಾನ ಮಂಡಲ ಅಧಿವೇಶನದಲ್ಲಿ ಮಂಡಿಸದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ, ಆರೋಗ್ಯ ಸಚಿವ ಕೆ.ಆರ್.ರಮೇಶ್ಕುಮಾರ್ ಅವರಿಗೆ ಮನವಿ ಸಲ್ಲಿಸಲಾಗುವುದು. ಅಲ್ಲದೆ, ವೈದ್ಯರಿಂದ ಸರಣಿ ಉಪವಾಸ ಸತ್ಯಾಗ್ರಹ ನಡೆಸಲಾಗುವುದು ಎಂದು ಅವರು ಹೇಳಿದ್ದಾರೆ.
ನಿವೃತ್ತ ನ್ಯಾ.ವಿಕ್ರಂಜಿತ್ ಸೇನ್ ವರದಿಯನ್ನು ಯಥಾವತ್ತಾಗಿ ಜಾರಿಗೊಳಿಸಬೇಕು. ಖಾಸಗಿ ಆಸ್ಪತ್ರೆಗಳ ಬೇಡಿಕೆಗೆ ಸ್ಪಂದಿಸದಿದ್ದರೆ ಉದ್ದೇಶಿತ ಮಸೂದೆಗೆ ಅಂಕಿತ ಹಾಕದಂತೆ ರಾಜ್ಯಪಾಲರ ಮೇಲೆ ಒತ್ತಡ ಹೇರಲು ಎಲ್ಲ ವೈದ್ಯರು ವೃತ್ತಿ ತ್ಯಜಿಸಲು ನಿರ್ಧರಿಸಲಾಗಿದೆ ಎಂದು ವೀರಣ್ಣ ಪ್ರಕಟನೆಯಲ್ಲಿ ಎಚ್ಚರಿಕೆ ನೀಡಿದ್ದಾರೆ.







