ಕೇಂದ್ರದಲ್ಲಿ ಬಿಜೆಪಿ ತುಘಲಕ್ ದರ್ಬಾರ್ ನಡೆಸುತ್ತಿದೆ: ಫೈರೋಝ್ಖಾನ್
ಬೆಂಗಳೂರು, ನ.6: ಪ್ರಧಾನಿ ನರೇಂದ್ರಮೋದಿ ನೇತೃತ್ವದಲ್ಲಿ ಅಧಿಕಾರದಲ್ಲಿರುವ ಬಿಜೆಪಿಯು ತುಘಲಕ್ ದರ್ಬಾರ್ ನಡೆಸುತ್ತಿದೆ ಎಂದು ಎನ್ಎಸ್ಯುಐ ರಾಷ್ಟ್ರೀಯ ಅಧ್ಯಕ್ಷ ಫೈರೋಝ್ಖಾನ್ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸೋಮವಾರ ರಾಜಾಜಿನಗರದಲ್ಲಿನ ಖಾಸಗಿ ಹೊಟೇಲ್ವೊಂದರಲ್ಲಿ ಆಯೋಜಿಸಲಾಗಿರುವ ಎನ್ಎಸ್ಯುಐ ರಾಷ್ಟ್ರೀಯ ಕಾರ್ಯಕಾರಿಣಿಯ ಮೂರು ದಿನಗಳ ಸಭೆಯನ್ನು ಧ್ವಜಾರೋಹಣ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ದೇಶಾದ್ಯಂತ ನವೆಂಬರ್ 8ರಂದು ಕರಾಳ ದಿನ ಆಚರಣೆ ಮಾಡುತ್ತೇವೆ. ಕೇಂದ್ರ ಸರಕಾರವು ನೋಟುಗಳ ಅಮಾನ್ಯೀಕರಣದಿಂದ ದೇಶದಲ್ಲಿ ಸಾಕಷ್ಟು ಸಂಕಷ್ಟ ತಂದಿಟ್ಟಿತ್ತು. ಜನರನ್ನು ವಂಚಿಸಿದೆ. ಕಪ್ಪು ಹಣಕ್ಕೆ ಕಡಿವಾಣ ಹಾಕಿಲ್ಲ. ವಿದೇಶದಲ್ಲಿರುವ ಕಪ್ಪು ಹಣ ವಾಪಸ್ ಬಂದಿಲ್ಲ ಎಂದು ಅವರು ಟೀಕಿಸಿದರು.
ವಿದ್ಯಾರ್ಥಿಗಳಿಗೆ ನೂತನ ಯೋಜನೆ ಜಾರಿಗೊಳಿಸಲಿಲ್ಲ. ನರೇಂದ್ರ ಮೋದಿಯವರು ದ್ವೇಷ ರಾಜಕಾರಣ ಮಾಡುತ್ತಿದ್ದಾರೆ. ವಿಶ್ವವಿದ್ಯಾನಿಲಯಗಳನ್ನು ರಾಜಕೀಯಕ್ಕಾಗಿ ಬಳಸಿ ಕೊಳ್ಳುತ್ತಿದೆ. ಕಾಶ್ಮೀರದಲ್ಲಿ ಯಾರ ಜೊತೆ ಬಿಜೆಪಿ ಕೈ ಜೋಡಿಸಿದೆ. ವಿದ್ಯಾರ್ಥಿಗಳ ನಡುವೆ ದ್ವೇಷ ಹುಟ್ಟು ಹಾಕುತ್ತಿರುವವರು ಯಾರು ಎಂಬುದು ದೇಶದ ಜನತೆಗೆ ಗೊತ್ತಿದೆ ಎಂದು ಹೇಳಿದರು.
ದೇಶದಲ್ಲಿ ಎಬಿವಿಪಿಯ ಶಕ್ತಿ ದಿನೇ ದಿನೇ ಶಕ್ತಿ ಕುಸಿಯುತ್ತಿದೆ. ನಮ್ಮ ಸಂಘಟನೆ ಶಕ್ತಿಯಾಗುತ್ತಿದೆ. ದಿಲ್ಲಿ ವಿಶ್ವವಿದ್ಯಾನಿಲಯದ ಚುನಾವಣೆಯಲ್ಲಿ ನಮ್ಮ ಸಂಘಟನೆ ಮೂರು ಸ್ಥಾನಗಳನ್ನು ಗೆದ್ದಿದೆ. ಸದಸ್ಯತ್ವ ನೋಂದಣಿ ಹೆಚ್ಚು ಮಾಡುವುದರ ಮೂಲಕ ಸಂಘಟನೆಯನ್ನು ಬಲಪಡಿಸಬೇಕು. ರಾಜ್ಯದಲ್ಲಿ ನಡೆಯಲಿರುವ ಮುಂದಿನ ಚುನಾವಣೆಯಲ್ಲಿ ಎನ್ಎಸ್ಯುಐ ಪಾತ್ರ ಪ್ರಮುಖವಾದದ್ದು ಎಂದು ತಿಳಿಸಿದರು.
ದೇಶದ ಹಲವು ವಿಶ್ವವಿದ್ಯಾನಿಲಯಗಳಲ್ಲಿ ವಿದ್ಯಾರ್ಥಿಗಳು ಕಾಂಗ್ರೆಸ್ ಪರವಾಗಿ ಒಲವು ಹೊಂದಿದ್ದಾರೆ. ಈ ಕಾರ್ಯಕಾರಿಣಿ ಸಭೆಯಲ್ಲೂ ಭಾಗಿಯಾಗಿದ್ದಾರೆ. ಅಲ್ಲದೆ, ಎಐಸಿಸಿ ಉಪಾಧ್ಯಕ್ಷ ರಾಹುಲ್ಗಾಂಧಿ ನಾಯಕತ್ವಕ್ಕೆ ಬೆಂಬಲ ವ್ಯಕ್ತಪಡಿಸಿದ್ದಾರೆ. ನಮ್ಮ ಸಂಘಟನೆಯು ದೇಶಾದ್ಯಂತ ವಿದ್ಯಾರ್ಥಿಗಳನ್ನು ಒಂದುಗೂಡಿಸುವ ಪ್ರಯತ್ನ ಮಾಡುತ್ತಿದೆ ಎಂದರು.
ರಾಹುಲ್ ಗಾಂಧಿಯವರ ಆಶಯದಂತೆ ರಾಜಕೀಯದಲ್ಲಿ ವಿದ್ಯಾರ್ಥಿಗಳ ಪಾತ್ರ ಪ್ರಮುಖವಾಗಿದೆ. ಅವರು ನೇರವಾಗಿ ರಾಜಕೀಯದಲ್ಲಿ ಭಾಗವಹಿಸಬೇಕು. ನಮ್ಮ ಸಂಘಟನೆಯನ್ನು ಬಲಪಡಿಸಿ, ವಿದ್ಯಾರ್ಥಿಗಳು ಎದುರಿಸುತ್ತಿರುವ ಸಮಸ್ಯೆಗಳನ್ನು ಪರಿಹರಿಸುವ ನಿಟ್ಟಿನಲ್ಲಿ ನಾವು ಅವರ ಧ್ವನಿಯಾಗಿ ಕೆಲಸ ಮಾಡಬೇಕು ಎಂದು ಅವರು ತಿಳಿಸಿದರು.
ದೇಶದ ಅಭಿವೃದ್ಧಿಯಲ್ಲಿ ಯುವಕರ ಕೊಡುಗೆ ಪ್ರಮುಖವಾದದ್ದು. ಇತ್ತೀಚಿನ ದಿನಗಳಲ್ಲಿ ವಿದ್ಯಾರ್ಥಿಗಳ ಹಾದಿ ತಪ್ಪಿಸುವ ಕೆಲಸ ನಡೆಯುತ್ತಿದೆ. ವಿದ್ಯಾರ್ಥಿಗಳು ಹೆಚ್ಚಿನ ಜ್ಞಾನಾರ್ಜನೆ ಮಾಡಿ ದೇಶದ ಸರ್ವತೋಮುಖ ಅಭಿವೃದ್ಧಿಯಲ್ಲಿ ಸಕ್ರಿಯವಾಗಿ ಪಾಲ್ಗೊಳ್ಳಬೇಕು ಎಂದು ಕರೆ ನೀಡಿದರು.
ಎನ್ಎಸ್ಯುಐ ರಾಜ್ಯಾಧ್ಯಕ್ಷ ಮಂಜುನಾಥ್ ಮಾತನಾಡಿ, ಕೇಂದ್ರ ಸರಕಾರವು ನೋಟುಗಳ ಅಮಾನ್ಯೀಕರಣ ಮಾಡಿ ನ.8ಕ್ಕೆ ಒಂದು ವರ್ಷ. ಹೀಗಾಗಿ ಅಂದು ಕರಾಳ ದಿನಾಚರಣೆಗೆ ನಿರ್ಧರಿಸಲಾಗಿದೆ. ಅಲ್ಲದೆ, ಆರ್ಬಿಐಗೆ ಮುತ್ತಿಗೆ ಹಾಕುತ್ತೇವೆ. ಕಾರ್ಯಕಾರಿಣಿಯಲ್ಲಿ ಎಲ್ಲ ರಾಜ್ಯಗಳ ಪದಾಧಿಕಾರಿಗಳು ಪಾಲ್ಗೊಂಡಿದ್ದು, ಆಯಾ ರಾಜ್ಯಗಳಲ್ಲಿ ಅವರು ಕಾರ್ಯಕ್ರಮಗಳನ್ನು ರೂಪಿಸುತ್ತಾರೆ ಎಂದರು.
ಈ ಸಂದರ್ಭದಲ್ಲಿ ಕೆಪಿಸಿಸಿ ಕಾರ್ಯದರ್ಶಿ ರವಿಕುಮಾರ್, ವಿವಿಧ ರಾಜ್ಯಗಳ ಎನ್ಎಸ್ಯುಐ ರಾಜ್ಯಾಧ್ಯಕ್ಷರು, ರಾಷ್ಟ್ರೀಯ ಸಮಿತಿಯ ಪದಾಧಿಕಾರಿಗಳು ಉಪಸ್ಥಿತರಿದ್ದರು.







