ಅಕ್ರಮ ಮರಳು ಸಾಗಾಟ: 71 ಪ್ರಕರಣಗಳು ದಾಖಲು
ಮಡಿಕೇರಿ, ನ.15: ಕೊಡಗು ಜಿಲ್ಲೆಯ ಸೋಮವಾರಪೇಟೆ, ವೀರಾಜಪೇಟೆ ಹಾಗೂ ಮಡಿಕೇರಿ ವ್ಯಾಪ್ತಿಯ ಕಾವೇರಿ, ಹಾರಂಗಿ, ಲಕ್ಷ್ಮಣತೀರ್ಥ, ಬರಪೊಳೆಗಳಲ್ಲಿ ಅಕ್ರಮವಾಗಿ ಮರಳನ್ನು ತೆಗೆಯುತ್ತಿದ್ದು, ಗಣಿ ಮತ್ತು ಭೂವಿಜ್ಞಾನ ಇಲಾಖೆ, ಕಂದಾಯ ಇಲಾಖೆ ಹಾಗೂ ಪೊಲೀಸ್ ಇಲಾಖೆ ಅಕ್ರಮ ಮರಳುಗಾರಿಕೆಯನ್ನು ತಡೆಯಲು ಅಗತ್ಯ ಕ್ರಮಗಳನ್ನು ಕೈಗೊಂಡಿದೆ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪಿ.ರಾಜೇಂದ್ರಪ್ರಸಾದ್ ತಿಳಿಸಿದ್ದಾರೆ.
ಅಕ್ರಮವಾಗಿ ಮರಳು ತೆಗೆಯುವವರ ಹಾಗೂ ಸಾಗಾಟ ಮಾಡುವವರ ವಿರುದ್ಧ 2017ರಲ್ಲಿ 71 ಪ್ರಕರಣಗಳನ್ನು ದಾಖಲಿಸಲಾಗಿದ್ದು, 51 ಲಾರಿ, 4 ಟ್ರಾಕ್ಟರ್ ಹಾಗೂ ಇತರ 10 ವಾಹನಗಳನ್ನು ವಶಪಡಿಸಿಕೊಂಡು, 75 ಆರೋಪಿಗಳನ್ನು ದಸ್ತಗಿರಿ ಮಾಡಿ ಕಾನೂನು ರೀತಿ ಕ್ರಮ ಕೈಗೊಳ್ಳಲಾಗಿದೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ತಿಳಿಸಿದ್ದಾರೆ.
ಅಕ್ರಮ ಮರಳು ಸಾಗಾಟ ಮಾಡುವವರಿಂದ ಹಣ ವಸೂಲಿ ಮಾಡಿದ ಬಗ್ಗೆ ಮೊ.ಸಂ.157/17, ಕಲಂ 384 ಐಪಿಸಿ ರಂತೆ ಪ್ರಕರಣ ದಾಖಲಾಗಿದೆ. ತನಿಖೆಯ ತೀವ್ರತೆಯನ್ನು ಅರಿತು ಮೇಲಧಿಕಾರಿಗಳ ಅನುಮತಿ ಪಡೆದು ಪ್ರಕರಣವನ್ನು ಸಿಐಡಿ ತನಿಖೆಗೆ ವಹಿಸಲಾಗುವುದೆಂದು ಎಸ್ಪಿ ರಾಜೇಂದ್ರ ಪ್ರಸಾದ್ ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.





