‘ದೊಂಬರಾಟ ಬಿಟ್ಟು ರೈತರ ಸಮಸ್ಯೆ ಚರ್ಚಿಸಿ’
ಬಿಜೆಪಿ ವಿರುದ್ಧ ಜೆಡಿಎಸ್ ಸದಸ್ಯರ ಪ್ರತಿಭಟನೆ
.jpg)
ಬೆಳಗಾವಿ, ನ. 20: ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ವೈದ್ಯಾಧಿಕಾರಿ ಹೇಳಿಕೆ ಹಿನ್ನೆಲೆಯಲ್ಲಿ ಸಚಿವ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಬಿಜೆಪಿ, ಸುಗಮ ಕಲಾಪಕ್ಕೆ ಬಿಜೆಪಿ ಅಡ್ಡಿಪಡಿಸುತ್ತಿದೆ ಎಂದು ಆರೋಪಿಸಿ ಜೆಡಿಎಸ್ ಸ್ಪೀಕರ್ ಪೀಠದ ಮುಂದಿನ ಭಾವಿಗಿಳಿಸಿ ಧರಣಿ ಸತ್ಯಾಗ್ರಹ ನಡೆಸಿದ ಪ್ರಸಂಗ ವಿಧಾನಸಭೆಯಲ್ಲಿ ನಡೆಯಿತು.
ಸೋಮವಾರ ಭೋಜನ ವಿರಾಮದ ಬಳಿಕ ಕಲಾಪ ಸಮಾವೇಶಗೊಂಡಾಗ ಎದ್ದು ನಿಂತ ವಿಪಕ್ಷ ನಾಯಕ ಜಗದೀಶ್ ಶೆಟ್ಟರ್, ಡಿವೈಎಸ್ಪಿ ಗಣಪತಿ ಅಸಹಜ ಸಾವಿನ ನಂತರ ಶವ ಪರೀಕ್ಷೆಯಲ್ಲಿ ಆತ್ಮಹತ್ಯೆ ಎಂದು ಶವ ಪರೀಕ್ಷೆ ನಡೆಸುವಂತೆ ಸರಕಾರ ಒತ್ತಡ ಹಾಕಿತ್ತು ಎಂದು ವೈದ್ಯಾಧಿಕಾರಿ ಡಾ.ಶೈಲಜಾ ಸಿಬಿಐ ಮುಂದೆ ಹೇಳಿಕೆ ನೀಡಿದ್ದಾರೆಂದು ಸುದ್ದಿ ಮಾಧ್ಯಮಗಳಲ್ಲಿ ವರದಿಯಾಗುತ್ತಿದೆ.
ರಾಜ್ಯ ಸರಕಾರ ಒತ್ತಡ ಹಾಕಿದ್ದೆ ಆಗಿದ್ದರೆ, ಮುಖ್ಯಮಂತ್ರಿ ಸಿದ್ದರಾಮಯ್ಯನವರೇ ನೇರ ಹೊಣೆ ಹೊತ್ತು ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು. ಜತೆಗೆ ಬೆಂಗಳೂರು ನಗರಾಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ಅವರು ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಶೆಟ್ಟರ್ ಆಗ್ರಹಿಸಿದರು.
ವಿಪಕ್ಷ ನಾಯಕರ ಪ್ರಸ್ತಾಪಕ್ಕೆ ಉತ್ತರಿಸಿದ ಗೃಹ ಸಚಿವ ರಾಮಲಿಂಗಾರೆಡ್ಡಿ, ಸುದ್ದಿ ಮಾಧ್ಯಮಗಳಲ್ಲಿ ಬಂದಿರುವುದೆಲ್ಲ ಸತ್ಯವೆಂದು ಭಾವಿಸಿ ಉತ್ತರ ನೀಡಲಾಗುವುದಿಲ್ಲ. ಸಿಬಿಐ ತನಿಖೆ ಪ್ರಗತಿಯಲ್ಲಿದೆ. ಅದು ಪೂರ್ಣಗೊಳ್ಳುವವರೆಗೂ ತಾಳ್ಮೆಯಿಂದ ಇರಬೇಕೆಂದು ಮನವಿ ಮಾಡಿದರು. ಇದನ್ನು ತೀವ್ರವಾಗಿ ವಿರೋಧಿಸಿದ ಬಿಜೆಪಿ ಸದಸ್ಯರು, ರಾಜ್ಯ ಸರಕಾರ ಮೊದಲಿನಿಂದಲೂ ಹಠಮಾರಿ ಧೋರಣೆ ಅನುಸರಿಸುತ್ತಿದ್ದು, ಮೊಂಡುವಾದ ಮಾಡುತ್ತಿದೆ.
ಅತ್ಯಂತ ಗಂಭೀರ ಸ್ವರೂಪದ ಪ್ರಕರಣವನ್ನು ಮುಚ್ಚಿ ಹಾಕುವ ಪ್ರಯತ್ನ ಮಾಡಲಾಗುತ್ತಿದೆ ಎಂದು ಆರೋಪಿಸಿ ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದು ಧರಣಿ ಆರಂಭಿಸಿದರು. ಬೆಂಗಳೂರು ಅಭಿವೃದ್ಧಿ ಸಚಿವ ಕೆ.ಜೆ.ಜಾರ್ಜ್ ರಾಜೀನಾಮೆ ನೀಡುವವರೆಗೂ ನಮ್ಮ ಹೋರಾಟ ನಿಲ್ಲುವುದಿಲ್ಲ ಎಂದು ಜಗದೀಶ್ ಶೆಟ್ಟರ್ ಎಚ್ಚರಿಸಿದರು.
ದೊಂಬರಾಟ ಬಿಡಿ: ಇದೇ ವೇಳೆ ಜೆಡಿಎಸ್ ಉಪ ನಾಯಕ ವೈ.ಎಸ್.ವಿ.ದತ್ತ, ಹಿರಿಯ ಸದಸ್ಯರಾದ ಕೆ.ಎಂ.ಶಿವಲಿಂಗೇಗೌಡ ಇನ್ನಿತರರು ಆಕ್ಷೇಪ ವ್ಯಕ್ತಪಡಿಸಿ ಸುಗಮ ಕಲಾಪ ನಡೆಸಲು ಬಿಜೆಪಿ ಅಡ್ಡಿ ಪಡಿಸುತ್ತಿದೆ. ಇಲ್ಲಿ ಉತ್ತರ ಕರ್ನಾಟಕ ಭಾಗದ ಜ್ವಲಂತ ಸಮಸ್ಯೆಗಳಿವೆ. ಮೆಕ್ಕೆಜೋಳದ ಬೆಲೆ ಕುಸಿತ ಸೇರಿದಂತೆ ಗಂಭೀರ ವಿಚಾರದ ಚರ್ಚೆ ಆಗಬೇಕು. ಅದು ಬಿಟ್ಟು ಒಬ್ಬ ಗಣಪತಿ ಸಾವಿನ ಪ್ರಕರಣ ಮುಂದಿಟ್ಟುಕೊಂಡು ಬಿಜೆಪಿ ಹೋರಾಟ ಮಾಡುತ್ತಿದೆ. ಆದರೆ, ರಾಜ್ಯದಲ್ಲಿ ಬರ ಪರಿಸ್ಥಿತಿ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಹಲವು ಮಂದಿ ಸಾವನ್ನಪ್ಪಿದ್ದಾರೆ. ಈ ಬಗ್ಗೆ ಚರ್ಚೆ ಆಗಬೇಕು ಎಂದರು.
ಕಲಾಪಕ್ಕೆ ಅಡ್ಡಿಪಡಿಸುವುದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. ಸ್ಪೀಕರ್ ಪೀಠದ ಮುಂದಿನ ಬಾವಿಗಿಳಿದ ಧರಣಿ ಆರಂಭಿಸಿದರು. ಇದರಿಂದ ಆಡಳಿತ ಮತ್ತು ವಿಪಕ್ಷ ಸದಸ್ಯರ ನಡುವೆ ಏರಿದ ಧ್ವನಿಯಲ್ಲಿ ವಾಕ್ಸಮರ ನಡೆದು ಸದನದಲ್ಲಿ ಗದ್ದಲ-ಗೊಂದಲದ ವಾತಾವರಣ ನಿರ್ಮಾಣವಾದಾಗ ಸದನವನ್ನು ಹತ್ತು ನಿಮಿಷಗಳ ಕಾಲ ಮುಂದೂಡಲಾಯಿತು.
ಆ ಬಳಿಕ ಸದನ ಕಲಾಪ ಸಮಾವೇಶಗೊಂಡಾಗ ನಿಯಮ 69ರಡಿಯಲ್ಲಿ ಡಿವೈಎಸ್ಪಿ ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ಚರ್ಚೆಗೆ ಅವಕಾಶ ಕಲ್ಪಿಸುವ ಭರವಸೆಯನ್ನು ಸ್ಪೀಕರ್ ಕೋಳಿವಾಡ ಅವರು ನೀಡಿದ ಹಿನ್ನೆಲೆಯಲ್ಲಿ ಬಿಜೆಪಿ ಸದಸ್ಯರು ಧರಣಿ ಕೈಬಿಟ್ಟರು.







