ಸಾವಯವ ಬೆಳೆ-ಸಿರಿಧಾನ್ಯಗಳು ಆರೋಗ್ಯಕ್ಕೆ ಉತ್ತಮ: ಸಚಿವ ಕೃಷ್ಣ ಭೈರೇಗೌಡ
.jpg)
ಬೆಳಗಾವಿ, ನ.27: ಸಾವಯವ ಬೆಳೆಗಳು ಹಾಗೂ ಸಿರಿಧಾನ್ಯಗಳನ್ನು ನಾವು ಆಹಾರಕ್ಕಾಗಿ ಹೆಚ್ಚಾಗಿ ಬಳಕೆ ಮಾಡುವುದರಿಂದ ಆರೋಗ್ಯವನ್ನು ಉತ್ತಮವಾಗಿಟ್ಟು ಕೊಳ್ಳಲು ಸಾಧ್ಯವಾಗುತ್ತದೆ ಎಂದು ಕೃಷಿ ಸಚಿವ ಕೃಷ್ಣ ಭೈರೇಗೌಡ ಹೇಳಿದ್ದಾರೆ.
ಇಲ್ಲಿನ ಶಿವಬಸವ ನಗರದ ಎಸ್.ಜಿ.ಬಾಳೇಕುಂದ್ರಿ ತಾಂತ್ರಿಕ ಮಹಾವಿದ್ಯಾಲಯದ ಆವರಣದಲ್ಲಿ ಜಿಲ್ಲಾ ಪಂಚಾಯತ್ ಹಾಗೂ ಬೆಳಗಾವಿ, ಬಾಗಲಕೋಟೆ, ವಿಜಯಪುರ, ಉತ್ತರ ಕನ್ನಡ ಜಿಲ್ಲೆಗಳ ಕೃಷಿ ಇಲಾಖೆ ಮತ್ತು ಜಿಲ್ಲಾ ಪ್ರಾಂತೀಯ ಸಹಕಾರ ಕೃಷಿಕರ ಸಂಘಗಳ ಆಶ್ರಯದಲ್ಲಿ ಆಯೋಜಿಸಿದ್ದ 'ಸಾವಯವ ಮತ್ತು ಸಿರಿಧಾನ್ಯಗಳ ವಾಣಿಜ್ಯ ಮೇಳ'ವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ರೈತರು ಸಾವಯವ ಬೆಳೆಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ಪರಿಸರ ಸಂರಕ್ಷಣೆ ಹಾಗೂ ಮಣ್ಣಿನ ಗುಣಮಟ್ಟವನ್ನು ಕಾಪಾಡಬಹುದು. ಸಾವಯವ ಬೆಳೆಗಳಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಇದೆ. ಆದರೆ, ಬೆಳೆದ ಬೆಳೆಗಳನ್ನು ರೈತರೆ ಮುತುವರ್ಜಿ ವಹಿಸಿ ಮಾರಾಟ ಮಾಡಬೇಕಾಗಿದೆ ಎಂದು ಅವರು ಸಲಹೆ ನೀಡಿದರು.
ಎಚ್.ಕೆ.ಪಾಟೀಲ್ ಕೃಷಿ ಸಚಿವರಾಗಿದ್ದಾಗ ರಾಜ್ಯದಲ್ಲಿ ಸಾವಯವ ನೀತಿಯನ್ನು ಜಾರಿಗೆ ತರಲಾಗಿತ್ತು. ಸದ್ಯ ಸಾವಯವ ಕೃಷಿಯನ್ನು ಹೆಚ್ಚಿನ ಪ್ರಮಾಣದಲ್ಲಿ ಕೈಗೊಳ್ಳುವ ರಾಜ್ಯಗಳಲ್ಲಿ ಕರ್ನಾಟಕ 3ನೆ ಸ್ಥಾನದಲ್ಲಿದೆ ಎಂದರು.
ಬೆಳೆದ ಸಾವಯವ ಬೆಳಗಳನ್ನು ರೈತರೆ ಕ್ರೋಢೀಕರಿಸಿ ನೇರವಾಗಿ ಕಂಪೆನಿಗಳಿಗೆ ಮಾರಾಟ ಮಾಡುವ ವ್ಯವಸ್ಥೆಯನ್ನು ರಾಜ್ಯ ಸರಕಾರ ಮಾಡಿಕೊಟ್ಟಿದೆ. ರಾಜ್ಯದಲ್ಲಿ 14 ಸಾವಯವ ಬೆಳೆಗಾರರ ಪ್ರಾಂತೀಯ ಒಕ್ಕೂಟಗಳನ್ನು ರಚಿಸಲಾಗಿದ್ದು, ಕಂಪೆನಿಗಳು ಹಾಗೂ ರೈತರನ್ನು ಬೆಸೆಯುವ ಕೆಲಸ ಮಾಡಲಾಗಿದೆ. ಇದರಿಂದ ರೈತರಿಗೆ ಅತ್ಯಂತ ಅನುಕೂಲವಾಗುತ್ತಿದೆ ಎಂದು ಹೇಳಿದರು.
ಸಿರಿಧಾನ್ಯಗಳಲ್ಲಿ ಹೆಚ್ಚಿನ ಪೌಷ್ಠಿಕಾಂಶ ಇರುತ್ತದೆ ಹಾಗೂ ಸಿರಿಧಾನ್ಯಗಳು ಆರೋಗ್ಯಕ್ಕೂ ಉತ್ತಮ. ಆದುದರಿಂದ, ರೈತರು ಸಿರಿಧಾನ್ಯಗಳನ್ನು ಹೆಚ್ಚಾಗಿ ಬೆಳೆಯಬೇಕು ಹಾಗೂ ಸಾರ್ವಜನಿಕರು ಸಿರಿಧಾನ್ಯಗಳಿಂದ ತಯಾರಿಸಿದ ಆಹಾರ ಪದಾರ್ಥಗಳನ್ನು ಹೆಚ್ಚು ಉಪಯೋಗಿಸಬೇಕು ಎಂದು ಸಲಹೆ ನೀಡಿದರು.
ರಾಜ್ಯದ ಸಾವಯವ ಬೆಳೆಗಳು ಹಾಗೂ ಸಿರಿಧಾನ್ಯಗಳನ್ನು ಇತರರಿಗೆ ಪರಿಚಯಿಸುವ ನಿಟ್ಟಿನಲ್ಲಿ ಬೆಂಗಳೂರಿನಲ್ಲಿ ಜನವರಿ ತಿಂಗಳಲ್ಲಿ ಅಂತಾರಾಷ್ಟ್ರೀಯ ಮಟ್ಟದ ಸಾವಯವ ಹಾಗೂ ಸಿರಿಧಾನ್ಯಗಳ ಮೇಳವನ್ನು ಆಯೋಜಿಸಲಾಗುತ್ತಿದೆ. ದೇಶ, ವಿದೇಶದ 300 ದೊಡ್ಡ ಕಂಪೆನಿಗಳು ಈ ಮೇಳದಲ್ಲಿ ಭಾಗವಹಿಸಲಿವೆ ಎಂದು ಮಾಹಿತಿ ನೀಡಿದರು.
ರಾಜ್ಯವನ್ನು ದೇಶದಲ್ಲೇ ಸಾವಯವ ಮತ್ತು ಸಿರಿಧಾನ್ಯಗಳ ಮುಖ್ಯ ಕೇಂದ್ರವನ್ನಾಗಿಸಬೇಕು. ರಾಜ್ಯದಲ್ಲಿ ಉತ್ಪಾದನೆಯಾಗುವ ಸಾವಯವ ಬೆಳೆ ಮತ್ತು ಸಿರಿಧಾನ್ಯಗಳನ್ನು ಬೇರೆ ರಾಜ್ಯಗಳಿಗೆ ಹಾಗೂ ವಿದೇಶಕ್ಕೆ ರಪ್ತು ಮಾಡಬೇಕೆಂಬುದು ರಾಜ್ಯ ಸರಕಾರದ ಉದ್ದೇಶವಾಗಿದೆ ಎಂದು ಕೃಷ್ಣಭೈರೇಗೌಡ ವಿವರಿಸಿದರು.
ವಿಧಾನ ಪರಿಷತ್ ಸದಸ್ಯ ಮಹಾಂತೇಶ ಕವಟಗಿಮಠ ಮಾತನಾಡಿ, ಆರೋಗ್ಯಯುತ ಸಮಾಜ ನಿರ್ಮಾಣಕ್ಕೆ ಸಾವಯವ ಬೆಳೆ ಹಾಗೂ ಸಿರಿಧಾನ್ಯಗಳ ಸೇವನೆ ಅತ್ಯಂತ ಅವಶ್ಯಕವಾಗಿದೆ. ಸಾವಯವ ಬೆಳೆಗಳನ್ನು ಬೆಳೆಯುವ ರೈತರಿಗೆ ಉತ್ತಮ ಮಾರುಕಟ್ಟೆ ದೊರೆತರೆ ಲಾಭವಾಗುತ್ತದೆ. ಸಾವಯವ ಕೃಷಿ ಉತ್ತಮ ಕೃಷಿ ವ್ಯವಸ್ಥೆಗೆ ನಾಂದಿಯಾಗಲಿ ಹಾಗೂ ಯುವಜನಾಂಗಕ್ಕೆ ಮಾದರಿಯಾಗಲಿ ಎಂದು ಹಾರೈಸಿದರು.
ಕಾರ್ಯಕ್ರಮದಲ್ಲಿ ಕೃಷಿ ಇಲಾಖೆಯ ಅಧಿಕಾರಿಗಳಾದ ಅಶೋಕ ತುಬಚಿ ಹಾಗೂ ಬಿ.ಸೋಮಶೇಖರ, ಜಿಲ್ಲಾ ಜಂಟಿ ಕೃಷಿ ನಿರ್ದೇಶಕ ವಿ.ಜೆ.ಪಾಟೀಲ್, ಕೃಷಿ ಇಲಾಖೆಯ ಆಯುಕ್ತ ಸತೀಶ್, ನಿರ್ದೇಶಕ ಬಿ.ವೈ.ಶ್ರೀನಿವಾಸ್, ಧಾರವಾಡದ ಕೃಷಿ ವಿಶ್ವವಿದ್ಯಾನಿಲಯದ ವಿಸ್ತರಣಾಧಿಕಾರಿ ಡಾ.ಬಸಪ್ಪಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







