ಲಂಚ ಪಡೆದ ಉದ್ಯೋಗಾಧಿಕಾರಿಗೆ ಶಿಕ್ಷೆ
ಮಂಗಳೂರು, ಡಿ.5: ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತ ಬಲೆಗೆ ಬಿದ್ದಿದ್ದ ಉದ್ಯೋಗ ವಿನಿಮಯ ಕೇಂದ್ರದ ಉದ್ಯೋಗಾಧಿಕಾರಿ ಎಸ್.ಡಿ.ಬಸವರಾಜ್ಗೆ ಲೋಕಾಯುಕ್ತ ನ್ಯಾಯಾಲಯವು 1 ವರ್ಷ ಸಾದಾ ಸಜೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ತೀರ್ಪು ನೀಡಿದೆ.
ಎಂಆರ್ಪಿಎಲ್ನಲ್ಲಿ ಕೆಲಸಕ್ಕಾಗಿ ಅರ್ಜಿ ಕಳುಹಿಸಿಕೊಡಲು ಬಲರಾಮ್ ಎಂಬವರಿಂದ ಲಂಚಕ್ಕೆ ಬೇಡಿಕೆ ಇಟ್ಟು 2010 ಸೆ.8ರಂದು 5 ಸಾವಿರ ರೂ. ಲಂಚ ಪಡೆದಿದ್ದರು ಎನ್ನಲಾಗಿದೆ.
ಈ ಬಗ್ಗೆ ಆಗಿನ ಲೋಕಾಯುಕ್ತ ಇನ್ಸ್ಪೆಕ್ಟರ್ ಉದಯ ಎಂ. ನಾಯಕ್ ನೇತೃತ್ವದ ಪೊಲೀಸರು ಆರೋಪಿ ಅಧಿಕಾರಿಯನ್ನು ಬಂಧಿಸಿದ್ದರು. ಬಳಿಕ ಜಾಮೀನಿನ ಮೇಲೆ ಬಿಡುಗಡೆ ಹೊಂದಿದ್ದ. ಅಪರಾಧಿ ಪ್ರಸ್ತುತ ಬೆಂಗಳೂರಿನಲ್ಲಿ ಉದ್ಯೋಗಾಧಿಕಾರಿಯಾಗಿದ್ದರು. ಮಂಗಳೂರಿನ ಲೋಕಾಯುಕ್ತ ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಮುರಳೀಧರ ಪೈ ಈ ತೀರ್ಪು ಪ್ರಕಟಿಸಿದ್ದಾರೆ. ಲೋಕಾಯುಕ್ತ ಪರವಾಗಿ ವಿಶೇಷ ಅಭಿಯೋಜಕ, ನ್ಯಾಯವಾದಿ ಕೆ.ಎಸ್.ಎನ್. ರಾಜೇಶ್ ವಾದಿಸಿದ್ದರು. ಕಳೆದ ಆರು ತಿಂಗಳಲ್ಲಿ ಸತತ 10 ಲೋಕಾಯುಕ್ತ ಪ್ರಕರಣಗಳಲ್ಲಿ 7 ಆರೋಪಿಗಳಿಗೆ ಶಿಕ್ಷೆ ವಿಧಿಸಲಾಗಿದೆ ಎಂದು ತಿಳಿದು ಬಂದಿದೆ.





