ಪ್ರತಿ ಮಂಗಳವಾರ ಸಾರ್ವಜನಿಕರಿಂದ ಅಹವಾಲು ಆಲಿಸಲು ಡಿಸಿ ಸೂಚನೆ
ಉಡುಪಿ, ಡಿ.18: ಇನ್ನು ಮುಂದೆ ಜಿಲ್ಲಾ ಮಟ್ಟ ಹಾಗೂ ತಾಲೂಕು ಮಟ್ಟದ ಎಲ್ಲಾ ಇಲಾಖಾ ಅಧಿಕಾರಿಗಳು ಮಂಗಳವಾರದಂದು ತಮ್ಮ ಕಚೇರಿಯಲ್ಲಿ ಉಪಸ್ಥಿತರಿದ್ದು ನಾಗರಿಕರ ಅಹವಾಲುಗಳನ್ನು ಸ್ವೀಕರಿಸಬೇಕು ಎಂದು ಉಡುಪಿ ಜಿಲ್ಲಾಧಿಕಾರಿ ಪ್ರಿಯಾಂಕ ಮೇರಿ ಫ್ರಾನ್ಸಿಸ್ ತಿಳಿಸಿದ್ದಾರೆ.
ಪ್ರತಿವಾರದ ಮಂಗಳವಾರದಂದು ಆಯಾ ಇಲಾಖೆಗಳಿಗೆ ಸಂಬಂಧಪಟ್ಟಂತೆ ನಾಗರಿಕರ ಅಹವಾಲುಗಳನ್ನು ಪಡೆಯುವ ಸಲುವಾಗಿ ಅಧಿಕಾರಿಗಳು ತಪ್ಪದೇ ಬೆಳಿಗ್ಗೆ 10 ಗಂಟೆಯಿಂದ ಸಂಜೆ 5:30ರ ತನಕ ಕಚೇರಿಯಲ್ಲೇ ಇರಬೇಕು ಎಂದು ಅವರು ಸೂಚನೆ ನೀಡಿದ್ದಾರೆ.
ಜನಸ್ಪಂದನ: ಇತ್ತೀಚೆಗೆ ರಾಜ್ಯ ಮುಖ್ಯ ಕಾರ್ಯದರ್ಶಿಗಳು ಎಲ್ಲಾ ಜಿಲ್ಲಾಧಿಕಾರಿಗಳು ಹಾಗೂ ಜಿಪಂಗಳ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಳೊಂದಿಗೆ ನಡೆಸಿದ ವಿಡಿಯೋ ಸಂವಾದದಲ್ಲಿ ಈ ಬಗ್ಗೆ ಸೂಚನೆ ನೀಡಿದ್ದರು. ಪ್ರತಿ ಮಂಗಳವಾರದಂದು ಎಲ್ಲಾ ಅಧಿಕಾರಿಗಳು ದಿನವಿಡೀ ಕೇಂದ್ರಸ್ಥಾನದಲ್ಲಿ ಉಪಸ್ಥಿತರಿದ್ದು ಸಾರ್ವಜನಿಕರಿಗೆ ಲಭ್ಯವಿರಬೇಕು ಹಾಗೂ ಅವರ ಕುಂದುಕೊರತೆಗಳನ್ನು ಆಲಿಸಿ ಪರಿಹರಿಸಲು ಮುಂದಾಗಬೇಕೆಂದು ಸೂಚನೆ ನೀಡಿದ್ದರು.
ಇದರಂತೆ ಜಿಲ್ಲಾಧಿಕಾರಿಗಳ ಕಚೇರಿ, ಸಹಾಯಕ ಕಮೀಷನರ್ ಕುಂದಾಪುರ ಮತ್ತು ಜಿಲ್ಲೆಯ ಎಲ್ಲಾ ತಾಲೂಕು ಕಚೇರಿಗಳಲ್ಲಿ ಪ್ರತೀ ಮಂಗಳವಾರ ಜನಸ್ಪಂದನ ಕಾರ್ಯಕ್ರಮವನ್ನು ಆಯೋಜಿಸಬೇಕಾಗಿದೆ ಎ ಂದು ಜಿಲ್ಲಾಧಿಕಾರಿ ಪ್ರಕಟಣೆ ತಿಳಿಸಿದೆ.







