ಹಿಮಾಚಲ ಪ್ರದೇಶ: ಜೈರಾಮ್ ಠಾಕೂರ್ ಮುಖ್ಯಮಂತ್ರಿ ?
ಹೊಸದಿಲ್ಲಿ, ಡಿ.18: ಹಿಮಾಚಲ ಪ್ರದೇಶದ ಮಾಜಿ ಸಚಿವ ಜೈರಾಮ್ ಠಾಕೂರ್ಗೆ ದಿಲ್ಲಿಗೆ ಬರುವಂತೆ ಬಿಜೆಪಿ ಹೈಕಮಾಂಡ್ ತಿಳಿಸಿದ್ದು, ಅವರು ಹಿಮಾಚಲಪ್ರದೇಶದ ಮುಖ್ಯಮಂತ್ರಿಯಾಗಿ ಆಯ್ಕೆಯಾಗುವ ನಿರೀಕ್ಷೆಯಿದೆ ಎಂದು ಪಕ್ಷದ ಮೂಲಗಳು ತಿಳಿಸಿವೆ.
ಹಿಮಾಚಲಪ್ರದೇಶದಲ್ಲಿ ಬಿಜೆಪಿಯ ಮುಖ್ಯಮಂತ್ರಿ ಅಭ್ಯರ್ಥಿಯಾಗಿದ್ದ ಪಿ.ಕೆ.ಧುಮಾಲ್ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಸತ್ಪಾಲ್ಸಿಂಗ್ ಸತ್ತಿ ಇಬ್ಬರೂ ಚುನಾವಣೆಯಲ್ಲಿ ಸೋಲುಂಡಿರುವ ಕಾರಣ ಜೈರಾಮ್ಗೆ ಅದೃಷ್ಟ ಒಲಿದು ಬರುವ ನಿರೀಕ್ಷೆಯಿದೆ ಎನ್ನಲಾಗಿದೆ.
1998ರಲ್ಲಿ ಪ್ರಥಮ ಬಾರಿ ವಿಧಾನಸಭೆಗೆ ಆಯ್ಕೆಯಾಗಿದ್ದ ಜೈರಾಮ್ ಈ ಹಿಂದಿನ ಬಿಜೆಪಿ ಸರಕಾರದಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ರಾಜ್ ಇಲಾಖೆಯ ಸಚಿವರಾಗಿದ್ದರು. ಈ ಬಾರಿಯ ಚುನಾವಣೆಯಲ್ಲಿ ಮಂಡಿ ವಿಧಾನಸಭಾ ಕ್ಷೇತ್ರದಿಂದ ಆಯ್ಕೆಯಾಗಿದ್ದಾರೆ.
ಈ ಮಧ್ಯೆ, ಆಘಾತಕಾರಿ ಸೋಲುಂಡಿರುವ ಪಿ.ಕೆ.ಧುಮಾಲ್, ವೈಯಕ್ತಿಕ ಸೋಲಿಗೆ ಹೆಚ್ಚಿನ ಮಹತ್ವ ನೀಡಬೇಕಿಲ್ಲ. ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದಿರುವುದು ಹೆಚ್ಚಿನ ಖುಷಿ ನೀಡಿದೆ. ರಾಜಕೀಯದಲ್ಲಿ ಸೋಲು, ಗೆಲುವು ಸಹಜ. ಸೋಲನ್ನು ನಿರೀಕ್ಷಿಸಿರಲಿಲ್ಲ. ಸೋಲಲು ಕಾರಣ ಏನೆಂಬುದನ್ನು ಪರಿಶೀಲಿಸುತ್ತೇನೆ ಎಂದು ಪ್ರತಿಕ್ರಿಯಿಸಿದ್ದಾರೆ.