ಅಮಾಯಕರ ಬಂಧನ: ಬಿಡುಗಡೆಗೆ ಕರವೇ ಆಗ್ರಹ
ಕಾರವಾರ, ಡಿ.19: ಪರೇಶ್ ಮೇಸ್ತಾ ಅನುಮಾನಾಸ್ಪದ ಸಾವಿನ ಬಳಿಕ ಜಿಲ್ಲೆಯಲ್ಲಿ ನಡೆದ ಗಲಭೆ ಪ್ರಕರಣದಲ್ಲಿ ಅಮಾಯಕರನ್ನು ಬಂಧಿಸಲಾಗಿದ್ದು, ಅವರನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಡಿಸಿ ಎಸ್. ಎಸ್. ನಕುಲ್ ಅವರಿಗೆ ಮಂಗಳವಾರ ಮನವಿ ಸಲ್ಲಿಸಿದರು.
ಪರೇಶ್ ಮೇಸ್ತಾ ಸಾವಿನ ಪ್ರಕರಣಕ್ಕೆ ಸಂಬಂಧಿಸಿದಂತೆ ವಿವಿಧಡೆ ನಡೆದ ಪ್ರತಿಭಟನೆಯಲ್ಲಿ ಭಾಗಿಯಾಗಿದ್ದ ಮತ್ತು ತಮ್ಮ ಇತರ ಕೆಲಸಗಳಿಗೆ ಪಟ್ಟಣಗಳಿಗೆ ಆಗಮಿಸಿದ ಅಮಾಯಕರನ್ನು ಬಂಧಿಸಲಾಗಿದೆ. ಇದರಿಂದ ಅವರ ಕುಟುಂಬ ಆತಂಕಕ್ಕೆ ಒಳಗಾಗಿದ್ದು, ಕೂಡಲೇ ಅವರನ್ನು ಬಿಡುಗಡೆ ಮಾಡಬೇಕು ಎಂದು ಮನವಿಯಲ್ಲಿ ತಿಳಿಸಿದ್ದಾರೆ.
ಇದಕ್ಕೆ ಪ್ರತಿಕ್ರಿಯಿಸಿದ ಜಿಲ್ಲಾಧಿಕಾರಿ, ಘಟನೆಗೆ ಸಂಬಂಧಿಸಿದಂತೆ ಸೂಕ್ತ ದಾಖಲೆ ಹಾಗೂ ವಿಡಿಯೋಗಳನ್ನು ಗಮನಿಸಿ ಕಿಡಿಗೇಡಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಯಾವುದೇ ಅಮಾಯಕರನ್ನು ಬಂಧಿಸಿಲ್ಲ ಎಂದು ಸ್ಪಷ್ಟಪಡಿಸಿದರು.
ಪರೇಶ್ ಮೇಸ್ತ ಸಾವಿನ ಕುರಿತು ಸಮಗ್ರ ತನಿಖೆ ನಡೆಯಬೇಕು. ಉದ್ವಿಗ್ನ ವಾತಾವರಣವನ್ನು ಸರಿಪಡಿಸಬೇಕು. ಜಿಲ್ಲೆಯಲ್ಲಿ ಶಾಂತಿ ಸಭೆ ನಡೆಸಿದರೆ ಜನರಲ್ಲಿ ಜಾಗೃತಿ ಮೂಡುತ್ತದೆ. ಈ ನಿಟ್ಟಿನಲ್ಲಿ ಜಿಲ್ಲಾಡಳಿತ ಮುತುವರ್ಜಿ ವಹಿಸಬೇಕು ಎಂದು ಕೋರಿದರು.
ಸಂಘಟನೆ ಜಿಲ್ಲಾಧ್ಯಕ್ಷ ಭಾಸ್ಕರ ಪಟಗಾರ, ಪದಾಧಿಕಾರಿಗಳಾದ ಮಂಜುನಾಥ ಗೌಡ, ಅರುಣ ಹರಕಡೆ, ಪೂರ್ಣಿಮಾ ಮಾಹೇಕರ್, ತುಷಾ ತುಳಸಿದಾಸ ನಾಯ್ಕ, ಸರಸ್ವತಿ ತಾಂಡೇಲ್ ಇತರರಿದ್ದರು.







