ಜ.9ರಂದು ಸೌಹಾರ್ದ ಸಮಾವೇಶ: ಎಚ್.ಡಿ. ಕುಮಾರಸ್ವಾಮಿ

ಮಂಗಳೂರು, ಡಿ. 28: ಕರಾವಳಿ ಜಿಲ್ಲೆಗಳಲ್ಲಿ ಸೌಹಾರ್ದ ವಾತಾವರಣ ಮೂಡಿಸುವ ನಿಟ್ಟಿನಲ್ಲಿ ಜ.9ರಂದು ನಗರದ ನೆಹರೂ ಮೈದಾನದಲ್ಲಿ ‘ಜನತಾದಳದ ನಡಿಗೆ ಸೌಹಾರ್ದದ ಕಡೆಗೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಎಚ್.ಡಿ.ಕುಮಾರಸ್ವಾಮಿ ಹೇಳಿದರು.
ಇತ್ತೀಚಿನ ದಿನಗಳಲ್ಲಿ ದ.ಕ.ದಲ್ಲಿ ನಡೆಯುತ್ತಿರುವ ದುಷ್ಕೃತ್ಯಗಳು ಕೋಮು ಬಣ್ಣ ಪಡೆದುಕೊಳ್ಳುತ್ತಿರುವುದರಿಂದ ಜಿಲ್ಲೆಯಲ್ಲಿ ಅದರಲ್ಲೂ ಮಂಗಳೂರಿನಲ್ಲಿ ಭೀತಿಯ ವಾತಾವರಣ ನಿರ್ಮಾಣವಾಗುತ್ತಿದೆ. ಎರಡೂ ರಾಷ್ಟ್ರೀಯ ಪಕ್ಷದ ಹಿಡನ್ ಅಜೆಂಡಾ ಬಗ್ಗೆ ಕರಾವಳಿಯ ಜನರಿಗೆ ಎಚ್ಚರಿಕೆ ನೀಡುವ ಮೂಲಕ ಸಾಮರಸ್ಯದ ನಿರ್ಮಿಸಲು ಉದ್ದೇಶದೊಂದಿಗೆ ಈ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ ಎಂದರು.
ಸಮಾವೇಶದಲ್ಲಿ ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ. ದೇವೇಗೌಡ ಭಾಗವಹಿಸಲಿದ್ದಾರೆ. ಸಮಾವೇಶಕ್ಕೆ ಎಲ್ಲರೂ ಕೈಜೋಡಿಸಬೇಕೆಂದು ಮನವಿ ಮಾಡಿದ ಅವರು, ಸಮಾಜಘಾತುಕ ಶಕ್ತಿಗಳು, ಹಿಡನ್ ಅಜೆಂಡಾವನ್ನು ಹೊಂದಿರುವ ಸಂಘಟನೆಗಳ ಬೆಂಬಲ ಈ ಸಮಾವೇಶಕ್ಕೆ ಬೇಡ ಎಂದು ಕುಮಾರಸ್ವಾಮಿ ಹೇಳಿದರು.
ಈ ಬಾರಿ ಜೆಡಿಎಸ್ ಅಧಿಕಾರಕ್ಕೆ
ರಾಜ್ಯದಲ್ಲಿ ಜನರು ಬದಲಾಯವಣೆಯನ್ನು ಬಯಸಿರುವುದರಿಂದ ಈ ಬಾರಿ ಜೆಡಿಎಸ್ ಅಧಿಕಾರಕ್ಕೆ ಬರಲಿದೆ ಎಂದು ಕುಮಾರಸ್ವಾಮಿ ವಿಶ್ವಾಸ ವ್ಯಕ್ತಪಡಿಸಿದರು.
ಜೆಡಿಎಸ್ ಅಧಿಕಾರಕ್ಕೆ ಬಂದಲ್ಲಿ 25 ಸಾವಿರ ಕೋಟಿ ರೂ. ವೆಚ್ಚದಲ್ಲಿ ಸ್ವಾಮಿನಾಥನ್ ಆಯೋಗದ ವರದಿ ಜಾರಿ ತರಲಾಗುವುದು. ಪ್ರತಿ ಕುಟುಂಬಕ್ಕೆ ಆರೋಗ್ಯ ವಿಮೆ ಸೌಕರ್ಯ ಸಹಿತ ಹಿರಿಯ ನಾಗರಿಕರಿಗೆ ಪ್ರತಿ ತಿಂಗಳು 5 ಸಾವಿರ ರೂ. ಗೌರವಧನ, ತಾಯಿ ಮಗುವಿನ ಆರೋಗ್ಯಕ್ಕಾಗಿ ತಲಾ 36 ಸಾವಿರ ವೆಚ್ಚ ಮಾಡಲು ಯೋಜನೆ ಹೊಂದಿರುವುದಾಗಿ ಅವರು ತಿಳಿಸಿದರು.







