ಸ್ವಚ್ಛಭಾರತ ಅಭಿಯಾನದ 109 ಕೋಟಿ ದುರ್ಬಳಕೆ: ಎನ್.ಆರ್.ರಮೇಶ್ ಆರೋಪ

ಬೆಂಗಳೂರು, ಡಿ.30: ಕೇಂದ್ರ ಸರಕಾರದ ಯೋಜನೆಯಾದ ಸ್ವಚ್ಛ ಭಾರತ ಅಭಿಯಾನದ 109 ಕೋಟಿ ರೂ.ಗಳ ಅನುದಾನವನ್ನು ಕಾಂಗ್ರೆಸ್ನ ಕೆಲವು ಸಚಿವರು ಮತ್ತು ಶಾಸಕರು ದುರ್ಬಳಕೆ ಮಾಡಿಕೊಂಡಿದ್ದಾರೆ ಎಂದು ಬಿಜೆಪಿ ವಕ್ತಾರ ಎನ್.ಆರ್.ರಮೇಶ್ ಗಂಭೀರ ಆರೋಪ ಮಾಡಿದ್ದಾರೆ.
ಈ ಸಂಬಂಧ ಜನಪ್ರತಿನಿಧಿಗಳು ಮತ್ತು ಬಿಬಿಎಂಪಿ ಅಧಿಕಾರಿಗಳ ವಿರುದ್ಧ ಸಿಬಿಐ, ಎಸಿಬಿ ಮತ್ತು ಲೋಕಾಯುಕ್ತದಲ್ಲಿ ದೂರು ದಾಖಲಿಸಿದ್ದು, ಸ್ವಚ್ಛ ಭಾರತ ಅಭಿಯಾನದ ಅನುದಾನವನ್ನು ಶೌಚಾಲಯಗಳ ನಿರ್ಮಾಣ, ಜೈವಿಕ ಅನಿಲ ಘಟಕಗಳ ನಿರ್ವಹಣೆ ಮತ್ತು ತ್ಯಾಜ್ಯ ಸಂಸ್ಕರಣಾ ಘಟಕಗಳ ಸುತ್ತಮುತ್ತ ಮೂಲಭೂತ ಸೌಲಭ್ಯ ಯೋಜನೆಗಳಿಗೆ ಮಾತ್ರ ಬಳಸಿಕೊಳ್ಳಬಹುದಾಗಿದೆ. ಆದರೆ, ಕೆಲ ಪ್ರಭಾವಿ ಸಚಿವರು ಮತ್ತು ಕಾಂಗ್ರೆಸ್ ಶಾಸಕರ ಒತ್ತಡ್ಕಕೆ ಮಣಿದಿರುವ ಪಾಲಿಕೆ ಅಧಿಕಾರಿಗಳು ಸ್ವಚ್ಛ ಭಾರತ ಅಭಿಯಾನದ ಅನುದಾನವನ್ನು ಬೇರೆ ಕಾಮಗಾರಿಗಳಿಗೆ ಬಿಡುಗಡೆ ಮಾಡಿದ್ದಾರೆ ಎಂದು ಮಾಧ್ಯಮಗಳಿಗೆ ತಿಳಿಸಿದರು.
ಈ ಹಗರಣದಲ್ಲಿ ಸಚಿವ ಕೃಷ್ಣಭೈರೇಗೌಡ, ಶಾಸಕರಾದ ಹಾರಿಸ್, ಎಸ್.ಟಿ.ಸೋಮಶೇಖರ್, ದಿನೇಶ್ ಗುಂಡೂರಾವ್, ಭೈರತಿ ಬಸವರಾಜ್, ಜಮೀರ್ ಅಹಮ್ಮದ್ ಖಾನ್ ಮತ್ತು ಪಾಲಿಕೆ ಆರೋಗ್ಯ ವಿಭಾಗದ ಜಂಟಿ ಆಯಕ್ತ, ಎಸ್ಡಬ್ಲೂಎಂ ಮುಖ್ಯ ಅಭಿಯಂತರರು, ಘನತ್ಯಾಜ್ಯ ವಿಲೇವಾರಿ ಇಲಾಖೆಯ ಅಧಿಕಾರಿಗಳು ಮತ್ತಿತರರ ವಿರುದ್ಧ ಸಿಬಿಐ, ಎಸಿಬಿ ಮತ್ತು ಲೋಕಾಯುಕ್ತದಲ್ಲಿ ದೂರು ದಾಖಲಿಸಲಾಗಿದೆ ಎಂದು ಹೇಳಿದರು.





