ಫೆಬ್ರವರಿ ಮೊದಲ ವಾರದಲ್ಲಿ ಬೀದಿ ಬದಿ ವ್ಯಾಪಾರಿಗಳ ಕೈಗೆ ಗುರುತಿನ ಚೀಟಿ
ಬೆಂಗಳೂರು, ಜ.6: ಬೀದಿ ಬದಿ ವ್ಯಾಪಾರಿಗಳಿಗೆ ಜ.25ರೊಳಗೆ ಗುರುತಿನ ಚೀಟಿ ವಿತರಣೆಗೆ ಎಲ್ಲ ಸಿದ್ಧತೆಗಳನ್ನು ಪೂರ್ಣಗೊಳಿಸುವಂತೆ ಮೇಯರ್ ಸಂಪತ್ರಾಜ್ ಹಾಗೂ ಆಯುಕ್ತ ಮಂಜುನಾಥ ಪ್ರಸಾದ್ ಜಂಟಿ ಆಯುಕ್ತರುಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದು, ಫೆಬ್ರವರಿ ಮೊದಲನೇ ವಾರದಲ್ಲಿ ಗುರುತಿನ ಚೀಟಿಗಳು ಎಲ್ಲರ ಕೈ ಸೇರಲಿವೆ.
ಬಿಬಿಎಂಪಿ ವ್ಯಾಪ್ತಿಯ ಬೀದಿ ಬದಿ ವ್ಯಾಪಾರಿಗಳಿಗೂ ಗುರುತಿನ ಚೀಟಿ ನೀಡುವ ಕಾರ್ಯ ಚುರುಕುಗೊಂಡಿದ್ದು, ಫೆಬ್ರವರಿ ಮೊದಲನೇ ವಾರದಲ್ಲಿ ನಗರದಲ್ಲಿ ಬೀದಿ ಬದಿ ವ್ಯಾಪಾರಿಗಳ ಬೃಹತ್ ಸಮಾವೇಶ ಏರ್ಪಡಿಸಿ ಗುರುತಿನ ಚೀಟಿ ವಿತರಿಸಲು ಸರಕಾರ ಮುಂದಾಗಿದೆ.
ಸರಕಾರ ಬೀದಿ ಬದಿ ವ್ಯಾಪಾರಿಗಳ ಕಲ್ಯಾಣಕ್ಕಾಗಿ ಬಜೆಟ್ನಲ್ಲಿ 10 ಕೋಟಿ ರೂ.ಗಳಿಗೂ ಅಧಿಕ ಹಣ ಮೀಸಲಿಡಲಾಗಿದೆ. ಅಲ್ಲದೆ, 10 ಸಾವಿರ ಪ್ರೋತ್ಸಾಹ ಧನ ನೀಡುವುದು ಸೇರಿದಂತೆ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಲಾಗಿದೆ. ಆದರೆ, ಸವಲತ್ತಿನ ಬಗ್ಗೆ ಬೀದಿ ಬದಿ ವ್ಯಾಪಾರಿಗಳ ಸಮರ್ಪಕ ಮಾಹಿತಿಯೇ ಇಲ್ಲ. ಹೀಗಾಗಿ, ಸರಕಾರದ ಯೋಜನೆಗಳನ್ನು ವ್ಯಾಪಾರಿಗಳಿಗೆ ತಲುಪಿಸುವ ಅನಿವಾರ್ಯತೆಯಿದೆ. ಈ ನಿಟ್ಟಿನಲ್ಲಿ ಬೀದಿ ಬದಿ ವ್ಯಾಪಾರಿಗಳ ಒಕ್ಕೂಟ ಕಾರ್ಯನಿರ್ವಹಿಸಲಿದೆ ಎಂದು ಒಕ್ಕೂಟದ ಅಧ್ಯಕ್ಷ ರಂಗಸ್ವಾಮಿ ತಿಳಿಸಿದ್ದಾರೆ
ಬಿಬಿಎಂಪಿ ವ್ಯಾಪ್ತಿಯ 198 ವಾರ್ಡ್ಗಳಲ್ಲಿ 191 ವಾರ್ಡ್ ಕಡೆ ಬೀದಿ ಬದಿ ವ್ಯಾಪಾರಿಗಳನ್ನು ಗುರುತಿಸುವ ಕಾರ್ಯ ಪೂರ್ಣಗೊಂಡಿದೆ. ಆದರೆ, ಮಲ್ಲೇಶ್ವರಂ ವಿಧಾನಸಭಾ ಕ್ಷೇತ್ರದಲ್ಲಿ ಸಮೀಕ್ಷೆ ನಡೆಸಲು ಅಲ್ಲಿನ ಶಾಸಕರು ಅನುಮತಿ ನೀಡುತ್ತಿಲ್ಲ ಎಂದು ಆರೋಪಿಸಿರುವ ರಂಗಸ್ವಾಮಿ, ಅವರ ಮನವೊಲಿಸುವ ಕಾರ್ಯ ಮುಂದುವರಿಸಿದ್ದು, ನಮ್ಮ ಹಲವು ವರ್ಷಗಳ ಸತತ ಹೋರಾಟಕ್ಕೆ ಜಯ ಸಿಗುವ ಲಕ್ಷಣಗಳು ಕಾಣುತ್ತಿದ್ದು, ಫೆಬ್ರವರಿಯೊಳಗೆ ಗುರುತಿನ ಚೀಟಿ ದೊರೆಯಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಚಿಪ್ ಅಳವಡಿಕೆಗೆ ಮನವಿ: ವ್ಯಾಪಾರಿಗಳಿಗೆ ವಿತರಿಸುವ ಗುರುತಿನ ಚೀಟಿಗಳ ಮುದ್ರಣ ಕಾರ್ಯ ಪ್ರಗತಿಯಲ್ಲಿದ್ದು, ಐಡಿ ಕಾರ್ಡ್ಗಳ ದುರುಪಯೋಗವನ್ನು ತಡೆಗಟ್ಟುವ ನಿಟ್ಟಿನಲ್ಲಿ ಕಾರ್ಡ್ಗಳಿಗೆ ಚಿಪ್ ಅಳವಡಿಕೆ ಮಾಡುವಂತೆ ಸಂಬಂಧಿಸಿದ ಅಧಿಕಾರಿಗಳಿಗೆ ಮನವಿ ಮಾಡಿಕೊಳ್ಳಲಾಗಿದೆ ಎಂದು ಅವರು ತಿಳಿಸಿದ್ದಾರೆ.