ಕೋಮು ಭಾವನೆ ಕೆರಳಿಸುವ ಮತೀಯವಾದಿಗಳ ಗಡಿಪಾರು: ಪೊಲೀಸ್ ಅಧಿಕಾರಿಗಳಿಗೆ ಸಿದ್ದರಾಮಯ್ಯ ಕಟ್ಟುನಿಟ್ಟಿನ ಸೂಚನೆ

ಬೆಂಗಳೂರು, ಜ.17: ಸಮಾಜದ ಶಾಂತಿ ಕದಡುವ ಮತೀಯವಾದಿಗಳ ಮೇಲೆ ಗೂಂಡಾ ಕಾಯ್ದೆ ಬಳಸಿ ಗಡಿಪಾರು ಮಾಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪೊಲೀಸ್ ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿದ್ದಾರೆ.
ಬುಧವಾರ ನಗರದ ನೃಪತುಂಗ ರಸ್ತೆಯಲ್ಲಿರುವ ರಾಜ್ಯ ಪೊಲೀಸ್ ಮಹಾ ನಿದೇರ್ಶಕರ ಕಚೇರಿಯಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳ ವಾರ್ಷಿಕ ಸಮಾವೇಶಕ್ಕೆ ಚಾಲನೆ ನೀಡಿದ ಬಳಿಕ ಸುದ್ದಿಗೋಷ್ಠಿಯನ್ನುದ್ದೇಶಿಸಿ ಮಾತನಾಡಿದ ಅವರು, ಕೋಮು ಭಾವನೆ ಕೆರಳಿಸುವುದೇ ಮೂಲಭೂತವಾದಿಗಳ ಕೆಲಸ. ಅಂತಹವರನ್ನು ಪತ್ತೆ ಮಾಡುವ ಜೊತೆಗೆ ಗೂಂಡಾ ಕಾಯ್ದೆ ಅಡಿ ಮೊಕದ್ದಮೆ ದಾಖಲಿಸಿ ಗಡಿಪಾರು ಮಾಡಬೇಕೆಂದು ಸೂಚನೆ ನೀಡಿರುವುದಾಗಿ ಸಿದ್ದರಾಮಯ್ಯ ತಿಳಿಸಿದರು.
ಮಂಗಳೂರಿನಲ್ಲಿ ಇತ್ತೀಚೆಗೆ ದೀಪಕ್ ರಾವ್ ಹಾಗೂ ಬಶೀರ್ ಎಂಬವರ ಹತ್ಯೆ ಆಗಿದೆ. ಪೊಲೀಸರು ಮುಂಜಾಗ್ರತೆ ವಹಿಸಿದ್ದರೆ ಈ ಎರಡೂ ಹತ್ಯೆ ತಪ್ಪಿಸಬಹುದಿತ್ತು ಎಂದ ಅವರು, ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಬರಹಗಳನ್ನು ಪ್ರಕಟಿಸಿ ಕೋಮು ಭಾವನೆ ಕೆರಳಿಸುವ ಮತ್ತು ಸಮಾಜದಲ್ಲಿ ಶಾಂತಿ ಕದಡುವ ಕೆಲಸವನ್ನು ಯಾರೇ ಮಾಡಿದರೂ, ಅವರು ಯಾವುದೇ ಧರ್ಮದ ಸಂಘಟನೆಗೆ ಸೇರಿದವರಾಗಿದ್ದರೂ, ಸ್ವಯಂಪ್ರೇರಿತ ಕಠಿಣ ಕಾನೂನು ಕ್ರಮ ಜರುಗಿಸಬೇಕೆಂದು ಸಿದ್ದರಾಮಯ್ಯ ಹೇಳಿದರು.
ಕ್ರಿಯಾಶೀಲವಾಗಲಿ: ಗುಪ್ತದಳ ಹೆಚ್ಚು ಕ್ರಿಯಾಶೀಲವಾಗಬೇಕು. ಅದಕ್ಕಾಗಿಯೇ ಗುಪ್ತದಳಕ್ಕೆ ಸಿಬ್ಬಂದಿಯನ್ನು ಪ್ರತ್ಯೇಕವಾಗಿ ನೇಮಕ ಮಾಡಿಕೊಳ್ಳಲು ಕ್ರಮ ಕೈಗೊಳ್ಳಲಾಗಿದೆ. ಅಲ್ಲದೆ, ಇದೀಗ ಸಂದರ್ಶನ ಪ್ರಕ್ರಿಯೆ ನಡೆಯುತ್ತಿದ್ದು, ನೇಮಕ ಪ್ರಕ್ರಿಯೆ ಸಹ ವಿಶೇಷವಾಗಿ ನಡೆಯುತ್ತದೆ. ಗುಪ್ತದಳದಲ್ಲಿ ಕಾರ್ಯ ನಿರ್ವಹಿಸುವುದು ಶಿಕ್ಷೆ ರೂಪದಲ್ಲಿ ಮಾಡುವ ಕೆಲಸ ಅಥವಾ ವರ್ಗಾವಣೆ ಎಂಬ ಮನೋಭಾವ ಇದೆ. ಹೀಗಾಗಿ ವಿಶೇಷವಾಗಿ ಮತ್ತು ಪ್ರತ್ಯೇಕವಾಗಿ ಸಿಬ್ಬಂದಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಗಿದೆ ಎಂದು ಅವರು ವಿವರಿಸಿದರು.
ಅಪರಾಧ ನಡೆದ ಬಳಿಕ ಕಾನೂನು ರೀತ್ಯ ಕ್ರಮ ಕೈಗೊಳ್ಳುವುದು, ಆರೋಪ ಪಟ್ಟಿ ದಾಖಲು ಮಾಡುವುದು ಬೇರೆ ವಿಚಾರ. ಆದರೆ ಅಪರಾಧಗಳೇ ನಡೆಯದಂತೆ ಮುಂಜಾಗ್ರತೆ ವಹಿಸುವುದು ಮುಖ್ಯವಾಗಿದೆ. ದರೋಡೆಗಳು, ಕಳ್ಳತನ, ಸರ ಕಳ್ಳತನ, ಮತೀಯವಾದ, ಗೂಂಡಾಗಿರಿಗೆ ಕಾರಣರಾಗುವ ವ್ಯಕ್ತಿಗಳನ್ನು ಮೊದಲೇ ಪತ್ತೆ ಹಚ್ಚಿ ಮುಂಜಾಗ್ರತೆ ವಹಿಸಿದರೆ ಒಳ್ಳೆಯದು. ಇದು ಆಯಾ ಪೊಲೀಸ್ ಠಾಣೆ ಅಧಿಕಾರಿಗಳು ಹಾಗೂ ಪೊಲೀಸ್ ವರಿಷ್ಠಾಧಿಕಾರಿಗಳ ಜವಾಬ್ದಾರಿ ಎಂದು ಸೂಚಿಸಿದರು.
ಮಾದಕ ವಸ್ತುಗಳ ಮಾರಾಟ ವಿದ್ಯಾರ್ಥಿಗಳ ಮೇಲೆ ಕೆಟ್ಟ ಪರಿಣಾಮ ಬೀರುತ್ತದೆ. ಮಾದಕ ವಸ್ತುಗಳು ಎಲ್ಲಿ ಮಾರಾಟವಾಗುತ್ತದೆ. ಅದು ಎಲ್ಲಿಂದ ಸರಬರಾಜು ಆಗುತ್ತದೆ ಎಂಬುದರ ಬಗ್ಗೆ ನಿಗಾ ಇರಿಸುವಂತೆ ಪೊಲೀಸ್ ಅಧಿಕಾರಿಗಳಿಗೆ ತಿಳಿಸಿದ್ದೇನೆ ಎಂದರು.
ಪೊಲೀಸ್ ಸಿಬ್ಬಂದಿಯ ವೇತನ, ಭತ್ತೆ ಹೆಚ್ಚಳಕ್ಕೂ ಸರಕಾರ ಕ್ರಮ ಕೈಗೊಂಡಿದೆ. ಇದೇ ಮೊದಲ ಬಾರಿಗೆ ಹೆಚ್ಚಿನ ಪ್ರಮಾಣದಲ್ಲಿ ಖಾಲಿ ಹುದ್ದೆಗಳನ್ನು ಭರ್ತಿ ಮಾಡುವ ಪ್ರಕ್ರಿಯೆ ನಡೆದಿದೆ. ಖಾಲಿ ಇರುವ 42 ಸಾವಿರ ಹುದ್ದೆಗಳ ಪೈಕಿ 32 ಸಾವಿರ ಹುದ್ದೆಗಳನ್ನು ಈಗಾಗಲೇ ತುಂಬಲಾಗಿದ್ದು, 2,272 ಕೋಟಿ ರೂ. ವೆಚ್ಚದಲ್ಲಿ ಸಿಬ್ಬಂದಿಗೆ ವಸತಿ ಗೃಹಗಳನ್ನು ನಿರ್ಮಿಸಲಾಗುತ್ತಿದೆ. ಜೊತೆಗೆ 12 ಸಾವಿರ ಮಂದಿಗೆ ಏಕ ಕಾಲದಲ್ಲಿ ಭಡ್ತಿಯನ್ನೂ ನೀಡಲಾಗಿದೆ. ಇಂತಹ ಕಾರ್ಯ ಈ ಹಿಂದೆ ಎಂದೂ ನಡೆದಿರಲಿಲ್ಲ ಎಂದು ಸಿದ್ದರಾಮಯ್ಯ ನುಡಿದರು.
ಸಮಾವೇಶದಲ್ಲಿ ಗೃಹ ಸಚಿವ ರಾಮಲಿಂಗಾರೆಡ್ಡಿ, ರಾಜ್ಯ ಸರಕಾರದ ಮುಖ್ಯ ಕಾರ್ಯದರ್ಶಿ ರತ್ನಪ್ರಭಾ, ರಾಜ್ಯ ಪೊಲೀಸ್ ಮಹಾ ನಿರ್ದೇಶಕಿ ನೀಲಮಣಿ ಎನ್.ರಾಜು, ಗೃಹ ಇಲಾಖೆ ಪ್ರಧಾನ ಕಾರ್ಯದರ್ಶಿ ಸುಭಾಷ್ ಚಂದ್ರ, ಗೃಹ ಸಚಿವರ ಸಲಹೆಗಾರ ಕೆಂಪಯ್ಯ, ಮುಖ್ಯಮಂತ್ರಿ ಅವರ ಪ್ರಧಾನ ಕಾರ್ಯದರ್ಶಿ ಎಲ್.ಕೆ.ಅತೀಕ್ ಸೇರಿ ಪ್ರಮುಖರಿದ್ದರು.
ಅಪರಾಧ ಸಂಖ್ಯೆ ಇಳಿಕೆ
2017ರಲ್ಲಿ ಅಪರಾಧಗಳ ಸಂಖ್ಯೆ ಕೊಂಚ ಇಳಿಮುಖವಾಗಿದೆ. ಆದರೆ, ಗಣನೀಯವಾಗಿ ಇಳಿಕೆಯಾಗಬೇಕು. ಮಹಿಳೆಯರು, ಮಕ್ಕಳು ಅದರಲ್ಲಿಯೂ ವಿದ್ಯಾರ್ಥಿಗಳ ಸುರಕ್ಷತೆ ಕುರಿತು ಹೆಚ್ಚಿನ ಗಮನ ಹರಿಸುವಂತೆ ಸೂಚಿಸಿದ್ದೇನೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಚುನಾವಣೆ ಎಚ್ಚರಿಕೆ ಇರಲಿ
ವಿಧಾನಸಭೆಗೆ ಚುನಾವಣೆ ಸಮೀಪಿಸುತ್ತಿದ್ದು, ರಾಜ್ಯದಲ್ಲಿ 56 ಸಾವಿರಕ್ಕೂ ಹೆಚ್ಚು ಮತಗಟ್ಟೆಗಳಿವೆ. ಅಲ್ಲಿ ಸರಿಯಾದ ರೀತಿಯಲ್ಲಿ ಬಂದೋಬಸ್ತ್ ಮಾಡಬೇಕು. ಮತದಾರರು ನಿರ್ಭಯವಾಗಿ ಮತ ಚಲಾವಣೆ ಮಾಡಲು ವ್ಯವಸ್ಥೆ ಮಾಡಬೇಕು. ಅಂತಹ ವಾತಾವರಣ ನಿರ್ಮಿಸಿ, ಸೂಕ್ಷ್ಮ ಮತಗಟ್ಟೆಗಳ ಕಡೆ ವಿಶೇಷ ಗಮನ ನೀಡಿಗೌರಿ ಹತ್ಯೆ ಬಹಿರಂಗಪಡಿಸಲು ಸಾಧ್ಯವಿಲ್ಲ
ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿದೆ ಎಂದು ಪ್ರತಿಪಕ್ಷಗಳು ಹೇಳುವುದು ರಾಜಕೀಯ ಪ್ರೇರಿತ. ಕಾಮಾಲೆ ಕಣ್ಣಿನವರಿಗೆ ಕಾಣುವುದೆಲ್ಲ ಹಳದಿಯೇ. ಅಲ್ಲದೆ, ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ತನಿಖೆಯಲ್ಲಿ ಪ್ರಗತಿ ಕಂಡು ಬಂದಿದೆ. ಅದನ್ನು ಬಹಿರಂಗಪಡಿಸಲು ಸಾಧ್ಯವಿಲ್ಲ
-ಸಿದ್ದರಾಮಯ್ಯ, ಮುಖ್ಯಮಂತ್ರಿ







