ಮಂಡ್ಯ: ಕನಿಷ್ಠ ವೇತನಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಧರಣಿ
![ಮಂಡ್ಯ: ಕನಿಷ್ಠ ವೇತನಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಧರಣಿ ಮಂಡ್ಯ: ಕನಿಷ್ಠ ವೇತನಕ್ಕೆ ಆಗ್ರಹಿಸಿ ಆಶಾ ಕಾರ್ಯಕರ್ತೆಯರ ಧರಣಿ](https://www.varthabharati.in/sites/default/files/images/articles/2018/01/17/17MDY-1.jpg)
ಮಂಡ್ಯ, ಜ.17: ಕನಿಷ್ಠ 18 ಸಾವಿರ ರೂ. ವೇತನ ನಿಗದಿ ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಖಿಲ ಭಾರತ ಮುಷ್ಕರ ಕರೆ ಹಿನ್ನೆಲೆಯಲ್ಲಿ ಆಶಾ ಕಾರ್ಯಕರ್ತೆಯರು ಬುಧವಾರ ನಗರದಲ್ಲಿ ಪ್ರತಿಭಟನೆ ನಡೆಸಿದರು.
ನಗರದ ಸಿಲ್ವರ್ ಜ್ಯೂಬಿಲಿ ಪಾರ್ಕಿನಿಂದ ಬೆಂಗಳೂರು ಮೈಸೂರು ಹೆದ್ದಾರಿ ಮೂಲಕ ಮೆರವಣಿಗೆಯಲ್ಲಿ ತೆರಳಿದ ನೂರಾರು ಕಾರ್ಯಕರ್ತೆಯರು ಕೇಂದ್ರ ಸರಕಾರದ ವಿರುದ್ಧ ಘೋಷಣೆ ಕೂಗಿದರು. ಜಿಲ್ಲಾಧಿಕಾರಿ ಮೂಲಕ ಪ್ರಧಾನಮಂತ್ರಿ ಅವರಿಗೆ ಮನವಿ ಸಲ್ಲಿಸಿದರು.
ಆಶಾ, ಅಂಗನವಾಡಿ, ಬಿಸಿಯೂಟ (ಸ್ಕೀಂ ವರ್ಕರ್ಸ್) ನೌಕರರನ್ನು ಕಾರ್ಮಿಕರೆಂದು ಪರಿಗಣಿಸಿ ಮಾಸಿಕ ಕನಿಷ್ಠ 18 ಸಾವಿರ ರೂ. ವೇತನ ನಿಗದಿಪಡಿಸಬೇಕು. ಮಾಸಿಕ 3 ಸಾವಿರ ಪಿಂಚಣಿ ನೀಡಬೇಕು. ಸಾಮಾಜಿಕ ಭದ್ರತೆ ಒದಗಿಸಬೇಕು. 45ನೆ ಭಾರತ ಕಾರ್ಮಿಕ ಸಮ್ಮೇಳನದ ಶಿಫಾರಸ್ಸುಗಳನ್ನು ಜಾರಿಗೊಳಿಸಬೇಕು ಎಂದು ಅವರು ಒತ್ತಾಯಿಸಿದರು.
ಐಸಿಡಿಎಸ್, ಎನ್ಹೆಚ್ಎಂ, ಎಂಡಿಎಂ, ಎಸ್ಎಸ್ಎ, ಎನ್ಸಿಎಲ್ಪಿ, ಮತ್ತಿತರ ಕೇಂದ್ರ ಸರಕಾರದ ಪ್ರಾಯೋಜಿತ ಯೋಜನೆಗಳ ಸಮರ್ಪಕ ಅನುಷ್ಠಾನ, ಕನಿಷ್ಠ ವೇತನ, ಮೂಲ ಸೌಕರ್ಯ ಕಲ್ಪಿಸಲು ಅನುಕೂಲವಾಗುವಂತೆ ಮುಂಬರುವ ಬಜೆಟ್ನಲ್ಲಿ ಸಾಕಷ್ಟು ಅನುದಾನ ಒದಗಿಸಬೇಕು. ಯೋಜನೆಗಳ ಅನುಷ್ಠಾನವನ್ನು ಖಾಸಗಿಯವರಿಗೆ ವಹಿಸಬಾರದು ಎಂದು ಅವರು ಆಗ್ರಹಿಸಿದರು.