ಬಿಜೆಪಿ ಸರಕಾರ ಅಧಿಕಾರಕ್ಕೆ ಬಂದರೆ ಟಿಪ್ಪು ಜಯಂತಿ ರದ್ದು : ಸುನಿಲ್ ಸುಬ್ರಮಣಿ

ಮಡಿಕೇರಿ,ಜ.22: ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬರಲಿದ್ದು, ಮತಗಳಿಕೆಗಾಗಿ ಕಾಂಗ್ರೆಸ್ ಸರ್ಕಾರ ಆಚರಿಸುತ್ತಿರುವ ಟಿಪ್ಪು ಜಯಂತಿಯನ್ನು ನಮ್ಮ ಸರ್ಕಾರ ರದ್ದುಗೊಳಿಸಲಿದೆಯೆಂದು ತಿಳಿಸಿರುವ ಎಂಎಲ್ಸಿ ಸುನಿಲ್ ಸುಬ್ರಮಣಿ, ಟಿಪ್ಪುವಿನ ಚರಿತ್ರೆಯ ಅರಿವಿಲ್ಲದಿದ್ದಲ್ಲಿ ಮುಖ್ಯಮಂತ್ರಿಗಳು ಅದನ್ನು ತಮ್ಮ ಪಕ್ಷದವರಿಂದಲೇ ಕೇಳಿ ತಿಳಿದುಕೊಳ್ಳಲಿ ಎಂದು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಇತ್ತೀಚೆಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು, ಮಡಿಕೇರಿಗೆ ಆಗಮಿಸಿ ಸಾಧನಾ ಸಮಾವೇಶದಲ್ಲಿ ಪಾಲ್ಗೊಂಡ ಸಂದರ್ಭ ಟಿಪ್ಪುವಿನ ಬಗ್ಗೆ ಪ್ರಸ್ತಾಪ ಮಾಡಿರುವುದು ಖಂಡನೀಯ. ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಅತ್ಯಧಿಕ ಸ್ಥಾನಗಳಿಂದ ಗೆಲುವು ಸಾಧಿಸುವ ಮೂಲಕ ಬಿ.ಎಸ್.ಯಡಿಯೂರಪ್ಪ ಅವರು ಮುಖ್ಯಮಂತ್ರಿಯಾಗಲಿದ್ದಾರೆ ಎಂದು ವಿಶ್ವಾಸ ವ್ಯಕ್ತಪಡಿಸಿದ ಸುನಿಲ್ ಸುಬ್ರಮಣಿ, ಬಿಜೆಪಿ ಸರ್ಕಾರ ಬಂದ ತಕ್ಷಣ ಟಿಪ್ಪು ಜಯಂತಿಯನ್ನು ರದ್ದುಗೊಳಿಸಲಾಗುವುದೆಂದು ತಿಳಿಸಿದರು.
ಓಟ್ ಬ್ಯಾಂಕ್ ರಾಜಕಾರಣಕ್ಕಾಗಿ ರಾಜ್ಯ ಕಾಂಗ್ರೆಸ್ ಸರ್ಕಾರ ಕೊಡಗಿನ ಜನತೆಯ ಭಾವನೆಗೆ ವಿರುದ್ಧವಾಗಿ ಟಿಪ್ಪು ಜಯಂತಿಯನ್ನು ಆಚರಿಸಿದೆ. ಅಲ್ಲದೆ, ಈ ಕುರಿತು ಮುಖ್ಯಮಂತ್ರಿಗಳು ಸಾಧನಾ ಸಮಾವೇಶದಲ್ಲಿ ಪ್ರಸ್ತಾಪಿಸಿದ್ದಾರೆ. ಈ ಸಂದರ್ಭ ತಾನು ಹಾಜರಿದ್ದಿದ್ದರೆ, ಟಿಪ್ಪುವಿನ ಇತಿಹಾಸವನ್ನು ತಿಳಿಹೇಳಿ, ಜಯಂತಿ ಆಚರಿಸದಂತೆ ಮನವಿ ಮಾಡಿಕೊಳ್ಳುತ್ತಿದ್ದೆ ಎಂದರು.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಹಿಂದ ಮತ್ತು ಲಿಂಗಾಯಿತ ಹೆಸರಿನಲ್ಲಿ ಸಮಾಜವನ್ನು ಒಡೆಯುವ ಕೆಲಸ ಮಾಡುತ್ತಿದ್ದಾರೆ. ಹುಣಸೂರಿನಲ್ಲಿ ಹನುಮ ಜಯಂತಿಗೆ ಅಡ್ಡಿಪಡಿಸಿದ ಸರ್ಕಾರ ವಿಪರೀತ ಬುದ್ಧಿಯನ್ನು ಪ್ರದರ್ಶಿಸುತ್ತಿದ್ದು, ವಿನಾಶಕಾಲ ಸಮೀಪಿಸುತ್ತಿದೆ ಎಂದು ಸುನಿಲ್ ಸುಬ್ರಮಣಿ ಹೇಳಿದರು.
ಚುನಾವಣೆ ಸಮೀಪಿಸುತ್ತಿರುವಾಗ ಮುಖ್ಯಮಂತ್ರಿಗಳು ತಾನು ಕೂಡ ಒಬ್ಬ ಹಿಂದು ಎಂದು ಹೇಳಿಕೊಳ್ಳುತ್ತಿದ್ದಾರೆ. ಆದರೆ, ಇತ್ತೀಚೆಗೆ ಅವರು ಧರ್ಮಸ್ಥಳಕ್ಕೆ ಭೇಟಿ ನೀಡಿದ ಸಂದರ್ಭ ಮಾಂಸಾಹಾರ ಮಾಡಿದ್ದೇನೆ ಎಂದು ಹೇಳುವ ಮೂಲಕ ಹಿಂದುಗಳ ಭಾವನೆಗೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ ಎಂದು ಸುನಿಲ್ ಸುಬ್ರಮಣಿ ಟೀಕಿಸಿದರು.
ಜೀವನದಿ ಕಾವೇರಿಯ ಉಗಮ ಸ್ಥಾನ ತಲಕಾವೇರಿಗೆ ನಾಡಿನ ದೊರೆಯಾದ ಮುಖ್ಯಮಂತ್ರಿ ಆಗಮಿಸಿ ಪೂಜೆ ಸಲ್ಲಿಸುವುದು ನಾಡಿನ ಹಿತದೃಷ್ಟಿಯಿಂದ ಸೂಕ್ತ. ಈ ಬಗ್ಗೆ ಬೆಳಗಾವಿ ಅಧಿವೇಶನದಲ್ಲಿ ತಲಕಾವೇರಿಗೆ ಆಗಮಿಸುವಂತೆ ಮುಖ್ಯಮಂತ್ರಿಗಳಿಗೆ ಮನವಿ ಮಾಡಿಕೊಂಡಿದ್ದೆ. ಆದರೆ ಬರುವುದಾಗಿ ಭರವಸೆ ನೀಡಿದವರು ಜಿಲ್ಲೆಗೆ ಆಗಮಿಸಿದ ಸಂದರ್ಭ ಅದನ್ನು ಮರೆತಿದ್ದಾರೆ ಎಂದು ಆರೋಪಿಸಿದರು.
ರಾಜ್ಯದಲ್ಲಿ ಹಿರಿಯ ಅಧಿಕಾರಿಗಳು ಭಯದ ವಾತಾವರಣದಲ್ಲಿ ಕಾರ್ಯನಿರ್ವಹಿಸಬೇಕಾಗಿದೆ. ಕಾಂಗ್ರೆಸ್ ಸರ್ಕಾರ ತನ್ನ ಬಜೆಟ್ನ ರೀತಿಯಲ್ಲಿ ಯಾವುದೇ ಕೆಲಸ ಕಾರ್ಯಗಳನ್ನು ನಿರ್ವಹಿಸಿಲ್ಲ. ತಲಕಾವೇರಿ ಭಾಗಮಂಡಲ ಕ್ಷೇತ್ರದ ಅಭಿವೃದ್ಧಿ ಬಗ್ಗೆ ಪ್ರಶ್ನಿಸಿದಾಗ ಮುಜರಾಯಿ ದೇವಾಲಯಗಳಿಗೆ ಅಧ್ಯಕ್ಷರ ನೇಮಕವಾಗಿಲ್ಲವೆಂದು ಅಸಹಾಯಕತೆ ವ್ಯಕ್ತಪಡಿಸಿದರು. ಮುಂದೆ ರಾಜ್ಯದಲ್ಲಿ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದರೆ ಈ ಎರಡೂ ಕ್ಷೇತ್ರಗಳ ಅಭಿವೃದ್ಧಿಗೆ ಆದ್ಯತೆ ನೀಡುವುದಾಗಿ ಸುನಿಲ್ ಸುಬ್ರಮಣಿ ಭರವಸೆ ನೀಡಿದರು.
ಜನವರಿ 24 ರಂದು ನಡೆಯುವ ಪರಿವರ್ತನಾ ರ್ಯಾಲಿಯಲ್ಲಿ ಸುಮಾರು 12 ಸಾವಿರ ಮಂದಿ ಪಾಲ್ಗೊಳ್ಳಲಿದ್ದಾರೆ ಎಂದ ಸುನಿಲ್ ಸುಬ್ರಮಣಿ , ಕಾಂಗ್ರೆಸ್ನ ಸಾಧನಾ ಸಮಾವೇಶಕ್ಕೆ ನೆರೆಯ ಸುಳ್ಯ, ಪಿರಿಯಾಪಟ್ಟಣ, ಕೆ.ಆರ್.ನಗರ, ಹಾಸನ ವಿಭಾಗಗಳಿಂದ ಜನರನ್ನು ಕರೆತರಲಾಗಿತ್ತು. ಬಿಜೆಪಿ ಸಮಾವೇಶಕ್ಕೆ ಜಿಲ್ಲೆಯ 104 ಗ್ರಾ.ಪಂ, ನಗರಸಭೆ, ಪಟ್ಟಣ ಪಂಚಾಯತ್ ವ್ಯಾಪ್ತಿಯಿಂದ ಜನರು ಆಗಮಿಸಲಿದ್ದಾರೆ ಎಂದು ಅವರು ಹೇಳಿದರು.
ಸುದ್ದಿಗೋಷ್ಠಿಯಲ್ಲಿ ಜಿಲ್ಲಾ ಬಿಜೆಪಿ ಪ್ರಧಾನ ಕಾರ್ಯದಾರ್ಶಿ ಕೋಡಿರ ಪ್ರಸನ್ನ, ಉಪಾಧ್ಯಕ್ಷ ಅರುಣ್ ಕುಮಾರ್ ಹಾಗೂ ಮಡಿಕೇರಿ ನಗರಾಧ್ಯಕ್ಷ ಮಹೇಶ್ ಜೈನಿ ಉಪಸ್ಥಿತರಿದ್ದರು.







