ಆರ್.ಅಶೋಕ್ ವಿರುದ್ಧ ದಾಖಲಾಗಿದ್ದ ಎಫ್ಐಆರ್ಗೆ ಹೈಕೋರ್ಟ್ ತಡೆಯಾಜ್ಞೆ
ಅನರ್ಹ ಫಲಾನುಭವಿಗಳಿಗೆ ಭೂ-ಮಂಜೂರಾತಿ ಆರೋಪ

ಬೆಂಗಳೂರು, ಜ.23: ಬಗರ್ ಹುಕುಂ ಜಮೀನು ಅಕ್ರಮ ಮಂಜೂರಾತಿ ಆರೋಪ ಸಂಬಂಧ ಬಿಜೆಪಿ ಮುಖಂಡ ಆರ್.ಅಶೋಕ್ ವಿರುದ್ಧ ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಖಲಿಸಿದ್ದ ಎಫ್ಐಆರ್ಗೆ ಹೈಕೋರ್ಟ್ ಗುರುವಾರ ಮಧ್ಯಂತರ ತಡೆಯಾಜ್ಞೆ ನೀಡಿದೆ.
ಭ್ರಷ್ಟಾಚಾರ ನಿಗ್ರಹ ದಳ(ಎಸಿಬಿ) ದಾಖಲಿಸಿರುವ ಎಫ್ಐಆರ್ ರದ್ದುಕೋರಿ ಬಿಜೆಪಿ ಮುಖಂಡ ಆರ್.ಅಶೋಕ್ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಆರ್.ಬಿ.ಬೂದಿಹಾಳ್ ಅವರಿದ್ದ ನ್ಯಾಯಪೀಠ ಈ ಆದೇಶ ನೀಡಿತು.
ಪ್ರಕರಣವೇನು: ಆರ್.ಅಶೋಕ್ 1998 ರಿಂದ 2006ರ ಅವಧಿಯವರೆಗೆ ಬೆಂಗಳೂರು ದಕ್ಷಿಣ ತಾಲೂಕು ಬಗರ್ ಹುಕುಂ ಭೂ-ಸಕ್ರಮೀಕರಣ ಸಮಿತಿಯ ಅಧ್ಯಕ್ಷರಾಗಿದ್ದಾಗ ಕಾನೂನು ಬಾಹಿರವಾಗಿ ಅನರ್ಹ ಫಲಾನುಭವಿಗಳಿಗೆ ಭೂ-ಮಂಜೂರಾತಿ ಮಾಡಿದ್ದಾರೆ ಎಂದು ಆರೋಪಿಸಿ ಎ.ಆನಂದ ಎಂಬವರು ಭ್ರಷ್ಟಾಚಾರ ನಿಗ್ರಹ ದಳಕ್ಕೆ ದೂರು ನೀಡಿದ್ದರು. ಈ ದೂರು ಆಧರಿಸಿ ಎಸಿಬಿ ಪೊಲೀಸರು ಅಶೋಕ್ ವಿರುದ್ಧ ಎಫ್ಐಆರ್ ದಾಖಲಿಸಿದ್ದರು.
ಈ ಎಫ್ಐಆರ್ ರದ್ದು ಕೋರಿ ಹೈಕೋರ್ಟ್ ಮೆಟ್ಟಿಲೇರಿರುವ ಅಶೋಕ್, ತಾನು ಯಾವುದೇ ಅಕ್ರಮ ನಡೆಸಿಲ್ಲ. ಕೇವಲ ರಾಜಕೀಯ ದುರುದ್ದೇಶದಿಂದ ನನ್ನ ವಿರುದ್ಧ ಪ್ರಕರಣ ದಾಖಲಿಸಲಾಗಿದೆ. ಹೀಗಾಗಿ, ನನ್ನ ವಿರುದ್ಧ ಎಸಿಬಿ ದಾಖಲಿಸಿರುವ ಎಫ್ಐಆರ್ ರದ್ದುಪಡಿಸುವಂತೆ ಕೋರಿದ್ದಾರೆ. ಜತೆಗೆ ಅರ್ಜಿ ಇತ್ಯರ್ಥವಾಗುವವರೆಗೆ ಎಫ್ಐಆರ್ ಆಧರಿಸಿ ನನ್ನ ವಿರುದ್ಧ ಯಾವುದೇ ಕ್ರಮಕ್ಕೆ ಮುಂದಾಗದಂತೆ ಎಸಿಬಿಗೆ ನಿರ್ದೇಶಿಸುವಂತೆ ಮಧ್ಯಂತರ ಮನವಿ ಮಾಡಿದ್ದರು.





