ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಿಸಲು ಡಿಸಿ ಸೂಚನೆ
![ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಿಸಲು ಡಿಸಿ ಸೂಚನೆ ಸಂಸದ ಪ್ರತಾಪ್ ಸಿಂಹ ವಿರುದ್ಧ ಪ್ರಕರಣ ದಾಖಲಿಸಲು ಡಿಸಿ ಸೂಚನೆ](https://www.varthabharati.in/sites/default/files/images/articles/2018/01/29/news-18-pratap-simha.jpg)
ಮೈಸೂರು,ಜ.29: ಹುಣಸೂರು ತಾಲೂಕಿನಲ್ಲಿ ನಡೆದ ಹನುಮ ಜಯಂತಿ ಮೆರವಣಿಗೆ ವಿಚಾರಕ್ಕೆ ಸಂಬಂಧಿಸಿದಂತೆ ಸಂಸದ ಪ್ರತಾಪ ಸಿಂಹ ವಿರುದ್ಧ ಪ್ರಕರಣ ದಾಖಲಿಸುವಂತೆ ಜಿಲ್ಲಾಧಿಕಾರಿ ಡಿ.ರಂದೀಪ್ ಸೂಚನೆ ನೀಡಿದ್ದಾರೆ.
ಹನುಮ ಜಯಂತಿ ಮೆರವಣಿಗೆ ವೇಳೆ ಪ್ರತಾಪಸಿಂಹ ಅವರು ನಿಬಂಧನೆ ಉಲ್ಲಂಘನೆ ಮಾಡಿರುವ ಆರೋಪದ ಮೇಲೆ ಮೋಟಾರ್ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ಸೂಚಿಸಿದ್ದಾರೆ.
ಮೆರವಣಿಗೆ ವೇಳೆ ಸಂಸದ ಪ್ರತಾಪ್ ಸಿಂಹ ವಿಶೇಷ ವಾಹನ ಬಳಸಿದ್ದರು. ಮೆರವಣಿಗೆಗೆ ಅನುಮತಿ ನೀಡುವ ವೇಳೆ ವಿಶೇಷ ವಾಹನ ಬಳಸುವಂತಿಲ್ಲ ಎಂದು ಸೂಚಿಸಲಾಗಿತ್ತು. ಈ ಹಿನ್ನೆಲೆಯಲ್ಲಿ ನಿಬಂಧನೆ ಉಲ್ಲಂಘನೆ ಸಂಬಂಧಿಸಿದಂತೆ ಪ್ರಕರಣ ದಾಖಲಿಸಲು ಸೂಚನೆ ನೀಡಿದ್ದಾರೆ.
ಹನುಮ ಜಯಂತಿಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿಲಾಗಿತ್ತು. ಯಾವುದೇ ಧರ್ಮದ ಜಯಂತಿಗೆ ಈ ರೀತಿಯ ವ್ಯವಸ್ಥೆ ಇರುವುದಿಲ್ಲ. ಸ್ವಲ್ಪ ಸಮಸ್ಯೆಯಾಗಿದ್ದಕ್ಕೆ ಜಿಲ್ಲಾಡಳಿತ ಮಧ್ಯಪ್ರವೇಶ ಮಾಡಿತ್ತು. ಇತರೆ ಜಯಂತಿಗಳು ಶಾಂತಿಯುತವಾಗಿ ನಡೆಯಲಿವೆ ಎಂದು ಜಿಲ್ಲಾಧಿಕಾರಿ ಡಿ.ರಂದೀಪ್ ಮಾಧ್ಯಮಗಳಿಗೆ ಹೇಳಿಕೆ ನೀಡಿದ್ದಾರೆ.