ಉದ್ಯೋಗಾವಕಾಶ ಸೃಷ್ಠಿ ವ್ಯವಸ್ಥೆಯ ಜವಾಬ್ದಾರಿ: ಸಚಿವ ಪ್ರಮೋದ್

ಉಡುಪಿ, ಜ.30: ಶಿಕ್ಷಣ ಪಡೆದ ಯುವಕರಿಗೆ ಉದ್ಯೋಗವಕಾಶ ಸೃಷ್ಟಿಸುವುದು ವ್ಯವಸ್ಥೆಯ ಜವಾಬ್ದಾರಿಯಾಗಿದೆ. ಕೇವಲ ಪ್ರಮಾಣ ಪತ್ರ ಹೊಂದಿದ್ದರೆ ಉದ್ಯೋಗ ಸಿಗುವುದಿಲ್ಲ. ಅದರ ಜೊತೆ ಕೌಶಲ್ಯವೂ ಅಗತ್ಯ ಎಂದು ರಾಜ್ಯ ಮೀನುಗಾರಿಕೆ, ಯುವಸಬಲೀಕರಣ ಮತ್ತು ಕ್ರೀಡೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಪ್ರಮೋದ್ ಮದ್ವರಾಜ್ ಹೇಳಿದ್ದಾರೆ.
ಅಜ್ಜರಕಾಡು ಡಾ.ಜಿ.ಶಂಕರ್ ಸರಕಾರಿ ಮಹಿಳಾ ಪ್ರಥಮ ದರ್ಜೆ ಕಾಲೇಜು ಮತ್ತು ಸ್ನಾತಕೋತ್ತರ ಅಧ್ಯಯನ ಕೇಂದ್ರ, ಉಡುಪಿ ಕೈಗಾರಿಕಾ ತರಬೇತಿ ಮತ್ತು ಉದ್ಯೋಗ ಇಲಾಖೆ, ಕಾಲೇಜು ಶಿಕ್ಷಣ ಇಲಾಖೆ, ಜಿಲ್ಲಾ ಉದ್ಯೋಗ ವಿನಿಮಯ ಕೇಂದ್ರದ ಸಂಯುಕ್ತ ಆಶ್ರಯದಲ್ಲಿ ಕಾಲೇಜಿನಲ್ಲಿ ಮಂಗಳವಾರ ಆಯೋಜಿಸಲಾದ ಉದ್ಯೋಗ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡುತಿದ್ದರು.
ಶೈಕ್ಷಣಿಕವಾಗಿ ಉಡುಪಿ ಜಿಲ್ಲೆ ರಾಜ್ಯದಲ್ಲೇ ಮುಂದಿದೆ. ಫಲಿತಾಂಶಗಳಲ್ಲಿ ಪ್ರಥಮ ಸ್ಥಾನವನ್ನೇ ಪಡೆಯುತ್ತಿದೆ. ಜಿಲ್ಲೆಯಲ್ಲಿರುವ ಶಿಕ್ಷಿತ ಯುವಕರ ಸಂಖ್ಯೆ ಹೆಚ್ಚಾಗುತ್ತಿದ್ದ ಹಾಗೆಯೇ ಅವರಿಗೆ ಅವಕಾಶಗಳು ಕೂಡ ಹೆಚ್ಚಾಗಬೇಕಾಗಿದೆ. ಹೆಚ್ಚಿನ ವಿದ್ಯಾರ್ಥಿಗಳ ಹೆತ್ತವರು ಬ್ಯಾಂಕ್ಗಳಲ್ಲಿ ಸಾಲ ಮಾಡಿ ಶಿಕ್ಷಣ ನೀಡಿ ರುತ್ತಾರೆ. ಆದರೆ ಉದ್ಯೋಗ ಅಲಭ್ಯತೆ ಯುವಕರಲ್ಲಿ ಮಾನಸಿಕ ಒತ್ತಡಕ್ಕೆ ಕಾರಣವಾಗುತ್ತಿದೆ. ಈ ನಿಟ್ಟಿನಲ್ಲಿ ಸ್ವದ್ಯೋಗಕ್ಕೆ ಪೂರಕ ಕ್ರಮಗಳು, ಅವಕಾಶಗಳ ಸದ್ಬಳಕೆ, ಸ್ಪರ್ಧಾ ಪರೀಕ್ಷೆಗಳಲ್ಲಿ ಪಾಸಾಗುವ ಕುರಿತು ಕಾರ್ಯಾಗಾರ, ಕೌಶಲ್ಯ ತರಬೇತಿಗಳು ನೀಡಬೇಕಾಗಿದೆ ಎಂದರು.
ಕಾಲೇಜಿನ ಪ್ರಾಂಶುಪಾಲ ಡಾ.ಭಾಸ್ಕರ್ ಶೆಟ್ಟಿ ಎಸ್., ಜಿಲ್ಲಾ ಚೇಂಬರ್ ಆಫ್ ಕಾಮರ್ಸ್ನ ಅಧ್ಯಕ್ಷ ಕೃಷ್ಣ ರಾವ್ ಕೊಡಂಚ, ಜಿಲ್ಲಾ ಕೌಶಲ್ಯಾಭಿವೃದ್ಧಿ ಅಧಿಕಾರಿ ಜಗದೀಶ್, ಗೌರಿ ಎಸ್.ಭಟ್ ಉಪಸ್ಥಿತರಿದ್ದರು.
ಉದ್ಯೋಗಾಧಿಕಾರಿ ಖಲಂದರ್ ಖಾನ್ ಪ್ರಾಸ್ತಾವಿಕವಾಗಿ ಮಾತನಾಡಿ ದರು. ಪ್ಲೇಸ್ಮೆಂಟ್ ಅಧಿಕಾರಿ ಶ್ರೀಧರ್ ಭಟ್ ಸ್ವಾಗತಿಸಿದರು. ವಿದ್ಯಾರ್ಥಿ ಕಲ್ಯಾಣಾಧಿಕಾರಿ ರಾಮರಾಯ ಆಚಾರ್ಯ ವಂದಿಸಿದರು. ಯುವಜನ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಹಾಯಕ ನಿರ್ದೇಶಕ ರೋಶನ್ ಕುಮಾರ್ ಶೆಟ್ಟಿ ಕಾರ್ಯಕ್ರಮ ನಿರೂಪಿಸಿದರು.







