ಸಿ.ಟಿ.ರವಿಗೆ ಜೀವ ಬೆದರಿಕೆ: ಆರೋಪಿಗಳ ಪತ್ತೆಗೆ ಜೆಡಿಎಸ್ ಒತ್ತಾಯ
ಚಿಕ್ಕಮಗಳೂರು, ಜ.31: ಶಾಸಕ ಸಿ.ಟಿ.ರವಿಯವರಿಗೆ ಪ್ರಾಣ ಬೆದರಿಕೆ ಒಡ್ಡಿರುವವರನ್ನು ತಕ್ಷಣ ಪತ್ತೆ ಹಚ್ಚಿ ಬಂಧಿಸಬೇಕು. ಅವರ ವಿರುದ್ದ ಕಠಿಣ ಕ್ರಮ ಕೈಗೊಳ್ಳಬೇಕು ಎಂದು ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಹೆಚ್.ಹೆಚ್.ದೇವರಾಜ್ ರಾಜ್ಯಸರ್ಕಾರವನ್ನು ಒತ್ತಾಯಿಸಿದ್ದಾರೆ.
ಪ್ರಜಾಪ್ರಭುತ್ವ ವ್ಯವಸ್ಥೆಯಲ್ಲಿ ಎಲ್ಲರಿಗೂ ಅವರವರ ವಿಚಾರಧಾರೆಗಳನ್ನು ಪ್ರತಿಪಾದಿಸುವ ಹಕ್ಕಿದೆ. ಅದನ್ನು ವಿರೋಧಿಸುವವರು ಕಾನೂನು ಮುಖಾಂತರ ಪ್ರಶ್ನಿಸಬೇಕು. ಅದನ್ನು ಬಿಟ್ಟು ಪ್ರಾಣ ಬೆದರಿಕೆ ಒಡ್ಡುವುದು, ಕಾನೂನನ್ನು ಕೈಗೆತ್ತಿಕೊಳ್ಳುವುದು ಅಕ್ಷಮ್ಯ ಅಪರಾಧವಾಗುತ್ತದೆ ಎಂದು ಹೇಳಿಕೆಯಲ್ಲಿ ತಿಳಿಸಿದ್ದಾರೆ.
ಪ್ರಾಣ ಬೆದರಿಕೆ ಒಡ್ಡಿರುವವರು ಯಾರೇ ಆದರೂ ಅದು ಹೇಯ ಕೃತ್ಯ ಮತ್ತು ಅಕ್ಷಮ್ಯ ಅಪರಾಧವಾಗುತ್ತದೆ. ಇಂತಹ ಬೆಳವಣಿಗೆಗಳು ಜಿಲ್ಲೆಯಲ್ಲಿ ಅಪರಾಧ ಪ್ರಕರಣಗಳು ಹೆಚ್ಚಲು ಕಾರಣವಾಗುತ್ತವೆ. ಜಿಲ್ಲೆಯ ಶಾಂತಿ, ನೆಮ್ಮದಿಯನ್ನು ಕದಡುತ್ತವೆ ಮತ್ತು ಅಭದ್ರತೆ ಉಂಟು ಮಾಡುತ್ತವೆ ಎಂದಿರುವ ಅವರು ಈ ಹಿನ್ನೆಲೆಯಲ್ಲಿ ಪ್ರಕರಣವನ್ನು ಖಂಡಿಸುವುದಾಗಿ ಹೇಳಿದ್ದಾರೆ.
ರಾಜ್ಯಸರ್ಕಾರ ಪ್ರಕರಣದ ಕುರಿತು ತಕ್ಷಣ ಸಮಗ್ರ ತನಿಖೆ ನಡೆಸಬೇಕು. ಅಪರಾಧಿ ಯಾರೇ ಆಗಿದ್ದರೂ ಅವರನ್ನು ಬಂಧಿಸಿ ರಾಜ್ಯದ ಜನತೆಯ ಎದುರು ನಿಲ್ಲಿಸಬೇಕು. ಮುಂದೆ ಇಂತಹ ಪ್ರಕರಣಗಳು ಮರುಕಳಿಸದಂತೆ ಕಟ್ಟುನಿಟ್ಟಿನ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದ್ದಾರೆ.