ಗ್ರಾಮದ ಸರ್ವತೋಮುಖ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ತರ: ಶಾಸಕ ಮೊಯ್ದಿನ್ ಬಾವ
ಗರಡಿ ಜಂಕ್ಷನ್ ನಲ್ಲಿ ನೂತನ ಕಟ್ಟಡ ಉದ್ಘಾಟನಾ ಸಮಾರಂಭ
ಅಡ್ಡೂರು, ಜ.4: ಗ್ರಾಮದ ಸರ್ವತೋಮುಖ ಅಭಿವೃದ್ಧಿಯಲ್ಲಿ ಯುವಕರ ಪಾತ್ರ ಮಹತ್ತರವಾಗಿದೆ ಎಂದು ಶಾಸಕ ಬಿ.ಎ.ಮೊಯ್ದಿನ್ ಬಾವ ತಿಳಿಸಿದ್ದಾರೆ.
ರವಿವಾರ ಇಲ್ಲಿನ ಗರಡಿ ಜಂಕ್ಷನ್ ನಲ್ಲಿ ಫೈವ್ ಸ್ಟಾರ್ ಯಂಗ್ ಬಾಯ್ಸ್ ಇದರ ನೂತನ ಕಟ್ಟಡ ಉದ್ಘಾಟನಾ ಸಮಾರಂಭದಲ್ಲಿ ಭಾಗವಹಿಸಿ ಅವರು ಮಾತನಾಡಿದರು.
ಮಹಾತ್ಮ ಗಾಂಧಿಯವರ ಕನಸಿನ ಗ್ರಾಮ ರಾಜ್ಯದ ಚಿಂತನೆ ಪರಿಪೂರ್ಣಗೊಳ್ಳುವಿಕೆಯಲ್ಲಿ ಯುವಕರ ಪಾತ್ರ ಮಹತ್ತವಾಗಿದ್ದು, ಆದ್ದರಿಂದ ಯುವಕರು ಗ್ರಾಮದ ಸರ್ವತೋಮುಖ ಅಭಿವೃದ್ಧಿಗಾಗಿ ಇನ್ನಷ್ಟು ಮುಂದಾಗಬೇಕು ಎಂದು ಸಲಹೆ ನೀಡಿದರು.
ಫೈವ್ ಸ್ಟಾರ್ ಕ್ಲಬ್ ಕೈಗೊಳ್ಳುವ ಎಲ್ಲ ಕಾರ್ಯಕ್ರಮಗಳು ಸಮಾಜೋಪಾಯವಾಗಿದ್ದು, ಗ್ರಾಮವನ್ನು ಅಭಿವೃದ್ಧಿ ಪಥಕ್ಕೆ ಕೊಂಡೊಯ್ಯಲು ಈ ಯುವಕರು ಶ್ರಮದಾನದ ಮೂಲಕ ಹಗಲಿರುಳೆನ್ನದೆ ದುಡಿಯುತ್ತಿರುವುದು ಮುಂದಿನ ಯುವ ಪೀಳಿಗೆಗೆ ಮಾದರಿ ಎಂದು ಶ್ಲಾಘಿಸಿದರು.
ಕಟ್ಟಡ ಉದ್ಘಾಟಿಸಿ ಮಾತನಾಡಿದ ಜಿ.ಪಂ. ಸದಸ್ಯ ಯು.ಪಿ. ಇಬ್ರಾಹೀಂ, ಗ್ರಾಮವನ್ನು ಅಭಿವೃದ್ಧಿಯತ್ತ ಸಾಗಿಸಲು ಹಲವಾರು ಯೋಜನೆಗಳನ್ನು ಕಾರ್ಯ ರೂಪಕ್ಕೆ ತರಲಾಗಿದ್ದು, ಮುಂದಿನ ದಿನಗಳಲ್ಲಿ ಚರಂಡಿ ಹಾಗೂ ಮಣ್ಣು ಮುಕ್ತ ಗ್ರಾಮವನ್ನಾಗಿಸಲು ಪಣತೊಡಲಾಗಿದೆ. ಇದಕ್ಕೆ ಗ್ರಾಮಸ್ಥರ ಸಹಕಾರ ಅತೀ ಮುಖ್ಯ ಎಂದರು. ಈ ವೇಳೆ ಸಮಾಜ ಸೇವಕ, ಕ್ರೀಡಾಪಟುಗಳಿಗೆ ಸನ್ಮಾನ, ವಿದ್ಯಾರ್ಥಿಗಳಿಗೆ, ವಿಶಿಷ್ಟ ಮಕ್ಕಳಿಗೆ ಪ್ರೋತ್ಸಾಹ ಧನ, ಅರ್ಹ ಫಲಾನುಭವಿ ಮಹಿಳೆಯರಿಗೆ ಹೊಲಿಗೆ ಯಂತ್ರ ಹಾಗೂ ತ್ಯಾಜ್ಯ ಸಂಗ್ರಹ ಬುಟ್ಟಿ ವಿತರಿಸಲಾಯಿತು.
ಕಾರ್ಯಕ್ರಮದಲ್ಲಿ ಫೈವ್ ಸ್ಟಾರ್ ಯಂಗ್ ಬಾಯ್ಸ್ ಅಧ್ಯಕ್ಷ ಹಬೀಬ್ ಕಟ್ಟಪುಣಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ನಿರ್ದೇಶಕ ಪ್ರದೀಪ್ ಡಿಸೋಜಾ, ಗುರುಪುರ ಗ್ರಾ.ಪಂ. ಅಧ್ಯಕ್ಷೆ ರುಕಿಯಾ, ಯೂತ್ ಕಾಂಗ್ರೆಸ್ ರಾಜ್ಯ ಕಾರ್ಯದರ್ಶಿ ಸುಹೈಲ್ ಕಂದಕ್, ತಾ.ಪಂ. ಸಚಿನ್ ಅಡಪ ಮತ್ತಿರರು ಭಾಗವಹಿಸಿದ್ದರು.