ಫೆ.10: ಉಡುಪಿಯಲ್ಲಿ ರಾಜ್ಯಮಟ್ಟದ ವಿಚಾರ ಸಂಕಿರಣ
ಉಡುಪಿ, ಫೆ.6: ದಕ್ಷಿಣ ಭಾರತೀಯ ಭಾಷೆಗಳ ಜಾನಪದ ಅಧ್ಯಯನ ಸಂಸ್ಥೆ (ಪಾಸಿಲ್ಸ್) ತಿರುವನಂತಪುರ, ಪ್ರಾದೇಶಿಕ ಜಾನಪದ ರಂಗಕಲೆಗಳ ಅಧ್ಯಯನ ಕೇಂದ್ರ (ಆರ್ಆರ್ಸಿ) ಉಡುಪಿ ಹಾಗೂ ಮಣಿಪಾಲ ಅಕಾಡೆಮಿ ಆಫ್ ಹೈಯರ್ ಎಜ್ಯುಕೇಶನ್ (ಮಾಹೆ) ಇವುಗಳ ಸಂಯುಕ್ತ ಆಶ್ರಯದಲ್ಲಿ ಫೆ.10ರಂದು ‘ಜಾನಪದದ ಬಹುಮುಖಿ ಆಯಾಮಗಳು’ ಹಾಗೂ ‘ಜಾನಪದ ಅಧ್ಯಯನದ ಇತ್ತೀಚಿಗಿನ ಬೆಳವಣಿಗೆಗಳು’ ಎಂಬ ವಿಷಯದ ಕುರಿತು ಒಂದು ದಿನದ ರಾಜ್ಯ ಮಟ್ಟದ ವಿಚಾರಸಂಕಿರಣವನ್ನು ಉಡುಪಿಯ ಎಂಜಿಎಂ ಕಾಲೇಜಿನ ನೂತನ ರವೀಂದ್ರ ಮಂಟಪದಲ್ಲಿ ಆಯೋಜಿಸಲಾಗಿದೆ.
ವಿಚಾರ ಸಂಕಿರಣವನ್ನು ಹಿರಿಯ ಜಾನಪದ ವಿದ್ವಾಂಸ ಹಾಗೂ ವಿಶ್ರಾಂತ ಕುಲಪತಿ ಪ್ರೊ. ಬಿ.ಎ.ವಿವೇಕ ರೈ ಬೆಳಗ್ಗೆ 9:30ಕ್ಕೆ ಉದ್ಘಾಟಿಸಲಿದ್ದಾರೆ. ಅಧ್ಯಕ್ಷತೆ ಯನ್ನು ಮಣಿಪಾಲ ಅಕಾಡೆಮಿ ಅಪ್ ಜನರಲ್ ಎಜ್ಯುಕೇಶನ್ನ ಆಡಳಿತಾಧಿಕಾರಿ ಡಾ.ಎಚ್. ಶಾಂತಾರಾಮ್ ವಹಿಸಲಿದ್ದಾರೆ.
ಬಳಿಕ ನಡೆಯುವ ವಿಚಾರ ಸಂಕಿರಣದಲ್ಲಿ ನಾಡಿನ ಸುಮಾರು 20ಕ್ಕೂ ಅಧಿಕ ಜಾನಪದ ವಿದ್ವಾಂಸರು ಪ್ರಬಂಧಗಳನ್ನು ಮಂಡಿಸಲಿರುವರು ಎಂದು ಆರ್ಆರ್ಸಿಯ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಲಾಗಿದೆ.





