ಕರ್ನಾಟಕದಲ್ಲಿ ಅರಾಜಕತೆ ಹೆಚ್ಚಾಗಿದೆ: ಪ್ರಕಾಶ್ ಜಾವಡೇಕರ್

ತುಮಕೂರು,ಫೆ.09: ರಾಜ್ಯದಲ್ಲಿ ಅರಾಜಕತೆ ಹೆಚ್ಚಾಗಿದೆ. ಈ ಬಗ್ಗೆ ವಿಧಾನಮಂಡಲದಲ್ಲಿ ವಿಪಕ್ಷಗಳ ಅಕ್ಷೇಪಣೆಗಳಿಗೆ ಉತ್ತರ ನೀಡದ ಪರಿಸ್ಥಿತಿಯಲ್ಲಿ ಇಲ್ಲಿನ ಮುಖ್ಯಮಂತ್ರಿಗಳು ಇದ್ದಾರೆ ಎಂದು ಬಿಜೆಪಿ ರಾಜ್ಯ ಉಸ್ತುವಾರಿ ಹಾಗೂ ಕೇಂದ್ರ ಸಚಿವ ಪ್ರಕಾಶ್ ಜಾವೆಡ್ಕರ್ ಆರೋಪಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಮುಖ್ಯಮಂತ್ರಿ ರಾಜ್ಯದ ಮಠಗಳು ಮತ್ತು ಅವುಗಳು ನಡೆಸುವ ಶಿಕ್ಷಣ ಸಂಸ್ಥೆಗಳ ಮೇಲೆ ಸರಕಾರ ಹತೋಟಿ ಪಡೆಯಲು ಧಾರ್ಮಿಕ ದತ್ತಿ ಕಾಯ್ದೆಗೆ ತಿದ್ದುಪಡಿ ತರಲು ಹೋಗಿ ಜನರು ಮತ್ತು ಮಠಾಧೀಶರಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ಅದೇ ರೀತಿ ಮೈಸೂರಿಗೆ ನಮ್ಮ ಪಕ್ಷದ ಅಧ್ಯಕ್ಷರಾದ ಅಮಿತ್ ಷಾ ಬರುವ ವೇಳೆ ಮತ್ತು ಪ್ರಧಾನಿಮಂತ್ರಿಗಳು ಬೆಂಗಳೂರಿಗೆ ಆಗಮಿಸುವ ದಿನವೇ ಬಂದ್ ಮಾಡುವಂತೆ ಕನ್ನಡಪರ ಸಂಘಟನೆಗಳಿಗೆ ಪ್ರಚೋದನೆ ನೀಡಿ ರಾಜ್ಯ ಹೈಕೋರ್ಟ್ ನಿಂದ ಛೀಮಾರಿ ಹಾಕಿಸಿಕೊಂಡಿದ್ದಾರೆ. ರಾಜ್ಯದಲ್ಲಿನ ಸರಕಾರ ಪ್ರಜಾಪ್ರಭುತ್ವ ನಿರ್ಧಾರಗಳನ್ನೇ ತೆಗೆದುಕೊಳ್ಳುವ ಮೂಲಕ ರಾಜ್ಯವನ್ನು ಅರಾಜಕತೆಯತ್ತ ತಳ್ಳುತ್ತಿದ್ದಾರೆ ಎಂದು ದೂರಿದರು.
ಕಾಂಗ್ರೆಸ್ ನಿಂದ ಪ್ರಧಾನಿಗೆ ಅಪಮಾನ: ಸಂಸತ್ತಿನಲ್ಲಿ ಪ್ರಧಾನಿ ನರೇಂದ್ರಮೋದಿ, ರಾಷ್ಟ್ರಪತಿಗಳ ಭಾಷಣದ ಮೇಲಿನ ಚರ್ಚೆಗೆ ಉತ್ತರಿಸಿದ ನಂತರ, ಕಾಂಗ್ರೆಸ್ ಪಕ್ಷದಲ್ಲಿ ಭೂಕಂಪನದ ಪರಿಸ್ಥಿತಿ ಉಂಟಾಗಿದೆ. ಪ್ರಧಾನಿ ಭಾಷಣ ಮಾಡುವ ವೇಳೆ ತಡೆಯಲು ಯತ್ನ ನಡೆಸಿ ಪ್ರಧಾನಿಗೆ ಅಪಮಾನ ಮಾಡಿದ್ದಾರೆ. ಭಾರತದ ಸಂಸತ್ತಿನ ಇತಿಹಾಸದಲ್ಲಿಯೇ ಮೊದಲ ಬಾರಿಗೆ ಸಂಸತ್ತಿನಲ್ಲಿ ಪ್ರಧಾನಿಗಳ ಭಾಷಣಕ್ಕೆ ಕಾಂಗ್ರೆಸ್ ಸದಸ್ಯರು ಅಡ್ಡಿಪಡಿಸಿದ ಘಟನೆ ನಡೆದಿದೆ. ಸ್ವಾತಂತ್ರ್ಯ ನಂತರ ಕಾಂಗ್ರೆಸ್ ಪಕ್ಷ ನಡೆದುಕೊಂಡ ರೀತಿಯನ್ನು ಪ್ರಧಾನಿಗಳು ಸಂಸತ್ತಿನಲ್ಲಿ ವಿವರಿಸಿದ ನಂತರ ಕಾಂಗ್ರೆಸಿಗರ ಬಣ್ಣ ಜನರ ಮುಂದೆ ಬಯಲಾಗಿದ್ದು, ಇದರಿಂದ ಕಾಂಗ್ರೆಸ್ಸಿಗರು ಭಯಭೀತರಾಗಿದ್ದಾರೆ ಎಂದರು.
ರಾಜ್ಯದಲ್ಲಿ ಪೊಲೀಸ್ ವ್ಯವಸ್ಥೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. 25 ಮಂದಿ ಸಂಘಪರಿವಾರದ ಕಾರ್ಯಕರ್ತರ ಹತ್ಯೆಯಾಗಿದೆ. ಇವರಲ್ಲಿ ಇಬ್ಬರು ಬಿಜೆಪಿಯ ಪರಿಶಿಷ್ಠ ಜಾತಿಯವರಾಗಿದ್ದಾರೆ. ಆದರೂ ರಾಜ್ಯದಲ್ಲಿ ಶಾಂತಿ ಸುವ್ಯವಸ್ಥೆ ಕಾಪಾಡುವಲ್ಲಿ, ಕೊಲೆಗಾರರನ್ನು ಬಂಧಿಸುವಲ್ಲಿ ಮುಖ್ಯಮಂತ್ರಿಯವರು ವಿಫಲರಾಗಿದ್ದಾರೆ ಎಂದು ದೂರಿದರು.
ಸಾಹಿತಿ ಕಲಬುರ್ಗಿ ಮತ್ತು ಪತ್ರಕರ್ತೆ ಗೌರಿ ಲಂಕೇಶ್ ರ ಕೊಲೆಗಾರರನ್ನು ಬಂಧಿಸಲು ಇವರಿಂದ ಇನ್ನೂ ಸಾಧ್ಯವಾಗಿಲ್ಲ. ರಾಜ್ಯದಲ್ಲಿನ ಕಾನೂನು ಸುವ್ಯವಸ್ಥೆ ಕದಡಲು ಮೂಲ ಕಾರಣರಾದ ರಾಷ್ಟ್ರ ವಿರೋಧಿ ಸಂಘಟನೆಗಳಾದ ಪಿ.ಎಫ್.ಐ.ಮತ್ತು ಎಸ್.ಡಿ.ಪಿ.ಐ. ಸಂಘಟನೆಗಳ ವಿರುದ್ದ ಕ್ರಮ ಕೈಗೊಳ್ಳುವುದನ್ನು ಬಿಟ್ಟು, ಅವರ ಜೊತೆಯಲ್ಲಿ ಸಖ್ಯ ಬೆಳೆಸುವ ಮೂಲಕ ರಾಜ್ಯದಲ್ಲಿ ಹಿಂದೂ ಸಂಘಟನೆಗಳ ಕಾರ್ಯಕರ್ತರ ಕೊಲೆಗಳು ಹೆಚ್ಚಾಗಲು ಈ ಸರಕಾರ ಕುಮ್ಮಕ್ಕು ನೀಡುತ್ತಿದೆ ಎಂದು ಆರೋಪಿಸಿದರು.
ಮಹಾರಾಷ್ಟ್ರ ಮತ್ತು ಉತ್ತರಪ್ರದೇಶಗಳಲ್ಲಿ ರಾಷ್ಟ್ರೀಯ ಬ್ಯಾಂಕುಗಳಲ್ಲಿನ ಸಾಲದ ಶೂಲದಿಂದ ರೈತರನ್ನು ಪಾರು ಮಾಡುವ ಸಲುವಾಗಿ ಆ ಸರಕಾರಗಳೇ ಸಾಲವನ್ನು ಬ್ಯಾಂಕುಗಳಿಗೆ ಪಾವತಿಸಿದರು. ಆದರೆ ಕರ್ನಾಟಕದ ಮುಖ್ಯಮಂತ್ರಿಯವರು ಮಾತ್ರ ಕೇಂದ್ರದತ್ತ ಬೆರಳು ತೋರಿಸುತ್ತಿದ್ದಾರೆ. ಇದು ಇವರ ರಾಜ್ಯದ ರೈತರ ಬಗೆಗಿನ ಕಾಳಜಿಯನ್ನು ತೋರಿಸುತ್ತದೆ ಎಂದರು.
ಮಹಾದಾಯಿ ನದಿ ನೀರಿನ ವಿವಾದದ ವಿಷಯವಾಗಿ ಪ್ರಸ್ತಾಪಿಸಿದ ಕೇಂದ್ರ ಸಚಿವರು, ಈಗಾಗಲೇ ಗೋವಾ ಮುಖ್ಯಮಂತ್ರಿಯವರು ರಾಜ್ಯಕ್ಕೆ ಕುಡಿಯುವ ಸಲುವಾಗಿ ನೀರು ಬಿಡಲು ಒಪ್ಪಿಗೆ ಸೂಚಿಸಿದ್ದಾರೆ. ಆದರೆ ಅದಕ್ಕೆ ಅಡ್ಡಿ ಪಡಿಸುತ್ತಿರುವವರು ಆ ರಾಜ್ಯದಲ್ಲಿ ವಿರೋಧ ಪಕ್ಷವಾಗಿರುವ ಕಾಂಗ್ರೆಸ್. ಹೀಗಿರುವಾಗ ಸಿದ್ಧರಾಮಯ್ಯ ತಮ್ಮ ಪಕ್ಷದ ರಾಷ್ಟ್ರೀಯ ಅಧ್ಯಕ್ಷರ ಮೂಲಕ ಆ ರಾಜ್ಯದ ಕಾಂಗ್ರೆಸ್ ನಾಯಕರನ್ನು ಮನವೊಲಿಸಿ ನೀರು ಬಿಡುವಂತೆ ಮಾಡಲಿ. ಅದಲ್ಲದೇ ಪ್ರಧಾನಿ ಮಧ್ಯಪ್ರವೇಶ ಮಾಡಬೇಕು ಎಂದು ಹೇಳುವುದು ಸರಿಯಲ್ಲ. ಬಿಜೆಪಿ ಮಾಡಬೇಕಾದದ್ದನ್ನು ಮಾಡಿ ಆಗಿದೆ. ನೀರು ಬಿಡಲು ಗೋವಾ ಮತ್ತು ಮಹಾರಾಷ್ಟ್ರದ ಮುಖ್ಯಮಂತ್ರಿಗಳನ್ನು ಒಪ್ಪಿಸಲಾಗಿದೆ ಎಂದರು.
ಪತ್ರಿಕಾಗೋಷ್ಠಿಯಲ್ಲಿ ಸಂಸದ ಹಾಗೂ ರಾಜ್ಯ ಬಿಜೆಪಿ ಮಾಜಿ ಅಧ್ಯಕ್ಷ ಪ್ರಹ್ಲಾದ ಜೋಷಿ, ಜಿಲ್ಲಾ ಬಿಜೆಪಿ ಅಧ್ಯಕ್ಷ ಜ್ಯೋತಿ ಗಣೇಶ್, ಹುಲಿನಾಯ್ಕರ್, ರಾಜ್ಯ ರೈತ ಮೋರ್ಚಾ ಉಪಾಧ್ಯಕ್ಷ ಎಸ್.ಶಿವಪ್ರಸಾದ್, ಶಾಸಕ ಸುರೇಶ್ಗೌಡ ಮತ್ತಿತರ ಮುಖಂಡರು ಉಪಸ್ಥಿತರಿದ್ದರು.







