ರವೀಂದ್ರ ಶ್ರೀಕಂಠಯ್ಯ ಪ್ರಚಾರಕ್ಕೆ ಎಚ್.ಡಿ.ರೇವಣ್ಣ ಸಾಥ್
ಮಂಡ್ಯ, ಫೆ.10: ಶ್ರೀರಂಗಪಟ್ಟಣ ವಿಧಾನಸಭಾ ಕ್ಷೇತ್ರದ ಕೊತ್ತತ್ತಿ ಹೋಬಳಿ ತೂಬಿನಕೆರೆ ಗ್ರಾಮ ಪಂಚಾಯತ್ ವ್ಯಾಪ್ತಿಯ ಎಲೆಚಾಕನಹಳ್ಳಿ ಗ್ರಾಮದಲ್ಲಿ ರವೀಂದ್ರ ಶ್ರೀಕಂಠಯ್ಯ ನೇತೃತ್ವದಲ್ಲಿ ನಡೆಯುತ್ತಿರುವ ಜೆಡಿಎಸ್ ಕಾರ್ಯಕರ್ತರ ಭೇಟಿಗೆ ಮಾಜಿ ಸಚಿವ ಎಚ್.ಡಿ.ರೇವಣ್ಣ ಸಾಥ್ ನೀಡಿದರು.
ಕಾಂಗ್ರೆಸ್ ತೊರೆದು ಜೆಡಿಎಸ್ ಟಿಕೆಟ್ ಆಕಾಂಕ್ಷಿತರಾಗಿರುವ ರವೀಂದ್ರ ಶ್ರೀಕಂಠಯ್ಯ ಕ್ಷೇತ್ರದಲ್ಲಿ ಪ್ರವಾಸಮಾಡಿ ಜೆಡಿಎಸ್ ಮುಖಂಡರನ್ನು ಭೇಟಿಯಾಗುತ್ತಿದ್ದು, ಶನಿವಾರ ರೇವಣ್ಣ ಪಾಲ್ಗೊಂಡು ಮತಯಾಚಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರೇವಣ್ಣ, ರವೀಂದ್ರ ಶ್ರೀಕಂಠಯ್ಯ ಕ್ಷೇತ್ರದಲ್ಲಿ ತಮ್ಮದೇಯಾದ ವರ್ಚಸ್ಸು ಹೊಂದಿದ್ದಾರೆ. ಎರಡು ಚುನಾವಣೆಯಲ್ಲಿ ಅವರಿಗೆ ಅನ್ಯಾಯವಾಗಿದ್ದು, ತಮ್ಮ ತಂದೆಯ ವರ್ಚಸ್ಸನ್ನು ಬಳಸಿಕೊಂಡು ಪ್ರಚಾರ ಮಾಡುತ್ತಿದ್ದಾರೆ. ಮತದಾರರು ಆಶೀರ್ವದಿಸಬೇಕು ಎಂದು ಮನವಿ ಮಾಡಿದರು.
ರಾಜ್ಯದಲ್ಲಿ ಜೆಡಿಎಸ್ ಪಕ್ಷ ಎಚ್.ಡಿ.ಕುಮಾರಸ್ವಾಮಿ ಹಾಗೂ ಎಚ್.ಡಿ.ದೇವೇಗೌಡರ ರೈತಪರ ಹೋರಾಟಕ್ಕೆ ಬೆಂಬಲ ನೀಡುವ ದೃಷ್ಟಿಯಿಂದ ಪಕ್ಷ ಸಂಘಟನೆ ಮಾಡುತ್ತಿದ್ದಾರೆ. ಎರಡೂ ರಾಷ್ಟ್ರೀಯ ಪಕ್ಷಗಳಿಂದ ರೈತರಿಗೆ ಅನ್ಯಾಯವಾಗಿದ್ದು, ನಾಲ್ಕು ವರ್ಷದಿಂದ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ಈ ಪಕ್ಷಗಳಿಗೆ ರೈತಪರ ಚಿಂತನೆಯಿಲ್ಲ. ಸಾಲದ ಸುಳಿಯಲ್ಲಿ ಸಿಲುಕಿರುವ ರೈತರು ಸಂಕಷ್ಟ ಎದುರಿಸುತ್ತಿದ್ದಾರೆ. ರೈತಪರವಾ ಪ್ರಾದೇಶಿಕ ಪಕ್ಷ ಜೆಡಿಎಸ್ ಬೆಂಬಲಿಸಬೇಕು ಎಂದು ಅವರು ಕೋರಿದರು.
ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದ ತಕ್ಷಣ ರೈತರ ಎಲ್ಲಾ ಸಾಲಮನ್ನಾ ಮಾಡುವುದಾಗಿ ಕುಮಾರಸ್ವಾಮಿ ಘೋಷಿಸಿದ್ದಾರೆ. ಅದೇ ರೀತಿ ಇಸ್ರೇಲ್ ಮಾದರಿಯ ಕೃಷಿ ಪ್ರಚುರಪಡಿಸಲಾಗುವುದು. ಸಂಕಷ್ಟದಲ್ಲಿರುವ ರೈತರಿಗೆ ಶಕ್ತಿ ತುಂಬಲಾಗುವುದು ಎಂದು ಅವರು ಭರವಸೆ ನೀಡಿದರು.
ಪುರಸಭೆ ಮಾಜಿ ಸದಸ್ಯ ಸಾಯಿಕುಮಾರ್, ಜೆಡಿಎಸ್ ರಾಜ್ಯ ಉಪಾಧ್ಯಕ್ಷ ಎಂ.ಸಂತೋಷ್, ಯು ಘಟಕದ ಜಿಲ್ಲಾಧ್ಯಕ್ಷ ಬೇಲೂರು ಶಶಿಧರ್, ವಕೀಲ ಕೆ.ಎಂ.ಬಸವರಾಜು, ಕೊತ್ತತ್ತಿ ರಾಜಣ್ಣ, ಅಶೋಕ್, ಲವಕುಮಾರ್, ಕಾಳೇನಹಳ್ಳಿ ತಿಮ್ಮೇಗೌಡ, ಗೋಪಾಲ್, ಆತ್ಮಾನಂದ, ಟಿ.ಡಿ.ಬಸವರಾಜು ಇತರ ಮುಖಂಡರು ಭಾಗವಹಿಸಿದ್ದರು.