ಮಂಡ್ಯ: ಫೆ.19 ರಂದು ಅಭ್ಯರ್ಥಿಗಳ ಆಯ್ಕೆಗೆ ಸಭೆ; ದ್ರುವನಾರಾಯಣ್
![ಮಂಡ್ಯ: ಫೆ.19 ರಂದು ಅಭ್ಯರ್ಥಿಗಳ ಆಯ್ಕೆಗೆ ಸಭೆ; ದ್ರುವನಾರಾಯಣ್ ಮಂಡ್ಯ: ಫೆ.19 ರಂದು ಅಭ್ಯರ್ಥಿಗಳ ಆಯ್ಕೆಗೆ ಸಭೆ; ದ್ರುವನಾರಾಯಣ್](https://www.varthabharati.in/sites/default/files/images/articles/2018/02/13/13MDY-3.jpg)
ಮಂಡ್ಯ, ಫೆ.13: ನಗರದ ಬಂದೀಗೌಡ ಬಡಾವಣೆಯಲ್ಲಿರುವ ಜಿಲ್ಲಾ ಕಾಂಗ್ರೆಸ್ ಕಚೇರಿಯಲ್ಲಿ ಕಾಂಗ್ರೆಸ್ ಉಸ್ತುವಾರಿ ಚಾಮರಾಜನಗರ ಸಂಸದ ಧೃವನಾರಾಯಣ್ ಅವರ ಅಧ್ಯಕ್ಷತೆಯಲ್ಲಿ ಕಾಂಗ್ರೆಸ್ ಸಮಿತಿ ಸಭೆ ನಡೆಯಿತು.
ಸಭೆಯನ್ನುದ್ದೇಶಿಸಿ ಮಾತನಾಡಿದ ಧೃವನಾರಾಯಣ್, ಮುಂದಿನ ವಿಧಾನಸಭಾ ಚುನಾವಣೆಗೆ ಅಭ್ಯರ್ಥಿಗಳ ಆಯ್ಕೆಗೆ ಸಂಬಂಧಿಸಿದಂತೆ ಕ್ಷೇತ್ರವಾರು ಅಭಿಪ್ರಾಯ ಸಂಗ್ರಹಿಸಲು ಫೆ.19ರಂದು ನಗರದಲ್ಲಿ ಸಭೆ ನಡೆಸಲಾಗುವುದು ಎಂದರು. ಸಿದ್ದರಾಮಯ್ಯ ನೇತೃತ್ವದ ರಾಜ್ಯ ಸರಕಾರ ಜನಪರ ಯೋಜನೆಗಳ ಮೂಲಕ ಉತ್ತಮ ಆಡಳಿತ ನಡೆಸಿದ್ದು, ಈ ಬಗ್ಗೆ ಜನಸಾಮಾನ್ಯರಿಗೆ ಜಾಗೃತಿ ಮೂಡಿಸುವ ಮೂಲಕ ಮತ್ತೆ ಅಧಿಕಾರಕ್ಕೆ ತರಲು ಶ್ರಮಿಸಬೇಕು ಎಂದು ಅವರು ಕರೆ ನೀಡಿದರು.
ಈಗಾಗಲೇ ಪಕ್ಷ, ಸಂಘಟನೆ ಕಾರ್ಯಕ್ರಮಗಳು ಚುರುಕುಗೊಂಡಿವೆ. ರಾಜ್ಯದಾದ್ಯಂತ ಕಾರ್ಯಕ್ರಮ, ಸಭೆಗಳನ್ನು ನಡೆಸಲಾಗುತ್ತಿದೆ. ಸಣ್ಣಪುಟ್ಟ ಭಿನ್ನಾಭಿಪ್ರಾಯಗಳನ್ನು ಬದಿಗೊತ್ತಿ ಪಕ್ಷದ ಗೆಲುವಿಗೆ ಶ್ರಮಿಸಬೇಕು ಎಂದು ಅವರು ಮುಖಂಡರಿಗೆ ಸಲಹೆ ನೀಡಿದರು.
ವೀಕ್ಷಕ ಹನುಮಂತರಾಯಪ್ಪ, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಎಂ.ಎಸ್.ಆತ್ಮಾನಂದ, ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಸಿ.ಡಿ.ಗಂಗಾಧರ್, ಮಹಿಳಾ ಘಟಕದ ಅಧ್ಯಕ್ಷೆ ಅಂಜನಾ ಶ್ರೀಕಾಂತ್, ಮಾಜಿ ಶಾಸಕರಾದ ಮಧು ಜಿ.ಮಾದೇಗೌಡ, ಕೆ.ಬಿ.ಚಂದ್ರಶೇಖರ್, ಮುಖಂಡ ಹಾಲಹಳ್ಳಿ ರಾಮಲಿಂಗಯ್ಯ ಸೇರಿದಂತೆ ಇತರರು ಉಪಸ್ಥಿತರಿದ್ದರು.