ಸೊಹ್ರಾಬುದ್ದೀನ್ ನಕಲಿ ಎನ್ಕೌಂಟರ್ ಪ್ರಕರಣ: ವಿಚಾರಣೆಗೆ ಹಾಜರಾಗುವಂತೆ ಆರೋಪಿಗಳಿಗೆ ನಿರ್ದೇಶ
ಹೊಸದಿಲ್ಲಿ, ಫೆ. 14: ಬುಧವಾರದಿಂದ ಎಲ್ಲರೂ ನ್ಯಾಯಾಲಯದಲ್ಲಿ ಹಾಜರಿರುವಂತೆ ಸೊಹ್ರಾಬುದ್ದೀನ್ ನಕಲಿ ಎನ್ಕೌಂಟರ್ ಪ್ರಕರಣದ ವಿಚಾರಣೆ ನಡೆಸುತ್ತಿರುವ ವಿಶೇಷ ಸಿಬಿಐ ನ್ಯಾಯಾಲಯ ಎಲ್ಲ ಆರೋಪಿಗಳಿಗೆ ನಿರ್ದೇಶಿಸಿದೆ. ಗುಜರಾತ್, ರಾಜಸ್ಥಾನ ಹಾಗೂ ಆಂಧ್ರಪ್ರದೇಶದ ಪೊಲೀಸರೇ ಹೆಚ್ಚಿನ ಸಂಖ್ಯೆಯಲ್ಲಿರುವ 22 ಆರೋಪಿಗಳು ವಿಚಾರಣೆ ಎದುರಿಸುತ್ತಿದ್ದಾರೆ. ಹೆಚ್ಚಿನವರು ತಮ್ಮ ಪರ ವಕೀಲರ ನ್ಯಾಯಾಲಯದಲ್ಲಿ ಹಾಜರಾಗುತ್ತಿದ್ದು, ತಮಗೆ ಹಾಜಾರಾ ಗುವುದರಿಂದ ವಿನಾಯಿತಿ ನೀಡುವಂತೆ ಕೋರಿದ್ದಾರೆ.
ಕೆಲವು ಆರೋಪಿಗಳ ಪರ ವಕೀಲರು ಇತರ ನ್ಯಾಯಾಲಯಗಳಲ್ಲಿ ತೊಡಗಿಕೊಂಡಿರುತ್ತಾರೆ ಹಾಗೂ ಗೈರು ಹಾಜರಾಗುತ್ತಿದ್ದಾರೆ. ಇದರಿಂದ ನ್ಯಾಯಾಲಯ ವಕೀಲರಿಗಾಗಿ ಕಾಯಬೇಕಾಗುತ್ತದೆ. ಅಲ್ಲದೆ, ಆರೋಪಿಗಳ ಗುರುತು ಪರಿಶೀಲಿಸಲು ಸಾಕ್ಷಿಗಳನ್ನು ವಿಚಾರಣೆ ನಡೆಸಬೇಕಾದ ಅಗತ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕೂಡ ಆರೋಪಿಗಳು ನ್ಯಾಯಾಲಯಕ್ಕೆ ಹಾಜರಾಗುವ ಅಗತ್ಯ ಇದೆ. ಆದೇಶ ಪಾಲಿಸದಿದ್ದರೆ ಗಂಭೀರವಾಗಿ ಪರಿಗಣಿಸಲಾಗುವುದು ಎಂದು ವಿಶೇಷ ನ್ಯಾಯಮೂರ್ತಿ ಎಸ್.ಜೆ. ಶರ್ಮಾ ಹೇಳಿದ್ದಾರೆ.
ಪ್ರಾಸಿಕ್ಯೂಶನ್ ಮಂಗಳವಾರ ಆರೋಪಿಗಳನ್ನು ಪಾಟಿ ಸವಾಲಿಗೆ ಒಳಪಡಿಸಲು ಆರೋಪಿಗಳ ಪರ ವಕೀಲರಿಗಾಗಿ ಕಾದ ಬಳಿಕ ನ್ಯಾಯಾಲಯ ಈ ನಿರ್ದೇಶನ ನೀಡಿದೆ.