ಜೆಡಿಎಸ್-ಬಿಎಸ್ಪಿ ಮೈತ್ರಿಯಿಂದ ಕಾಂಗ್ರೆಸ್ ಗೆಲುವು ತಡೆಯಲು ಸಾಧ್ಯವಿಲ್ಲ: ಸಿದ್ದರಾಮಯ್ಯ

ರಾಯಚೂರು, ಫೆ.18: ಮುಂಬರುವ ವಿಧಾನಸಭಾ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ಹಾಗೂ ಬಿಎಸ್ಪಿ ಮಾಡಿಕೊಂಡಿರುವ ಮೈತ್ರಿಯು, ಕಾಂಗ್ರೆಸ್ ಪಕ್ಷದ ಗೆಲುವನ್ನು ತಡೆಯಲು ಸಾಧ್ಯವಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ರವಿವಾರ ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ ವಿವಿಧ ಅಭಿವೃದ್ಧಿ ಕಾರ್ಯಗಳ ಉದ್ಘಾಟನಾ ಸಮಾರಂಭಕ್ಕೆ ಆಗಮಿಸಿದ್ದ ವೇಳೆ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ರಾಜ್ಯ ಸರಕಾರವು ಹಲವಾರು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಎಲ್ಲ ವರ್ಗಗಳ ಅಭಿವೃದ್ಧಿಗೂ ಆದ್ಯತೆ ನೀಡಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಅವಧಿಗೂ ನಾವೇ ಅಧಿಕಾರಕ್ಕೆ ಬರುತ್ತೇವೆ ಎಂದರು.
ಸಮಾಜದಲ್ಲಿರುವ ಶೋಷಿತರು, ಹಿಂದುಳಿದವರನ್ನು ಮುಖ್ಯವಾಹಿನಿಗೆ ತರಲು ನಮ್ಮ ಸರಕಾರ ಪ್ರಾಮಾಣಿಕ ಪ್ರಯತ್ನ ಪಟ್ಟಿದೆ. ಸರ್ವರಿಗೂ ಸಮಪಾಲು, ಸರ್ವರಿಗೂ ಸಮಬಾಳು, ಸಾಮಾಜಿಕ ನ್ಯಾಯದ ಪರಿಕಲ್ಪನೆಯಲ್ಲಿ ನಾವು ಕೆಲಸ ಮಾಡಿದ್ದೇವೆ. ಹೀಗಾಗಿ, ಜೆಡಿಎಸ್-ಬಿಎಸ್ಪಿ ಹೊಂದಾಣಿಕೆ ಮಾಡಿಕೊಂಡ ಕೂಡಲೆ ಕಾಂಗ್ರೆಸ್ಗೆ ಹಾನಿಯಾಗುತ್ತದೆ ಎಂದು ಭಾವಿಸುವುದು ಸರಿಯಲ್ಲ ಎಂದು ಅವರು ಹೇಳಿದರು.
ರಾಜ್ಯದಲ್ಲಿ ಈ ಹಿಂದೆ ಆಡಳಿತ ನಡೆಸಿದ ಯಾವ ಸರಕಾರಗಳು ಪತ್ರಕರ್ತರ ಬೇಡಿಕೆಗಳನ್ನು ಪರಿಗಣನೆಗೆ ತೆಗೆದುಕೊಂಡಿರಲಿಲ್ಲ. ಆದರೆ, ನಮ್ಮ ಸರಕಾರವು ಪ್ರಜಾಪ್ರಭುತ್ವದ ನಾಲ್ಕನೆ ಅಂಗವಾಗಿರುವ ಮಾಧ್ಯಮ ಕ್ಷೇತ್ರವನ್ನು ಗುರುತಿಸಿ, ಪತ್ರಕರ್ತರಿಗಾಗಿ ಹಲವಾರು ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೆ ತಂದಿದೆ. ಮಾಧ್ಯಮ ಸಂಜೀವಿನಿ, ರಾಜೀವ್ ಆರೋಗ್ಯ ಭಾಗ್ಯ, ಪತ್ರಿಕಾ ವಿತರಕರ ಕ್ಷೇಮ ನಿಧಿ, ಗ್ರಾಮೀಣ ಪತ್ರಕರ್ತರಿಗೆ ಉಚಿತ ಬಸ್ಪಾಸ್ ಸೇರಿದಂತೆ ಹಲವಾರು ಯೋಜನೆಗಳನ್ನು ನಮ್ಮ ಸರಕಾರ ಜಾರಿಗೆ ತಂದಿದೆ ಎಂದು ಮುಖ್ಯಮಂತ್ರಿ ತಿಳಿಸಿದರು.
ಮಸ್ಕಿ ವಿಧಾನಸಭಾ ಕ್ಷೇತ್ರದಲ್ಲಿ 1557 ಕೋಟಿ ರೂ. ವೆಚ್ಚದ 116 ಕಾಮಗಾರಿಗಳಿಗೆ ಶಂಕುಸ್ಥಾಪನೆ ನೆರವೇರಿಸಿದ ಸಿದ್ದರಾಮಯ್ಯ, 560 ಕೋಟಿ ರೂ.ವೆಚ್ಚದಲ್ಲಿ ಪೂರ್ಣಗೊಂಡ 326 ಕಾಮಗಾರಿಗಳಿಗೆ ಚಾಲನೆ ನೀಡಿದ್ದಾರೆ. ಈ ಸಂದರ್ಭದಲ್ಲಿ ರಾಯಚೂರು ಜಿಲ್ಲಾ ಉಸ್ತುವಾರಿ ಸಚಿವ ಎಚ್.ಎಂ.ರೇವಣ್ಣ, ಶಾಸಕ ಪ್ರತಾಪ್ ಗೌಡ ಪಾಟೀಲ್ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.







