ವಿಜ್ಞಾನವು ಕಬ್ಬಿಣದ ಕಲೆಯಲ್ಲ: ಡಾ.ಎಸ್.ಬಿ.ಬೊಮ್ಮನಹಳ್ಳಿ
![ವಿಜ್ಞಾನವು ಕಬ್ಬಿಣದ ಕಲೆಯಲ್ಲ: ಡಾ.ಎಸ್.ಬಿ.ಬೊಮ್ಮನಹಳ್ಳಿ ವಿಜ್ಞಾನವು ಕಬ್ಬಿಣದ ಕಲೆಯಲ್ಲ: ಡಾ.ಎಸ್.ಬಿ.ಬೊಮ್ಮನಹಳ್ಳಿ](/images/placeholder.jpg)
ಧಾರವಾಡ, ಮಾ.1:ವಿಜ್ಞಾನದಲ್ಲಿ ದಿನೇ ದಿನೇ ಹೊಸ ಸಂಶೋಧನೆಗಳು ನಡೆಯುತ್ತಿರುತ್ತವೆ. ವಿಜ್ಞಾನವು ಕಬ್ಬಿಣದ ಕಡಲೆಯಲ್ಲ, ವಿಜ್ಞಾನದ ಬಗ್ಗೆ ಎಲ್ಲರೂ ತಿಳಿದುಕೊಳ್ಳುವ ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಎಸ್.ಬಿ.ಬೊಮ್ಮನಹಳ್ಳಿ ಹೇಳಿದ್ದಾರೆ.
ಗುರುವಾರ ನಗರದ ರಂಗಾಯಣದ ಸುವರ್ಣ ಸಾಂಸ್ಕೃತಿಕ ಸಮುಚ್ಚಯದಲ್ಲಿ ಧಾರವಾಡ ಪ್ರಾದೇಶಿಕ ವಿಜ್ಞಾನ ಕೇಂದ್ರ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಇಲಾಖೆ, ಕರ್ನಾಟಕ ವಿಜ್ಞಾನ ಮತ್ತು ತಂತ್ರಜ್ಞಾನ ಪ್ರೋತ್ಸಾಹ ಸೊಸೈಟಿ ಸಹಯೋಗದಲ್ಲಿ ಆಯೋಜಿಸಿದ್ದ ವಿಭಾಗ ಮಟ್ಟದ ವಿಜ್ಞಾನ ನಾಟಕ ಸ್ಪರ್ಧೆಯನ್ನು ಸಸಿಗೆ ನೀರು ಹಾಕುವ ಮೂಲಕ ಉದ್ಘಾಟಿಸಿ ಅವರು ಮಾತನಾಡಿದರು.
ವಿಜ್ಞಾನ ಕೆಲವರ ಸ್ವತ್ತಲ್ಲ, ವಿಜ್ಞಾನದ ಎಲ್ಲ ಆಯಾಮಗಳನ್ನು ಎಲ್ಲರೂ ತಿಳಿದುಕೊಳ್ಳಬೇಕು. ಮೂಢನಂಬಿಕೆ, ಅನಾಚಾರ, ತಪ್ಪುಕಲ್ಪನೆಗಳನ್ನು ತೊಡೆದುಹಾಕಿ, ಸಮಾಜವನ್ನು ಸುಧಾರಿಸಲು ವಿಜ್ಞಾನ ಸಹಾಯಕವಾಗುತ್ತದೆ. ನಾಟಕ ಕಲೆಯನ್ನು ವಿದ್ಯಾರ್ಥಿಗಳು ಜೀವನದುದ್ದಕ್ಕೂ ಬೆಳೆಸಿಕೊಂಡು ಹೋಗಬೇಕು. ಕಲೆಗಳನ್ನು ಪ್ರೋತ್ಸಾಹಿಸಿ ಬೆಳೆಸುವ ಕೆಲಸಗಳಾಗಬೇಕು ಎಂದು ಅವರು ಹೇಳಿದರು.
ಮಾಜಿ ಶಾಸಕ ಚಂದ್ರಕಾಂತ ಬೆಲ್ಲದ ಮಾತನಾಡಿ, ಧಾರವಾಡವು ಶೈಕ್ಷಣಿಕ ಕೇಂದ್ರವಾಗಿದೆ. ನವಮಾಧ್ಯಮಗಳ ಮೂಲಕ ವಿಜ್ಞಾನದ ಬಗ್ಗೆ ತಿಳಿಸುವ ಕಾರ್ಯಗಳು ಆಗಬೇಕು. ವಿಜ್ಞಾನದ ಬೆಳವಣಿಗೆಗೆ ವಿಜ್ಞಾನಿಗಳ ಕೊಡುಗೆ ಅಪಾರವಾಗಿದೆ ಎಂದರು.
ಮಕ್ಕಳ ಬೆಳವಣಿಗೆಯಲ್ಲಿ ವಿಜ್ಞಾನ ಪ್ರಮುಖ ಪಾತ್ರವನ್ನು ನಿರ್ವಹಿಸುತ್ತಿದೆ. ಮಹಿಳೆಯರು ಎಲ್ಲ ಕ್ಷೇತ್ರಗಳಲ್ಲಿ ಸಾಧನೆ ಮಾಡುತ್ತಿದ್ದಾರೆ. ಮಾನವ ಮತ್ತು ಸಮಾಜದ ಕಲ್ಯಾಣಕ್ಕೆ ವಿಜ್ಞಾನವು ಪೂರಕವಾಗಬೇಕೆ ಹೊರತು ಮಾರಕವಾಗಬಾರದು ಎಂದು ಅವರು ಹೇಳಿದರು.
ರಂಗಕರ್ಮಿ, ನಟ ಯಶವಂತ ಸರದೇಶಪಾಂಡೆ ಮಾತನಾಡಿ, ಶಿಕ್ಷಕರು ಮಕ್ಕಳಿಗೆ ವಿಜ್ಞಾನ ವಿಷಯವನ್ನು ಅವರ ಬೌದ್ಧಿಕ ಮಟ್ಟಕ್ಕೆ ಇಳಿದು ಬೋಧಿಸಬೇಕು. ಬದುಕಿನ ಪ್ರತಿ ಹೆಜ್ಜೆಯಲ್ಲಿ ವಿಜ್ಞಾನವಿದೆ. ನಾಟಕಗಳು ನಿತ್ಯನೂತನವಾಗಿರುತ್ತವೆ. ನಾಟಕಗಳಿಂದ ಸಮಾಜದ ಬದಲಾವಣೆ ಸಾಧ್ಯ ಎಂದರು.
ಕಾರ್ಯಕ್ರಮದಲ್ಲಿ ಪ್ರಾದೇಶಿಕ ವಿಜ್ಞಾನ ಕೇಂದ್ರದ ನಿರ್ದೇಶಕ ಡಾ.ಕೆ.ಬಿ.ಗುಡಸಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ಸಿದ್ದಲಿಂಗೇಶ ರಂಗಣ್ಣ ಸೇರಿದಂತೆ ಇನ್ನಿತರರು ಉಪಸ್ಥಿತರಿದ್ದರು.