ಕರುನಾಡಿಗೆ ಪ್ರತ್ಯೇಕ ನಾಡಧ್ವಜಕ್ಕೆ ಕನ್ನಡ ಸಂಘಟನೆಗಳು ಅಸ್ತು
![ಕರುನಾಡಿಗೆ ಪ್ರತ್ಯೇಕ ನಾಡಧ್ವಜಕ್ಕೆ ಕನ್ನಡ ಸಂಘಟನೆಗಳು ಅಸ್ತು ಕರುನಾಡಿಗೆ ಪ್ರತ್ಯೇಕ ನಾಡಧ್ವಜಕ್ಕೆ ಕನ್ನಡ ಸಂಘಟನೆಗಳು ಅಸ್ತು](/images/placeholder.jpg)
ಬೆಂಗಳೂರು, ಮಾ.8: ಕನ್ನಡಿಗರ ಆಶಯ, ಅಭಿಪ್ರಾಯಕ್ಕೆ ಧ್ವನಿಯಾಗುವ ಮೂಲಕ ರಾಜ್ಯಕ್ಕೆ ಪ್ರತ್ಯೇಕ ನಾಡಧ್ವಜ ಬೇಕು ಎಂಬ ಸರಕಾರದ ಐತಿಹಾಸಿಕ ನಿರ್ಣಯಕ್ಕೆ ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿರಿಯ ಸಾಹಿತಿಗಳ ಒಕ್ಕೊರಲ ಬೆಂಬಲ ದೊರೆತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸರಕಾರ ರಚನೆ ಮಾಡಿದ್ದ ಸಮಿತಿ ಸಿದ್ಧಪಡಿಸಿರುವ ನಾಡಧ್ವಜದ ವಿನ್ಯಾಸದ ಬಗ್ಗೆ ಚರ್ಚಿಸಲು ಗೃಹ ಕಚೇರಿ ಕೃಷ್ಣಾದಲ್ಲಿ ಗುರುವಾರ ಮುಖ್ಯಮಂತ್ರಿ, ರಾಜ್ಯದ ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿರಿಯ ಸಾಹಿತಿಗಳ ಸಭೆ ಕರೆದಿದ್ದರು.
ನಾಡಧ್ವಜ ಮತ್ತು ಅದರ ವಿನ್ಯಾಸ ಕುರಿತು ಸಭೆಯಲ್ಲಿ ಸುದೀರ್ಘ ಚರ್ಚೆ ನಡೆಯಿತು. ಧ್ವಜ ಮತ್ತು ವಿನ್ಯಾಸಕ್ಕೆ ಸಭೆಯಲ್ಲಿ ಮುಖಂಡರು ಹಾಗೂ ಸಾಹಿತಿಗಳು ತಮ್ಮ ಸಹಮತ ಸೂಚಿಸಿ ಸರಕಾರದ ನಿರ್ಧಾರವನ್ನು ಮುಕ್ತಕಂಠದಿಂದ ಪ್ರಶಂಸಿಸಿದರು.
ರಾಜ್ಯಕ್ಕೆ ಒಂದು ನಾಡಧ್ವಜ ಬೇಕು ಎಂಬ ಚರ್ಚೆ ಮೊದಲಿನಿಂದಲೂ ನಡೆಯುತ್ತಿತ್ತು. ಇದು ಕನ್ನಡಿಗರ ಅಪೇಕ್ಷೆಯೂ ಆಗಿತ್ತು. ಅದಕ್ಕೆ ನಮ್ಮ ಸರಕಾರ ಧ್ವನಿಯಾಗುವುದರ ಜೊತೆಗೆ ರಾಜ್ಯಕ್ಕೆ ನಮ್ಮದೇ ಆದ ನಾಡಧ್ವಜ ಬೇಕು ಎಂಬ ಐತಿಹಾಸಿಕ ನಿರ್ಣಯವನ್ನು ಕೈಗೊಂಡಿದೆ ಎಂದು ಮುಖ್ಯಮಂತ್ರಿ ಸಭೆಯ ಬಳಿಕ ಸುದ್ದಿಗೋಷ್ಠಿಯಲ್ಲಿ ಹೇಳಿದರು.
ಹಿರಿಯ ಸಾಹಿತಿಗಳು ಹಾಗೂ ಕನ್ನಡಪರ ಹೋರಾಟಗಾರರೂ ಆಗಿರುವ ಪಾಟೀಲ ಪುಟ್ಟಪ್ಪ ನಾಡಧ್ವಜ ಬೇಕು ಎಂಬ ಅಭಿಪ್ರಾಯ ವ್ಯಕ್ತಪಡಿಸಿ ಸರಕಾರಕ್ಕೆ ಪತ್ರ ಬರೆದದ್ದರು. ಈ ಹಿನ್ನೆಲೆಯಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಕಾರ್ಯದರ್ಶಿ ಅಧ್ಯಕ್ಷತೆಯಲ್ಲಿ ಹಿರಿಯ ಸಾಹಿತಿಗಳು ಮತ್ತು ಕನ್ನಡಪರ ಸಂಘಟನೆಗಳ ಮುಖಂಡರನ್ನು ಒಳಗೊಂಡ ಒಂದು ಸಮಿತಿ ರಚಿಲಾಗಿತ್ತು ಎಂದು ಅವರು ತಿಳಿಸಿದರು.
ಕಾನೂನು ಪರಿಸ್ಥಿತಿ, ಸಂವಿಧಾನದಲ್ಲಿ ಇರುವ ಅವಕಾಶ, ನಮ್ಮ ಕನ್ನಡ ಬಾವುಟದ ಬಗ್ಗೆ ಇರುವ ಇತಿಹಾಸ ಈ ಎಲ್ಲದರ ಬಗ್ಗೆ ಸಮಿತಿ ಅಧ್ಯಯನ ಮಾಡಿ ನಾಡಧ್ವಜ ಮತ್ತು ಅದರ ವಿನ್ಯಾಸ ಕುರಿತು ಸರಕಾರಕ್ಕೆ ವರದಿ ಕೊಟ್ಟಿದೆ. ಆ ವರದಿಯನ್ನು ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಮಂಡಿಸಿದಾಗ ಪ್ರತ್ಯೇಕ ಧ್ವಜ ನಮಗೆ ಬೇಕು ಎಂಬ ಅಭಿಪ್ರಾಯ ವ್ಯಕ್ತವಾಯಿತು ಎಂದು ಸಿದ್ದರಾಮಯ್ಯ ಹೇಳಿದರು.
ಈ ಕುರಿತು ಕನ್ನಡಪರ ಸಂಘಟನೆಗಳ ಮುಖಂಡರ ಅಭಿಪ್ರಾಯ ಪಡೆದು ತೀರ್ಮಾನ ಕೈಗೊಳ್ಳುವ ಜವಾಬ್ದಾರಿಯನ್ನು ಸಂಪುಟ ತಮಗೆ ವಹಿಸಿತ್ತು. ಈ ಹಿನ್ನೆಲೆಯಲ್ಲಿ ಇಂದು ಸಭೆ ಕರೆದು ಚರ್ಚಿಸಲಾಗಿದ್ದು, ಸಮಿತಿ ಸಿದ್ಧಪಡಿಸಿರುವ ನಾಡಧ್ವಜ ಮತ್ತು ಅದರ ವಿನ್ಯಾಸಕ್ಕೆ ಸಹಮತ ವ್ಯಕ್ತವಾಗಿದೆ ಎಂದು ಅವರು ತಿಳಿಸಿದರು.
ಕನ್ನಡ ಬಾವುಟದಲ್ಲಿನ ಹಳದಿ ಮತ್ತು ಕೆಂಪು ಬಣ್ಣದ ಜೊತೆಗೆ ಶಾಂತಿಯ ಸಂಕೇತವಾದ ಬಿಳಿಯ ಬಣ್ಣವನ್ನು ಸೇರಿಸಿಕೊಂಡು ನಾಡಧ್ವಜದ ವಿನ್ಯಾಸ ರಚಿಸಲಾಗಿದೆ. ಬಿಳಿಯ ಬಣ್ಣದ ಮಧ್ಯಭಾಗದಲ್ಲಿ ಸರಕಾರದ ಲಾಂಛನ ಇರಲಿದೆ ಎಂದು ಮುಖ್ಯಮಂತ್ರಿ ವಿವರಿಸಿದರು.
ಇದು ಐಸಿಹಾಸಿಕ ನಿರ್ಣಯ. ಈ ನಿರ್ಧಾರ ಮಾಡುವಾಗ ಯಾವುದೇ ಒಡಕಿನ ಧ್ವನಿ ಇರಬಾರದು. ಒಮ್ಮತದಿಂದ ನಿರ್ಧಾರವಾಗಬೇಕು ಎಂಬ ಕಾರಣಕ್ಕೆ ಕನ್ನಡಪರ ಸಂಘಟನೆಗಳ ಮುಖಂಡರು ಹಾಗೂ ಹಿರಿಯ ಸಾಹಿತಿಗಳ ಸಭೆ ಕರೆಯಲಾಗಿತ್ತು ಎಂದು ಅವರು ಹೇಳಿದರು.
ಆದರೆ, ನಾಡಧ್ವಜವನ್ನು ನಾವೇ ಘೋಷಣೆ ಮಾಡುವಂತಿಲ್ಲ. ಅದಕ್ಕೆ ಕೇಂದ್ರದ ಒಪ್ಪಿಗೆ ಬೇಕು. ಹೀಗಾಗಿ ಕೇಂದ್ರಕ್ಕೆ ಕೂಡಲೆ ಪ್ರಸ್ತಾವನೆ ಸಲ್ಲಿಸಲಾಗುವುದು. ನಾಡಧ್ವಜಕ್ಕೆ ಒಪ್ಪಿಗೆ ಸೂಚಿಸುವಂತೆ ಕೇಂದ್ರದ ಮೇಲೆ ಒತ್ತಡ ಹೇರಲಾಗುವುದು ಎಂದು ಸಿದ್ದರಾಮಯ್ಯ ತಿಳಿಸಿದರು.
ಇಡೀ ದೇಶದಲ್ಲಿ ಮೊದಲ ಬಾರಿಗೆ ಕನ್ನಡ ನಾಡಿನ ಅಸ್ಮಿತೆಗಾಗಿ ರಾಜ್ಯಕ್ಕೆ ತನ್ನದೇ ಆದ ನಾಡಧ್ವಜ ಇರಲಿದೆ. ಯಾವುದೇ ರಾಜ್ಯ ಪ್ರತ್ಯೇಕ ಧ್ವಜ ಹೊಂದಲು ಸಂವಿಧಾನದಲ್ಲಿ ವಿರೋಧ ಇಲ್ಲ. ಜೊತೆಗೆ ರಾಷ್ಟ್ರಧ್ವಜಕ್ಕಿಂತ ಕೆಳಗೆ ನಾಡಧ್ವಜ ಹಾರಾಡಲಿದೆ ಎಂದು ಮುಖ್ಯಮಂತ್ರಿ ಹೇಳಿದರು.
ಸಭೆಯಲ್ಲಿ ಅಬಕಾರಿ ಸಚಿವ ಆರ್.ಬಿ.ತಿಮ್ಮಾಪುರ್, ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ, ಕನ್ನಡ ಸಾಹಿತ್ಯ ಪರಿಷತ್ ಅಧ್ಯಕ್ಷ ಮನುಬಳಿಗಾರ್, ಕನ್ನಡಪರ ಹೋರಾಟಗಾರರು, ಸಾಹಿತಿಗಳು ಪಾಲ್ಗೊಂಡಿದ್ದರು.